ರಾಜ್ಯಾದ್ಯಂತ ತಂಬಾಕು, ನಿಕೋಟಿನ್ ಉತ್ಪನ್ನಗಳ ವಿರುದ್ಧ ಸಮರ: ಗುಟ್ಕಾ, ಪಾನ್ ಮಸಾಲಾ ಒಂದು ವರ್ಷ ನಿಷೇಧ
ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಯುಕ್ತ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳನ್ನು ಒಂದು ವರ್ಷದ ಅವಧಿಗೆ ರಾಜ್ಯಾದ್ಯಂತ ನಿಷೇಧಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಆಗಸ್ಟ್ 10ರಂದು ಹೊರಡಿಸಿದ ಅಧಿಸೂಚನೆಯನ್ವಯ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ವ್ಯಸನಮುಕ್ತ ಕರ್ನಾಟಕಕ್ಕೆ ಸಹಕರಿಸಲು ಮನವಿ ಮಾಡಿದೆ.

ಮುಖ್ಯಾಂಶಗಳು
- ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಮಾರಾಟ ಒಂದು ವರ್ಷ ನಿಷೇಧ
- ಆಗಸ್ಟ್ ಹತ್ತರಂದು ಆಹಾರ ಸುರಕ್ಷತಾ ಇಲಾಖೆಯಿಂದ ಅಧಿಕೃತ ಅಧಿಸೂಚನೆ
- ಅಕ್ರಮ ಉತ್ಪನ್ನಗಳ ವಿರುದ್ಧ ವಿಶೇಷ ಜಾರಿ ಕಾರ್ಯಾಚರಣೆ ಆರಂಭ
ಬೆಂಗಳೂರು, ಆಗಸ್ಟ್ 12: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ರಾಜ್ಯಾದ್ಯಂತ ಕಳಪೆ ಹೋಟೆಲ್ಗಳು ಹಾಗೂ ನಿಯಮಬಾಹಿರ ಕಾಸ್ಮೆಟಿಕ್ (ಸೌಂದರ್ಯವರ್ಧಕ) ಉದ್ಯಮಗಳ ವಿರುದ್ಧ ಸರಣಿ ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದ ಬೆನ್ನಲ್ಲೇ ಸಾರ್ವಜನಿಕರ ಆರೋಗ್ಯ ರಕ್ಷಣೆ ಹಾಗೂ ವ್ಯಸನಮುಕ್ತ ಕರ್ನಾಟಕ ನಿರ್ಮಾಣದ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ. ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಣೆ, ವಿತರಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಆಗಸ್ಟ್ 10ರಿಂದಲೇ ಜಾರಿ
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ಕಲಂ 30(2)(a) ಸೇರಿದಂತೆ Food Safety and Standards Regulations, 2011ರ ನಿಯಮ 2.3.4 ಅಡಿಯಲ್ಲಿ ಈ ಕಠಿಣ ಕ್ರಮ ಜರುಗಿಸಲಾಗಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು 2026ರ ಆಗಸ್ಟ್ 10ರಂದು ಈ ಸಂಬಂಧ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅಧಿಸೂಚನೆ ಹೊರಡಿಸಿದ ದಿನಾಂಕದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಪ್ಯಾಕ್ ಮಾಡಿದ ಅಥವಾ ಪ್ರತ್ಯೇಕವಾಗಿ ಮಾರಾಟ ಮಾಡುವ ಎಲ್ಲಾ ಮಾದರಿಯ ನಿಷೇಧಿತ ತಂಬಾಕು ಉತ್ಪನ್ನಗಳ ಮೇಲೆಯೂ ಇಲಾಖೆ ತೀವ್ರ ನಿಗಾ ಇರಿಸಿದೆ.
ವಿಶೇಷ ಕಾರ್ಯಾಚರಣೆ ಮತ್ತು ಕಠಿಣ ಕ್ರಮ
ರಾಜ್ಯಾದ್ಯಂತ ನಿಯಮ ಉಲ್ಲಂಘನೆಗಳನ್ನು ತಡೆಗಟ್ಟಲು ಆಹಾರ ಸುರಕ್ಷತಾ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಪಾಸಣೆ ಮತ್ತು ಜಾರಿ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗುತ್ತಿದೆ. ಮಾರುಕಟ್ಟೆಯಲ್ಲಿ ನಿಷೇಧಿತ ಉತ್ಪನ್ನಗಳ ತಯಾರಿಕೆ, ಮಾರಾಟ ಅಥವಾ ವಿತರಣೆ ಕಂಡುಬಂದರೆ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.
ಇದರೊಂದಿಗೆ, ಸಾರ್ವಜನಿಕರು ತಮ್ಮ ಆಸುಪಾಸಿನಲ್ಲಿ ಇಂತಹ ನಿಷೇಧಿತ ಉತ್ಪನ್ನಗಳ ಅಕ್ರಮ ಮಾರಾಟ ಅಥವಾ ಸಂಗ್ರಹಣೆ ಕಂಡುಬಂದಲ್ಲಿ ತಕ್ಷಣವೇ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಆರೋಗ್ಯಕರ ಹಾಗೂ ಸುಸ್ಥಿರ ಸಮಾಜದ ನಿರ್ಮಾಣಕ್ಕಾಗಿ ಸಾರ್ವಜನಿಕರು ಸರ್ಕಾರದ ಈ ಮಹತ್ತರ ಆಂದೋಲನಕ್ಕೆ ಪೂರ್ಣ ಸಹಕಾರ ನೀಡಬೇಕಾಗಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಪ್ರಕಟಣೆಯಲ್ಲಿ ಕೋರಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




