ಸರ್ಕಾರಿ ಶಾಲೆಗಳನ್ನು ಕಾರ್ಪೊರೇಟ್ಗಳಿಗೆ ದತ್ತು ನೀಡಲು ಸರ್ಕಾರದ ನಿರ್ಧಾರ: ಶಿಕ್ಷಣ ತಜ್ಞರು, ಪೋಷಕರಿಂದ ವ್ಯಾಪಕ ವಿರೋಧ
ಕರ್ನಾಟಕ ಸರ್ಕಾರದ ಸರ್ಕಾರಿ ಶಾಲೆಗಳನ್ನು ಕಾರ್ಪೊರೇಟ್/ಖಾಸಗಿ ಸಂಸ್ಥೆಗಳಿಗೆ ದತ್ತು ನೀಡುವ ನಿರ್ಧಾರಕ್ಕೆ ಶಿಕ್ಷಣ ತಜ್ಞರು, ಪೋಷಕರು ಮತ್ತು ವಿದ್ಯಾರ್ಥಿ ಸಂಘಟನೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಇದು ಸಾರ್ವಜನಿಕ ಶಿಕ್ಷಣದ ಆಶಯಕ್ಕೆ ವಿರುದ್ಧವಾಗಿದ್ದು, ಲಾಭಕ್ಕಾಗಿ ಶಿಕ್ಷಣವನ್ನು ಮಾರಾಟ ಮಾಡುವ ಹುನ್ನಾರ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ. ಸರ್ಕಾರವೇ ಶಾಲೆಗಳನ್ನು ಅಭಿವೃದ್ಧಿಪಡಿಸಲು ಹೆಚ್ಚಿನ ಅನುದಾನ ನೀಡಬೇಕು, ಖಾಸಗೀಕರಣವನ್ನು ತಕ್ಷಣ ಕೈಬಿಡಬೇಕೆಂದು ಆಗ್ರಹಿಸಿ ಉಗ್ರ ಹೋರಾಟಕ್ಕೆ ಎಚ್ಚರಿಕೆ ನೀಡಿದ್ದಾರೆ.

ಮುಖ್ಯಾಂಶಗಳು
- ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿಗೆ ದತ್ತು ನೀಡಲು ಮುಂದಾಗಿರುವ ರಾಜ್ಯ ಸರ್ಕಾರ
- ಈ ನಿರ್ಧಾರಕ್ಕೆ ಶಿಕ್ಷಣ ತಜ್ಞರು, ಚಿಂತಕರು, ವಿದ್ಯಾರ್ಥಿ ಸಂಘಟನೆಗಳು ವ್ಯಾಪಕ ವಿರೋಧ
- ಖಾಸಗಿ ಶಾಲೆಗಳು ಕಡ್ಡಾಯವಾಗಿ ಸರ್ಕಾರಿ ಶಾಲೆಗಳನ್ನು ದತ್ತು ಪಡೆಯಬೇಕು
ಬೆಂಗಳೂರು, ಜು.25: ರಾಜ್ಯದ ಸರ್ಕಾರಿ ಶಾಲೆಗಳನ್ನು (Karnataka government schools) ಕಾರ್ಪೊರೇಟ್ ಕಂಪನಿಗಳು ಹಾಗೂ ಖಾಸಗಿ ಶಾಲೆಗಳಿಗೆ ದತ್ತು ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಶಿಕ್ಷಣ ತಜ್ಞರು, ಚಿಂತಕರು, ವಿದ್ಯಾರ್ಥಿ ಸಂಘಟನೆಗಳು ಹಾಗೂ ಪೋಷಕರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಕಾರ್ಪೊರೇಟ್ ಸಂಸ್ಥೆಗಳು ಹಾಗೂ ಖಾಸಗಿ ಶಾಲೆಗಳು ಕಡ್ಡಾಯವಾಗಿ ಸರ್ಕಾರಿ ಶಾಲೆಗಳನ್ನು ದತ್ತು ಪಡೆಯಬೇಕು ಎಂದು ಮುಖ್ಯಮಂತ್ರಿಗಳು ನೀಡಿರುವ ಹೇಳಿಕೆ ಈಗ ರಾಜ್ಯಾದ್ಯಂತ ಭಾರಿ ಚರ್ಚೆಗೆ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.
ಸರ್ಕಾರದ ಈ ನಡೆಯನ್ನು ಖಂಡಿಸಿ ಶಿಕ್ಷಣ ತಜ್ಞರು, ಚಿಂತಕರು ಹಾಗೂ ವಿದ್ಯಾರ್ಥಿ ಒಕ್ಕೂಟಗಳು ತುರ್ತು ಸಭೆ ನಡೆಸಿ ತಮ್ಮ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಲಾಭಕ್ಕಾಗಿ ಶಿಕ್ಷಣವನ್ನು ಮಾರಾಟ ಮಾಡುತ್ತಿರುವ ಖಾಸಗಿ ಸಂಸ್ಥೆಗಳಿಗೆ ಸರ್ಕಾರಿ ಶಾಲೆಗಳನ್ನು ಹಸ್ತಾಂತರಿಸುವುದು ಸಾರ್ವಜನಿಕ ಶಿಕ್ಷಣದ ಮೂಲ ಆಶಯಕ್ಕೇ ವಿರುದ್ಧವಾಗಿದೆ. ಇದು ಸರ್ಕಾರಿ ಶಾಲೆಗಳನ್ನು ಸಂಪೂರ್ಣವಾಗಿ ಲಾಭಕೋರ ಕಂಪನಿಗಳಿಗೆ ವಹಿಸುವ ಹುನ್ನಾರ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಕಟುವಾಗಿ ಖಂಡಿಸಿದೆ.
ಜನರ ತೆರಿಗೆ ಹಣದಿಂದ ನಡೆಯುವ ಸರ್ಕಾರಿ ಶಾಲೆಗಳನ್ನು ಸರ್ಕಾರವೇ ಅಭಿವೃದ್ಧಿಪಡಿಸಬೇಕು. ಅದಕ್ಕಾಗಿ ಮುಂಬರುವ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಡಬೇಕೇ ಹೊರತು, ಖಾಸಗಿಯವರ ಕೈಗೆ ನೀಡಬಾರದು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ನೆಲಮಂಗಲದಲ್ಲಿ 8ನೇ ಶತಮಾನದ ಅಪರೂಪದ ‘ಹುಲಿ ವೀರಗಲ್ಲು’ ಶಾಸನ ಪತ್ತೆ
“ಸರ್ಕಾರಕ್ಕೆ ಶಾಲೆ ನಡೆಸಲು ಕಷ್ಟವೇ?”: ಪೋಷಕರ ಪ್ರಶ್ನೆ
ಸರ್ಕಾರಿ ಶಾಲೆಗಳನ್ನು ದತ್ತು ನೀಡುವ ಯೋಜನೆಗೆ ಪೋಷಕರ ವಲಯದಲ್ಲೂ ತೀವ್ರ ವಿರೋಧ ವ್ಯಕ್ತವಾಗಿದೆ. “ಸರ್ಕಾರಿ ಶಾಲೆಗಳಲ್ಲಿ ಅತ್ಯುತ್ತಮ ಹಾಗೂ ಅರ್ಹ ಶಿಕ್ಷಕರಿದ್ದಾರೆ. ಹೀಗಿರುವಾಗ ಸರ್ಕಾರಕ್ಕೆ ಶಾಲೆಗಳನ್ನು ನಡೆಸಲು ಕಷ್ಟವೇ? ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸಿ, ಗುಣಮಟ್ಟ ಹೆಚ್ಚಿಸುವ ಕೆಲಸವನ್ನು ಸರ್ಕಾರವೇ ಮಾಡಬೇಕು. ಯಾವುದೇ ಕಾರಣಕ್ಕೂ ಶಾಲೆಗಳನ್ನು ಖಾಸಗಿಯವರಿಗೆ ದತ್ತು ನೀಡಬಾರದು.” ಎಂದು ಪೋಷಕರು ಹೇಳಿದ್ದಾರೆ. ರಾಜ್ಯ ಸರ್ಕಾರವು ಕಾರ್ಪೊರೇಟ್ ಸಂಸ್ಥೆಗಳಿಗೆ ಸರ್ಕಾರಿ ಶಾಲೆಗಳನ್ನು ದತ್ತು ನೀಡುವ ಈ ಯೋಜನೆಯನ್ನು ತಕ್ಷಣವೇ ಕೈಬಿಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣ ಪ್ರೇಮಿಗಳನ್ನು ಒಗ್ಗೂಡಿಸಿ ಉಗ್ರ ಹೋರಾಟ ರೂಪಿಸುವುದಾಗಿ ಶಿಕ್ಷಣ ತಜ್ಞರು ಮತ್ತು ಸಂಘಟನೆಗಳು ಎಚ್ಚರಿಸಿವೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




