ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ: ಕರಾವಳಿ ಜನರೇ ಎಚ್ಚರ
ಕರ್ನಾಟಕದಲ್ಲಿ ಮುಂದಿನ ಎರಡು ದಿನ ಭಾರಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 40-50 ಕಿ.ಮೀ ವೇಗದ ಬಿರುಗಾಳಿ, ಗುಡುಗು-ಮಿಂಚು ನಿರೀಕ್ಷಿಸಲಾಗಿದೆ. ರೈತರು ಬೆಳೆಗಳನ್ನು ಸಂರಕ್ಷಿಸಲು ಮತ್ತು ಸಾರ್ವಜನಿಕರು ಸುರಕ್ಷಿತವಾಗಿರಲು IMD ಸೂಚಿಸಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದೆ.

ಬೆಂಗಳೂರು, ಮೇ.12: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಬದಲಾವಣೆಯಾಗಲಿದ್ದು, ಆಲಿಕಲ್ಲು ಮಳೆ (Hailstorm) ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ. ಉತ್ತರ ಒಳನಾಡಿನಲ್ಲಿ ಮೇ 14 ಮತ್ತು 15 ರಂದು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನು ದಕ್ಷಿಣ ಒಳನಾಡಿನಲ್ಲೂ ಕೂಡ ಮೇ 15 ರಂದು ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.
ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ. ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ ಐಎಂಡಿ (IMD) ವತಿಯಿಂದ ಆರೆಂಜ್ಅಲರ್ಟ್ ನೀಡಲಾಗಿದೆ. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಮೇ 14 ರಿಂದ 16 ರವರೆಗೆ ರಾಜ್ಯದ ಹಲವೆಡೆ ಆಲಿಕಲ್ಲು ಮಳೆ (Hailstorm) ಸಾಧ್ಯತೆಯಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು ಕೊಪ್ಪಳ ಮೇ 14-15ರಂದು ಮಳೆಯಾಗುತ್ತದೆ. ಇನ್ನು ಮೇ. 14 ದಾವಣಗೆರೆ, ವಿಜಯನಗರ, ಶಿವಮೊಗ್ಗ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮಂಜಿನ ಕಲ್ಲುಗಳು ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ನೈಋತ್ಯ ಮುಂಗಾರು (Southwest Monsoon) ಚುರುಕುಗೊಂಡಿದ್ದು, ಈ ವಾರಾಂತ್ಯಕ್ಕೆ ಅಂಡಮಾನ್ ಪ್ರವೇಶಿಸಲಿದೆ. ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಆಗಮಿಸುವ ಲಕ್ಷಣಗಳಿವೆ. ಪ್ರಸ್ತುತ ಉಂಟಾಗಿರುವ ‘ಸೈಕ್ಲೋನಿಕ್ ಸರ್ಕ್ಯುಲೇಷನ್’ ಮಳೆಯ ತೀವ್ರತೆಯನ್ನು ಹೆಚ್ಚಿಸಿದೆ.
ಇದನ್ನೂ ಓದಿ: ಮಲೆನಾಡಲ್ಲಿ ವರುಣನ ಆರ್ಭಟ: ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ; ಮಂಜಿನ ನಗರಿಯಾದ ಕಾಫಿನಾಡು!
ಗುಡುಗು-ಮಿಂಚಿನ ವೇಳೆ ಮನೆಯೊಳಗೆ ಸುರಕ್ಷಿತವಾಗಿರಿ ಎಂದು ಹೇಳಿದ್ದಾರೆ. ಮರ ಅಥವಾ ವಿದ್ಯುತ್ ಕಂಬಗಳ ಕೆಳಗೆ ಆಶ್ರಯ ಪಡೆಯಬೇಡಿ. ರೈತರು ಕಟಾವು ಮಾಡಿದ ಬೆಳೆಗಳನ್ನು ಸುರಕ್ಷಿತವಾಗಿ ಸಂಗ್ರಹಿಸಿಡಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರಣ ಮಳೆಯ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




