ಕೇಂದ್ರಕ್ಕೆ ಸೆಡ್ಡು: ವಂದೇ ಮಾತರಂ ಗೀತೆ ಗಾಯನದ ಬಗ್ಗೆ ಕರ್ನಾಟಕ ಸರ್ಕಾರದಿಂದ ಮಹತ್ವದ ಆದೇಶ
ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ 6 ಚರಣಗಳ ಬದಲು ಕೇವಲ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಕರ್ನಾಟಕ ಸರ್ಕಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಿದೆ. ಆ ಮೂಲಕ ಗೀತೆಯ 6 ಚರಣಗಳನ್ನು ಹಾಡಬೇಕೆಂಬ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ರಾಜ್ಯ ಸೆಡ್ಡು ಹೊಡೆದಿದ್ದು, ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು, ಸೆಪ್ಟೆಂಬರ್ 10: ವಂದೇ ಮಾತರಂ ಗೀತೆಯ ಗಾಯನ ಸಂಬಂಧ ಕೇಂದ್ರದ ನಿರ್ಧಾರಕ್ಕೆ ಕರ್ನಾಟಕ ಸರ್ಕಾರ ಸೆಡ್ಡು ಹೊಡೆದಿದ್ದು, 6 ಚರಣಗಳ ಬದಲು ರಾಜ್ಯ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕೇವಲ ಎರಡೇ ಚರಣ ಹಾಡಲು ಆದೇಶಿಸಿದೆ. 1937ರ ನಿರ್ಣಯದಂತೆ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವುದಾಗಿ ಕಾಂಗ್ರೆಸ್ ಹೈಕಮಾಂಡ್ ನಾಯಕರು ಅಭಿಪ್ರಾಯಪಟ್ಟಿದ್ದ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಕೂಡ ವಂದೇ ಮಾತರಂ ಗೀತೆಯ 6 ಪ್ಯಾರಾಗಳನ್ನು ಹಾಡಲು ಆಕ್ಷೇಪ ತೆಗೆದಿದ್ದರು ಎಂಬುದಿಲ್ಲಿ ಗಮನಾರ್ಹ.
ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ?
ಭಾರತದ ರಾಷ್ಟ್ರೀಯ ಚಳವಳಿಯ ಸಂದರ್ಭದಲ್ಲಿ ದೇಶದ ಜನರಲ್ಲಿ ರಾಷ್ಟ್ರೀಯತೆ, ಏಕತೆ ಮತ್ತು ದೇಶಭಕ್ತಿಯ ಭಾವನೆಯನ್ನು ಮೂಡಿಸುವಲ್ಲಿ ‘ವಂದೇ ಮಾತರಂ’ ಗೀತೆಯು ಮಹತ್ವದ ಪಾತ್ರವನ್ನು ವಹಿಸಿರುತ್ತದೆ. ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯವು ವಂದೇ ಮಾತರಂ ರಾಷ್ಟ್ರೀಯ ಗೀತೆಯ ಅಧಿಕೃತ ಆವೃತ್ತಿ ಹಾಗೂ ವಿವಿಧ ಸರ್ಕಾರಿ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅದರ ಗಾಯನ ಅಥವಾ ವಾದನಕ್ಕೆ ಸಂಬಂಧಿಸಿದಂತೆ ಸಂದರ್ಭಾನುಸಾರ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಆ ಮಾರ್ಗಸೂಚಿಗಳಲ್ಲಿ ರಾಷ್ಟ್ರೀಯ ಗೀತೆಯ ವಾದನ (Playing) ಮತ್ತು ಸಾಮೂಹಿಕ ಗಾಯನ(Mass Singing)ಕ್ಕೆ ಸಂಬಂಧಿಸಿದ ಸಂದರ್ಭಗಳನ್ನು ಪ್ರತ್ಯೇಕವಾಗಿ ನಿರ್ದಿಷ್ಟಪಡಿಸಲಾಗಿದೆ. ರಾಜ್ಯದಲ್ಲಿ ನಡೆಯುವ ವಿವಿಧ ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಮಾರಂಭಗಳ ಸ್ವರೂಪ ಹಾಗೂ ಸಂದರ್ಭಕ್ಕೆ ಅನುಗುಣವಾಗಿ ಗೀತೆಯ ವಾದನ/ಗಾಯನಕ್ಕೆ ಸಂಬಂಧಿಸಿದಂತೆ ಏಕರೂಪತೆ, ಗೌರವ ಮತ್ತು ಸೂಕ್ತ ಶಿಷ್ಟಾಚಾರವನ್ನು ಕಾಯ್ದುಕೊಳ್ಳುವ ಅಗತ್ಯವನ್ನು ಸರ್ಕಾರವು ಪರಿಗಣಿಸಿದೆ.
ಇದನ್ನೂ ಓದಿ: ವಂದೇ ಮಾತರಂ ಗೀತೆಗೆ ಎದ್ದುನಿಂತ ಫಾರೂಕ್-ಒಮರ್ ಅಬ್ದುಲ್ಲಾ: ಕಾಂಗ್ರೆಸ್ ಅಸಮಾಧಾನ, ನಮ್ಮ ಮೇಲೆ ಷರತ್ತು ಹೇರಬೇಡಿ ಎಂದ ಎನ್ಸಿ
ಈ ಹಿನ್ನೆಲೆಯಲ್ಲಿ, ಸಚಿವ ಸಂಪುಟದ ತೀರ್ಮಾನದಂತೆ ರಾಷ್ಟ್ರಪತಿಗಳು, ಉಪ ರಾಷ್ಟ್ರಪತಿಗಳು, ಪ್ರಧಾನಮಂತ್ರಿಗಳು ಹಾಗೂ ರಾಜ್ಯಪಾಲರು ಉಪಸ್ಥಿತರಿರುವ ಕಾರ್ಯಕ್ರಮಗಳನ್ನು ಹೊರತುಪಡಿಸಿ, ರಾಜ್ಯ ಸರ್ಕಾರದ ಉಳಿದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಸಂದೀಪ್ ಬಿ.ಕೆ. ಅವರ ಆದೇಶದಲ್ಲಿ ತಿಳಿಸಲಾಗಿದೆ.




