ಮುಸ್ಲಿಂ ಮಹಿಳೆಯರಿಗೂ ಆಸ್ತಿ ಪಾಲು ಸಿಗಲಿ; ಏಕರೂಪ ನಾಗರಿಕ ಸಂಹಿತೆ ಜಾರಿಗೆ ಕರ್ನಾಟಕ ಹೈಕೋರ್ಟ್ ಸಲಹೆ
ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಿಗೆ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುವಂತೆ ಕರೆ ನೀಡಿದೆ. ಭಾರತೀಯ ಸಂವಿಧಾನದ ಪೀಠಿಕೆಯಲ್ಲಿ ಪ್ರತಿಪಾದಿಸಲಾದ ತತ್ವಗಳನ್ನು ಎತ್ತಿ ಹಿಡಿಯಲು ಕರ್ನಾಟಕ ಹೈಕೋರ್ಟ್ ಸಂಸತ್ತು ಮತ್ತು ರಾಜ್ಯ ಶಾಸಕಾಂಗಗಳನ್ನು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರುವಂತೆ ಒತ್ತಾಯಿಸಿದೆ. ಜಾತಿ ಅಥವಾ ಧರ್ಮವನ್ನು ಲೆಕ್ಕಿಸದೆ ಎಲ್ಲಾ ನಾಗರಿಕರಿಗೆ, ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ನೀಡುವ ಗುರಿಯನ್ನು ಈ ಕ್ರಮ ಹೊಂದಿದೆ. ಏಕರೂಪ ನಾಗರಿಕ ಸಂಹಿತೆಯು ಮಹಿಳೆಯರಿಗೆ ನ್ಯಾಯವನ್ನು ಖಚಿತಪಡಿಸುತ್ತದೆ. ಏಕರೂಪ ನಾಗರಿಕ ಸಂಹಿತೆ ಜಾತಿಗಳು, ಧರ್ಮಗಳಲ್ಲಿ ಸಮಾನತೆಯನ್ನು ಉತ್ತೇಜಿಸುತ್ತದೆ ಮತ್ತು ಭ್ರಾತೃತ್ವದ ಮೂಲಕ ವೈಯಕ್ತಿಕ ಘನತೆಯನ್ನು ಎತ್ತಿಹಿಡಿಯುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಬೆಂಗಳೂರು, ಏಪ್ರಿಲ್ 5: ಮುಸ್ಲಿಂ ಮಹಿಳೆಯರಿಗೆ ಆಸ್ತಿಯಲ್ಲಿ ಪುರುಷರ ಸಮಾನ ಪಾಲಿಲ್ಲದ ಹಿನ್ನೆಲೆಯಲ್ಲಿ ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ (Uniform Civil Code) ಜಾರಿಗೆ ಕರ್ನಾಟಕ ಹೈಕೋರ್ಟ್ ಸಲಹೆ ನೀಡಿದೆ. ನ್ಯಾ. ಹಂಚಾಟೆ ಸಂಜೀವ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಈ ಬಗ್ಗೆ ವಿಚಾರಣೆ ನಡೆಸಿದ್ದು, ಡಾ.ಬಿ.ಆರ್. ಅಂಬೇಡ್ಕರ್ ಸಹ ಏಕರೂಪ ನಾಗರಿಕ ಸಂಹಿತೆ ಪರವಾಗಿದ್ದರು ಎಂದು ಹೇಳಿದೆ. ಸಾಂವಿಧಾನಿಕ ಸಭೆಯ ಚರ್ಚೆ ಉಲ್ಲೇಖಿಸಿರುವ ಹೈಕೋರ್ಟ್ (Karnataka High Court), ಸಂವಿಧಾನದ ಆರ್ಟಿಕಲ್ 44ರಲ್ಲಿ ಏಕರೂಪ ನಾಗರಿಕ ಸಂಹಿತೆ ಪ್ರಸ್ತಾಪವಿದೆ. ಅದು ಜಾರಿಗೆ ತಂದರೆ ಮುಸ್ಲಿಂ ಮಹಿಳೆಯರಿಗೂ ಸಮಾನ ನ್ಯಾಯ ಸಿಗಲಿದೆ. ಆಸ್ತಿ ಹಕ್ಕಿನಲ್ಲಿ ಮುಸ್ಲಿಂ ಮಹಿಳೆಯರಿಗೆ ಈಗ ಸಮಾನ ಅಧಿಕಾರವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಹಿಂದೂ ಮಹಿಳೆಯರಿಗೆ ಮಾತ್ರ ಪುರುಷರಷ್ಟೇ ಆಸ್ತಿಯಲ್ಲಿ ಸಮಾನ ಅಧಿಕಾರವಿದೆ. ಹಿಂದೂಗಳಲ್ಲಿ ಅಣ್ಣನ ಸರಿಸಮನಾಗಿ ತಂಗಿಗೂ ಪಾಲಿದೆ. ಆದರೆ, ಮಹಮ್ಮದೀಯ ಕಾನೂನಿನಲ್ಲಿ ಸರಿಸಮಾನವಾದ ಪಾಲು ನೀಡಿಲ್ಲ. ದೇಶದ ಎಲ್ಲ ಹೆಣ್ಣು ಮಕ್ಕಳೂ ಸಮಾನರು. ಧರ್ಮದ ಕಾರಣದಿಂದಾಗಿ ಮಹಿಳೆಯರ ಹಕ್ಕಿನಲ್ಲಿ ತಾರತಮ್ಯ ಮಾಡುವುದು ಸರಿಯಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಏಕರೂಪ ನಾಗರಿಕ ಜಾರಿಗೆ ತರುವ ವಿಶ್ವಾಸವಿದೆ. ಸುಪ್ರೀಂ ಕೋರ್ಟ್, ಹೈಕೋರ್ಟ್ ಗಳೂ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿವೆ ಎಂದು ಮುಸ್ಲಿಂ ಕುಟುಂಬದ ಆಸ್ತಿ ವಿಭಾಗ ದಾವೆಯ ತೀರ್ಪಿನ ವೇಳೆ ನ್ಯಾ. ಹಂಚಾಟೆ ಸಂಜೀವ್ ಕುಮಾರ್ ಅವರಿದ್ದ ಹೈಕೋರ್ಟ್ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಇದನ್ನೂ ಓದಿ: Uniform Civil Code: ಏಕರೂಪ ನಾಗರಿಕ ಸಂಹಿತೆ ಎಂದರೇನು? ಯಾರಿಗೆಲ್ಲಾ ಅನ್ವಯಿಸುತ್ತೆ ಇಲ್ಲಿದೆ ಮಾಹಿತಿ
ಭಾರತದ ಸಂವಿಧಾನದ ಪೀಠಿಕೆಯಲ್ಲಿ ವಿವರಿಸಿರುವ ಆದರ್ಶಗಳನ್ನು ಸಂಪೂರ್ಣವಾಗಿ ಸಾಕಾರಗೊಳಿಸಲು ಏಕರೂಪ ನಾಗರಿಕ ಸಂಹಿತೆಯಂತಹ ಶಾಸನವು ಅತ್ಯಗತ್ಯ ಎಂದು ಒತ್ತಿಹೇಳಿರುವ ಹೈಕೋರ್ಟ್ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲು ಸಂಸತ್ತು ಮತ್ತು ರಾಜ್ಯ ಶಾಸಕಾಂಗಗಳು ಎಲ್ಲ ಪ್ರಯತ್ನಗಳನ್ನು ಮಾಡಬೇಕೆಂದು ಒತ್ತಾಯಿಸಿದೆ. ನ್ಯಾಯಮೂರ್ತಿ ಹಂಚಾಟೆ ಸಂಜೀವಕುಮಾರ್ ಅವರ ಏಕಸದಸ್ಯ ಪೀಠವು, ಯುಸಿಸಿಯನ್ನು ಜಾರಿಗೆ ತರುವುದು ಮತ್ತು ಜಾರಿಗೊಳಿಸುವುದರಿಂದ ಮಹಿಳೆಯರಿಗೆ ನ್ಯಾಯ ಸಿಗುತ್ತದೆ. ಇದು ಜಾತಿ ಮತ್ತು ಧರ್ಮಗಳಲ್ಲಿ ಸಮಾನತೆಯನ್ನು ಉತ್ತೇಜಿಸುತ್ತದೆ ಮತ್ತು ಭ್ರಾತೃತ್ವದ ಮೂಲಕ ವೈಯಕ್ತಿಕ ಘನತೆಯನ್ನು ಎತ್ತಿಹಿಡಿಯುತ್ತದೆ ಎಂದು ಅಭಿಪ್ರಾಯಪಟ್ಟಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ