ಬೆಂಗಳೂರು ಟರ್ಫ್‌ ಕ್ಲಬ್‌ನಲ್ಲಿ ರೇಸಿಂಗ್ ಚಟುವಟಿಕೆಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

| Updated By: ರಮೇಶ್ ಬಿ. ಜವಳಗೇರಾ

Updated on: Jun 18, 2024 | 6:05 PM

ಬೆಂಗಳೂರು ಟರ್ಫ್ ಕ್ಲಬ್(ರೇಸ್ ಕೋರ್ಸ್)ನಲ್ಲಿ ಬೆಟ್ಟಿಂಗ್ ಸೇರಿದಂತೆ ರೇಸಿಂಗ್ ಚಟುವಟಿಕೆಗಳಿಗೆ ಕರ್ನಾಟಕ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಆದೇಶದಿಂದಾಗಿ ಕಳೆದ ಮೂರು ತಿಂಗಳನಿಂದ ಸ್ಥಗಿತಗೊಂಡಿದ್ದ ಕುದುರೆ ಪಂದ್ಯಾವಳಿಗಳು ಪುನಾರಂಭವಾಗಲಿದೆ.

ಬೆಂಗಳೂರು ಟರ್ಫ್‌ ಕ್ಲಬ್‌ನಲ್ಲಿ ರೇಸಿಂಗ್ ಚಟುವಟಿಕೆಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
ಹೈಕೋರ್ಟ್
Follow us on

ಬೆಂಗಳೂರು, (ಜೂನ್ 18): ನಗರದ ಬೆಂಗಳೂರು ಟರ್ಫ್ ಕ್ಲಬ್(bangalore turf club)ನಲ್ಲಿ ಷರತ್ತುಗಳ ಅನ್ವಯ ಕುದುರೆ ಪಂದ್ಯಗಳನ್ನು (horse race) ಆಯೋಜನೆ ಮಾಡುವುದಕ್ಕೆ ಕರ್ನಾಟಕ ಹೈಕೋಟ್ (Karnataka high Court) ಅನುಮತಿ ನೀಡಿ ಆದೇಶಿಸಿದೆ. ಮುಂದಿನ ಆದೇಶದವರೆಗೂ ಬೆಂಗಳೂರು ಟರ್ಫ್‌ ಕ್ಲಬ್‌ನಲ್ಲಿ ರೇಸಿಂಗ್, ಬೆಟ್ಟಿಂಗ್ ಚಟುವಟಿಕೆ ಮುಂದುವರಿಸುವಂತೆ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್​ ಅವರಿದ್ದ ಏಕಸದಸ್ಯ ಪೀಠ ಮಧ್ಯಂತರ ಅನುಮತಿ ನೀಡಿ ಆದೇಶ ಹೊರಡಿಸಿದೆ.

2024-25ರ ಸಾಲಿನ ರೇಸಿಂಗ್ ಬೆಟ್ಟಿಂಗ್ ಚಟುವಟಿಕೆಗೆ ಅನುಮತಿ ನಿರಾಕರಿಸಲಾಗಿತ್ತು. ಬೆಟ್ಟಿಂಗ್ ಅವ್ಯವಹಾರಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿ ಆದೇಶಿಸಿತ್ತು. ಕುದುರೆ ಪಂದ್ಯಗಳ ಆಯೋಜನೆಗೆ ಕೋರಿದ್ದ ಮನವಿಯನ್ನು ತಿರಸ್ಕರಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್, ಕರ್ನಾಟಕ ಟ್ರೈನ್ಸ್ ಅಸೋಸಿಯೇಷನ್ಸ್, ಕರ್ನಾಟಕ ರೇಸ್ ಕುದುರೆ ಮಾಲೀಕರ ಸಂಘ, ಕರ್ನಾಟಕ ಜಾಕಿಗಳ ಸಂಘ ಸೇರಿದಂತೆ ಮತ್ತಿತರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಕುಮಾರ್ ಅವರಿದ್ದ ನ್ಯಾಯಪೀಠ, 2024ರ ಮಾರ್ಚ್ ತಿಂಗಳಲ್ಲಿ ಸರ್ಕಾರ ಅನುಮತಿ ನೀಡಿದ್ದ ಷರತ್ತುಗಳ ಅನ್ವಯ ಕುದುರೆ ಪಂದ್ಯಗಳನ್ನು ಆಯೋಜನೆ ಮಾಡವುದಕ್ಕೆ ಅವಕಾಶ ನೀಡಿ ಆದೇಶಿಸಿದೆ.

ಇದನ್ನೂ ಓದಿ: ಮಂತ್ರಾಲಯದ ಕರ್ನಾಟಕ ಛತ್ರದ ಕಳಪೆ ಕಾಮಗಾರಿ: ಲೋಕಾಯುಕ್ತ ತನಿಖೆಗೆ ಆದೇಶಿಸಿದ ಸರ್ಕಾರ

ಅಲ್ಲದೆ, ಆನ್‌ಕೋರ್ಸ್(ಬೆಂಗಳೂರಿನಲ್ಲಿ ನಡೆಯುವ ಪಂದ್ಯ) ಮತ್ತು ಆಫ್ ಕೋರ್ಸ್(ಹೊರಭಾಗಗಳಲ್ಲಿ ಮೈಸೂರು, ಬಾಂಬೆ ನಡೆಯುವ ಪಂದ್ಯಗಳು)ಗಳನ್ನು ಬಿಟಿಸಿ ಹಮ್ಮಿಕೊಳ್ಳಬಹುದಾಗಿದೆ. ಅಲ್ಲದೆ, ರಾಜ್ಯ ಸರ್ಕಾರವು ಕುದುರೆ ಪಂದ್ಯಗಳ ಆಯೋಜನೆ ವೇಳೆ ಅದರ ಮೇಲ್ವಚಾರಣೆ ಮತ್ತು ನಿಯಂತ್ರಣವವನ್ನು ಮಾಡಬಹುದಾಗಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ. ಈ ಆದೇಶದಿಂದಾಗಿ ಕಳೆದ ಮೂರು ತಿಂಗಳನಿಂದ ಸ್ಥಗಿತಗೊಂಡಿದ್ದ ಕುದುರೆ ಪಂದ್ಯಾವಳಿಗಳು ಪುನಾರಂಭವಾಗಲಿದೆ.

ಸರ್ಕಾರದ ಪರ ವಕೀಲರ ವಾದ

ಅರ್ಜಿಯ ಕುರಿತಂತೆ ಈ ಹಿಂದೆ ನಡೆದ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ರೇಸ್ ಕೋರ್ಸ್​ ಅಕ್ರಮಗಳ ತಾಣವಾಗಿದೆ. ಪ್ರತಿದಿನ ಕೋಟ್ಯಂತರ ರೂ.ಗಳ ಅವ್ಯವಹಾರ ನಡೆಯುತ್ತಿದೆ. ಜತೆಗೆ, ತೆರಿಗೆ ವಂಚನೆಗೆ ಬುಕ್ಕಿಗಳು ಪ್ರಯತ್ನ ಮಾಡುತ್ತಿದ್ದು, ದಾಳಿ ಸಂದರ್ಭದಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಅಲ್ಲದೇ ನೂರಾರು ಮಂದಿ ಸಾಮಾನ್ಯ ಜನ ಕುದುರೆ ಪಂದ್ಯಗಳಲ್ಲಿ ತೊಡಗಿ ಜೀವನ ನಡೆಸುವುದಕ್ಕೆ ಪರದಾಡುತ್ತಿದ್ದಾರೆ, ಆಟೋ ಚಾಲಕರು ತಮ್ಮ ದುಡಿಮೆಯನ್ನು ಪಂದ್ಯಗಳಲ್ಲಿ ವ್ಯಯ ಮಾಡುತ್ತಿದ್ದಾರೆ. ಹೀಗಾಗಿ ಸರ್ಕಾರ ಪಂದ್ಯಗಳ ಆಯೋಜನೆಗೆ ಅನುಮತಿ ನಿರಾಕರಿಸಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ರೇಸ್ ಕೋರ್ಸ್ ಪರ ವಕೀಲರ ಪ್ರತಿವಾದ

ರೇಸ್ ಕೋರ್ಸ್ ಪರ ವಕೀಲರು ಪ್ರತಿವಾದ ಮಂಡಿಸಿದ್ದು, ರೇಸ್‌ಕೋರ್ಸ್ ಆಡಳಿತ ಮಂಡಳಿಯಲ್ಲಿ ಸರ್ಕಾರದ ಹಣಕಾಸು ಕಾರ್ಯದರ್ಶಿಗಳು, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸದಸ್ಯರಾಗಿದ್ದಾರೆ. ಕುದುರೆ ಪಂದ್ಯಗಳ ಆಯೋಜನೆಯ ಎಲ್ಲ ಚಟುವಟಿಕೆಗಳು ಸರ್ಕಾರದ ಗಮನಕ್ಕೆ ಇರುತ್ತವೆ. ಅಕ್ರಮಗಳು ನಡೆಸುವ ಸಾಧ್ಯತೆಗಳು ಇಲ್ಲ ಎಂದು ವಿವರಿಸಿದರು.

ತೆರಿಗೆ ವಂಚನೆಗಾಗಿ ಅಕ್ರಮವಾಗಿ ಬೆಟ್ಟಿಂಗ್ ಮಾಡಿದ ಆರೋಪದಲ್ಲಿ ಆರೋಪ ಪಟ್ಟಿ ದಾಖಲಿಸಿರುವ ಬುಕ್ಕಿಗಳ ಪರವಾನಿಗೆಯನ್ನು ರದ್ದು ಪಡಿಸುವುದಕ್ಕಾಗಿ ಮಂಡಳಿಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೆ, ಕುದುರೆ ಪಂದ್ಯಗಳ ಆಯೋಜನೆಯಲ್ಲಿ ಬುಕ್ಕಿ ಕಂಪೆನಿಗಳಿಗೆ ಯಾವುದೇ ಸಂಬಂಧವಿರುವುದಿಲ್ಲ. ಹೀಗಾಗಿ ಕುದುರೆ ಪಂದ್ಯಗಳ ಆಯೋಜನೆಗೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಜತೆಗೆ, ಪ್ರತಿದಿನ 1 ಕೋಟಿಗಿಂತಲೂ ಹೆಚ್ಚು ರೂ.ಗಳ ತೆರಿಗೆ ಸಂಗ್ರಹವಾಗುತ್ತಿದೆ. ಇದು ಸರ್ಕಾರದ ಬೊಕ್ಕಸಕ್ಕೆ ಸೇರುತ್ತಿದೆ. ಅಲ್ಲದೆ, ಕುದುರೆ ಪಂದ್ಯಗಳಿಂದ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸುಮಾರು 2 ಸಾವಿರಕ್ಕೂ ಹೆಚ್ಚು ಜನ ಇದನ್ನು ಅವಲಂಬಿಸಿದ್ದಾರೆ. ಆದ್ದರಿಂದ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಬೇಕು ಎಂದು ತಮ್ಮ ವಾದ ಮಂಡಿಸಿದರು.

ವಾದ ಪ್ರತಿವಾದ ಆಲಿಸಿದ ಹೈಕೋರ್ಟ್​, ಅಂತಿಮವಾಗಿ ಬೆಂಗಳೂರು ಟರ್ಫ್‌ ಕ್ಲಬ್‌ನಲ್ಲಿ ರೇಸಿಂಗ್ ಚಟುವಟಿಕೆಗಳಿಗೆ ಮಧ್ಯಂತರ ಅನುಮತಿ ನೀಡಿ ಆದೇಶಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ