ಏನಿದು ದ್ವೇಷ ಅಪರಾಧಗಳ ಮಸೂದೆ? ದ್ವೇಷಾಪರಾಧಕ್ಕೆ ಶಿಕ್ಷೆಯೇನು? ಇಲ್ಲಿದೆ ಮಾಹಿತಿ
ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಈ ಸಂಬಂಧಿಸಿದಂತೆ ಇಂದು( ಬುಧವಾರ) ವಿಧಾನಸಭೆಯಲ್ಲಿ "ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ" ಮಂಡನೆ ಮಾಡಲಾಯಿತು. ಈ ಮಸೂದೆಯ ಅಡಿಯಲ್ಲಿ ದ್ವೇಷ ಭಾಷಣಕ್ಕೆ 1-7 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಹೇಳಲಾಗಿದ್ದು, ಮಸೂದೆಯ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು, ಡಿಸೆಂಬರ್ 10: ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ” (Karnataka Hate Speech and Hate Crimes Bill, 2025) ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಧರ್ಮ, ಜನಾಂಗ, ಭಾಷೆ, ಜನ್ಮಸ್ಥಳ, ಜಾತಿ, ಲಿಂಗ ಆಧಾರದಲ್ಲಿ ದ್ವೇಷದ ಭಾಷಣ ಮಾಡುವವರನ್ನು ನಿರ್ಬಂಧಿಸಲು ಮುಂದಾಗಿರುವ ರಾಜ್ಯ ಸರ್ಕಾರ, ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಯನ್ನು ಇಂದು (ಡಿಸೆಂಬರ್ 10) ಬೆಳಗಾವಿ ಅಧಿವೇಶನದಲ್ಲಿ (Belagavi winter session) ಈ ಮಸೂದೆಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಂಡಿಸಿದರು. ಆದರೆ ವಿಧೇಯಕಕ್ಕೆ ಬಿಜೆಪಿ ಸದಸ್ಯರು ಒಕ್ಕೊರಲಿನಿಂದ ವಿರೋಧ ವ್ಯಕ್ತಪಡಿಸಿದ್ದು, ಚರ್ಚೆಯ ಸಂದರ್ಭದಲ್ಲಿ ವಿಧೇಯಕಕ್ಕೆ ಮತ್ತಷ್ಟು ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ.
ಏನಿದು ದ್ವೇಷ ಅಪರಾಧಗಳ ಮಸೂದೆ?
ಧರ್ಮ, ಜನಾಂಗ, ಭಾಷೆ, ಜನ್ಮಸ್ಥಳ, ಜಾತಿ ಅಥವಾ ಲಿಂಗದ ಆಧಾರದ ಮೇಲೆ ದ್ವೇಷದ ಭಾಷಣ ಮಾಡುವುದು ದ್ವೇಷಾಪರಾಧದ ವ್ಯಾಪ್ತಿಗೆ ಬರುತ್ತದೆ. ಅಲ್ಲದೆ, ಯಾವುದೇ ರೀತಿಯ ಭಾವನಾತ್ಮಕ, ಮಾನಸಿಕ, ದೈಹಿಕ, ಸಾಮಾಜಿಕ ಅಥವಾ ಆರ್ಥಿಕ ಹಾನಿ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು ಸಹ ಇದರಲ್ಲಿ ಸೇರಿದೆ. ಯಾವುದೇ ಮಾಧ್ಯಮದ ಮೂಲಕ ದ್ವೇಷವನ್ನು ಉತ್ತೇಜಿಸುವುದು ಅಥವಾ ಪ್ರಚಾರ ಮಾಡುವುದಕ್ಕೆ ಈ ಮಸೂದೆಯ ಅಡಿಯಲ್ಲಿ ನಿರ್ಬಂಧ ಹೇರಲಾಗಿದೆ.
ಈ ಮಸೂದೆಯು ಯಾವುದೇ ನಿರ್ದಿಷ್ಟ ರಾಜಕೀಯ ಪಕ್ಷ ಅಥವಾ ಸಮುದಾಯವನ್ನು ಗುರಿಯಾಗಿಸಿಲ್ಲವೆಂದು ಸ್ಪಷ್ಟಪಡಿಸಿರುವ ಸರ್ಕಾರ, ಇದು ರಾಜ್ಯದಲ್ಲಿ ಸಾಮಾಜಿಕ ಸಾಮರಸ್ಯವನ್ನು ಕಾಪಾಡುವ ಮತ್ತು ದ್ವೇಷದ ಹರಡುವಿಕೆಯನ್ನು ತಡೆಯುತ್ತದೆ ಎಂದಿದೆ. ಭವಿಷ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಈ ಕಾನೂನು ಅನ್ವಯವಾಗಲಿದ್ದು, ಸಂಘಟನೆಗಳ ಮುಖಂಡರು, ರಾಜಕೀಯ ನಾಯಕರು ಮತ್ತು ಪ್ರತಿಯೊಬ್ಬ ವ್ಯಕ್ತಿಯು ವೇದಿಕೆಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಮಾತನಾಡುವಾಗ ಜಾಗರೂಕರಾಗಿರಬೇಕು ಎಂದು ಎಚ್ಚರಿಕೆ ನೀಡಿದೆ.
ಮಸೂದೆಯ ಪ್ರಕಾರ ಯಾವುದೆಲ್ಲಾ ದ್ವೇಷಾಪರಾಧ?
- ಯಾವುದೇ ಭಾವನಾತ್ಮಕ, ಮಾನಸಿಕ, ದೈಹಿಕ, ಸಾಮಾಜಿಕ ಅಥವಾ ಆರ್ಥಿಕ ಹಾನಿ ಮಾಡುವುದು
- ಸಾಮರಸ್ಯ, ವ್ಯಕ್ತಿತ್ವ, ಸಮಾಜಕ್ಕೆ ಧಕ್ಕೆ ತರುವ ದತ್ತಾಂಶ ಸಂದೇಶ, ಪಠ್ಯ, ಚಿತ್ರಗಳು, ಧ್ವನಿ, ಧ್ವನಿ ಸಂಕೇತಗಳು
- ಕಂಪ್ಯೂಟರ್ ಪ್ರೋಗ್ರಾಂಗಳು, ಸಾಫ್ಟ್ವೇರ್ ಮತ್ತು ಡಾಟಾಬೇಸ್ಗಳು ಅಥವಾ ಮೈಕ್ರೋಫೀಲ್ಮ ಅಥವಾ ಕಂಪ್ಯೂಟರ್ ರಚಿತ
- ಮೈಕ್ರೋಫೀಚರ್ಗಳು ಸೇರಿ ಯಾವುದೇ ಮಾಧ್ಯಮದ ಮೂಲಕ ದ್ವೇಷವನ್ನು ಹರಡುವಂತಿಲ್ಲ
ದ್ವೇಷಾಪರಾಧಕ್ಕೆ ಶಿಕ್ಷೆಯೇನು?
ಈ ಮಸೂದೆಯ ಅಡಿಯಲ್ಲಿ, ದ್ವೇಷ ಭಾಷಣ ಮಾಡುವವರಿಗೆ ಒಂದು ವರ್ಷದಿಂದ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಒಂದು ವೇಳೆ ಇದೇ ಅಪರಾಧವನ್ನು ಪುನರಾವರ್ತಿಸಿದರೆ ಎರಡು ವರ್ಷದಿಂದ ಹತ್ತು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ 50,000 ರೂಪಾಯಿಗಳಿಂದ 1 ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸಲಾಗುತ್ತದೆ. ಇಂತಹ ಕೃತ್ಯಗಳನ್ನು ಜಾಮೀನು ರಹಿತ ಅಪರಾಧ ಎಂದು ಪರಿಗಣಿಸಲಾಗುತ್ತದೆ ಎಂದು ಸರ್ಕಾರ ಹೇಳಿದೆ.
ದ್ವೇಷಾಪರಾಧದಿಂದ ಆಗಿರುವ ಹಾನಿಯ ತೀವ್ರತೆ ಪರಿಗಣಿಸಿರುವ ಸರ್ಕಾರ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲು ಮುಂದಾಗಿದ್ದು, ಈ ಅಪರಾಧಗಳ ವಿಚಾರಣೆಯನ್ನು ಜೆಎಂಎಫ್ಸಿ ನ್ಯಾಯಾಲಯ ನಡೆಸಲಿದೆ ಎಂದು ಹೆಳಲಾಗಿದೆ. ಈಗಿರುವ ಕಾನೂನಿನ ಪ್ರಕಾರ ಭಾರತೀಯ ನ್ಯಾಯಸಂಹಿತೆಯ ಸೆಕ್ಷನ್ 153A, ಸೆಕ್ಷನ್ 295A, ಸೆಕ್ಷನ್ 505 ಸೆಕ್ಷನ್ಗಳನ್ನು ದ್ವೇಷ ಭಾಷಣದ ವಿರುದ್ಧ ಬಳಸಲಾಗುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 2:47 pm, Wed, 10 December 25




