ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಬ್ರೇಕ್ ಹಾಕಲು ಹೊಸ ಅಸ್ತ್ರ ಪ್ರಯೋಗಿಸಿದ ಡಿಜಿಪಿ ಅಲೋಕ್ ಕುಮಾರ್
ಡಿಜಿಪಿ ಅಲೋಕ್ ಕುಮಾರ್ ರಾಜ್ಯದ ಜೈಲುಗಳಲ್ಲಿನ ಭ್ರಷ್ಟಾಚಾರ ಮತ್ತು ಖೈದಿಗಳಿಗೆ ನೀಡುವ ರಾಜಾತಿಥ್ಯ ತಡೆಯಲು 'ವರ್ಗಾವಣೆ ಅಸ್ತ್ರ' ಪ್ರಯೋಗಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಸೇರಿದಂತೆ ವಿವಿಧ ಕಾರಾಗೃಹಗಳಲ್ಲಿ ದೀರ್ಘಕಾಲ ಒಂದೇ ಕಡೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ವರ್ಗಾಯಿಸಲು ನಿರ್ಧರಿಸಲಾಗಿದೆ. ಹಣ ಪಡೆದು ವಿಶೇಷ ಸೌಲಭ್ಯ ನೀಡುವ ಆರೋಪಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಜೈಲುಗಳಲ್ಲಿ ಶಿಸ್ತು ಮತ್ತು ಪಾರದರ್ಶಕತೆ ತರುವುದು ಇದರ ಮುಖ್ಯ ಉದ್ದೇಶವಾಗಿದೆ.

ಬೆಂಗಳೂರು, ಫೆ.5: ರಾಜ್ಯದ ಜೈಲುಗಳಲ್ಲಿ ಖೈದಿಗಳಿಗೆ ನೀಡಲಾಗುತ್ತಿದ್ದ ರಾಜಾತಿಥ್ಯ ಮತ್ತು ನಡೆಯುತ್ತಿದ್ದ ಅಕ್ರಮಗಳಿಗೆ ಬ್ರೇಕ್ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ (DGP Alok Kumar )ಅವರು ಈಗ ‘ವರ್ಗಾವಣೆ ಅಸ್ತ್ರ’ವನ್ನು ಪ್ರಯೋಗಿಸಲು ಮುಂದಾಗಿದ್ದಾರೆ. ರಾಜ್ಯದ ವಿವಿಧ ಜೈಲುಗಳಲ್ಲಿ, ವಿಶೇಷವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ವರ್ಷಾನುಗಟ್ಟಲೆ ಒಂದೇ ಕಡೆ ಕೆಲಸ ಮಾಡುತ್ತಿರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ. ಜೈಲು ಸಿಬ್ಬಂದಿ ಹಣ ಪಡೆದು ಖೈದಿಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.
ಇದೇ ತಿಂಗಳ 9ರಿಂದ ಕೇಂದ್ರ ಕಾರಾಗೃಹ ಕಚೇರಿಯಲ್ಲಿ ಸಿಬ್ಬಂದಿಗಳಿಗೆ ಕೌನ್ಸೆಲಿಂಗ್ ನಡೆಸಿ ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಮುಹೂರ್ತ ನಿಗದಿಯಾಗಿದೆ. ಇತ್ತೀಚೆಗೆ ಖೈದಿಗಳಿಗೆ ರಾಜಾತಿತ್ಯ ನೀಡಿ ಅತಿ ಹೆಚ್ಚು ಸುದ್ದಿಯಾಗಿದ್ದ ಪರಪ್ಪನ ಅಗ್ರಹಾರ ಜೈಲಿನ ಸಿಬ್ಬಂದಿಗಳ ಮೇಲೆ ಅಲೋಕ್ ಕುಮಾರ್ ಕಣ್ಣಿಟ್ಟಿದ್ದಾರೆ. ಬೇರೆ ಕಡೆಗಳಿಂದ ಜೈಲಿಗೆ ನಿಯೋಜನೆ (OOD) ಮೇಲೆ ಬಂದಿರುವ ಅಧಿಕಾರಿಗಳಿಗೂ ಈಗ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಸಿಬ್ಬಂದಿಗಳನ್ನು ಆಗಾಗ ಬದಲಾವಣೆ ಮಾಡುವುದರಿಂದ ಜೈಲಿನ ಒಳಗಿನ ಅಕ್ರಮ ಜಾಲವನ್ನು ತಡೆಯಬಹುದು ಹಾಗೂ ಶಿಸ್ತನ್ನು ಕಾಪಾಡಬಹುದು ಎಂಬುದು ಡಿಜಿಪಿ ಅವರ ಉದ್ದೇಶವಾಗಿದೆ.
ಇದನ್ನೂ ಓದಿ: ಇದೇ ಮೊದಲ ಬಾರಿಗೆ ಜೈಲಿನಲ್ಲಿ ಹೊಸ ರೂಲ್ಸ್: ದರ್ಶನ್ ಸೇರಿದಂತೆ ಇತರೆ ಕೈದಿಗಳಿಗೆ ವಿಶೇಷ ಸೌಲಭ್ಯಕ್ಕೆ ಬ್ರೇಕ್
ಅಲೋಕ್ ಕುಮಾರ್ ಅವರು ಅಧಿಕಾರ ವಹಿಸಿಕೊಂಡ ನಂತರ ಜೈಲುಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳು ಜಾರಿಗೆ ಬರುತ್ತಿದ್ದು, ಈ ಸರಣಿ ವರ್ಗಾವಣೆಗಳು ಜೈಲು ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಉದ್ದೇಶವನ್ನು ಹೊಂದಿದೆ ಎಂದು ಹೇಳಲಾಗಿದೆ. ಇದೀಗ ಅಲೋಕ್ ಕುಮಾರ್ ಅವರ ಈ ಕ್ರಮದಿಂದ ಅಧಿಕಾರಿಗಳಿಗೆ ಭಯ ಶುರುವಾಗಿದೆ. ಈಗಾಗಲೇ ಅವರು ಮಂಗಳೂರು, ಬೆಂಗಳೂರು ಜೈಲಿಗೆ ಭೇಟಿ ನೀಡಿ. ಅಲ್ಲಿನ ಅಧಿಕಾರಿಗಳಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಈ ಎಚ್ಚರಿಕೆ ಬೆನ್ನಲ್ಲೇ ವರ್ಗಾವಣೆ ಕ್ರಮವನ್ನು ತೆಗೆದುಕೊಂಡಿದ್ದಾರೆ.
ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:28 pm, Thu, 5 February 26