ಕೊಡಗು, ಮಂಡ್ಯ, ಮೈಸೂರಿಗೆ ‘ಯೆಲ್ಲೋ ಅಲರ್ಟ್: ಇಂದು ಈ ಜಿಲ್ಲೆಗಳಲ್ಲಿ ಸುರಿಯಲಿದೆ ಗುಡುಗು ಸಹಿತ ಭಾರಿ ಮಳೆ

ಕರ್ನಾಟಕದಲ್ಲಿ ಮುಂಗಾರು ಕ್ಷೀಣಿಸಿದ್ದರೂ, ಇಂದು ದಕ್ಷಿಣ ಒಳನಾಡಿನ ಕೊಡಗು, ಮೈಸೂರು ಸೇರಿದಂತೆ 5 ಜಿಲ್ಲೆಗಳಿಗೆ ಭಾರೀ ಮಳೆಯ ನಿರೀಕ್ಷೆಯಿದ್ದು, 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಮಲೆನಾಡು ಭಾಗಕ್ಕೂ ಎಚ್ಚರಿಕೆ ನೀಡಲಾಗಿದೆ. ಜೂನ್ 22ರ ನಂತರ ಕರಾವಳಿ ಭಾಗದಲ್ಲಿ ಮುಂಗಾರು ಮತ್ತೆ ಚುರುಕುಗೊಳ್ಳಲಿದೆ. ಉತ್ತರ ಕರ್ನಾಟಕದಲ್ಲಿ ಬಹುತೇಕ ಒಣ ಹವಾಮಾನ ಇರಲಿದೆ.

ಕೊಡಗು, ಮಂಡ್ಯ, ಮೈಸೂರಿಗೆ ‘ಯೆಲ್ಲೋ ಅಲರ್ಟ್: ಇಂದು ಈ ಜಿಲ್ಲೆಗಳಲ್ಲಿ ಸುರಿಯಲಿದೆ ಗುಡುಗು ಸಹಿತ ಭಾರಿ ಮಳೆ
ಸಾಂದರ್ಭಿಕ ಚಿತ್ರ
Image Credit source: AI image

Updated on: Jun 19, 2026 | 6:53 AM

ಬೆಂಗಳೂರು, ಜೂ.19: ಕರ್ನಾಟಕದಲ್ಲಿ ಸದ್ಯ ಮುಂಗಾರು ಮಳೆ ಕೊಂಚ ಕ್ಷೀಣಿಸಿದ್ದು, ದುರ್ಬಲಗೊಂಡಿದೆ. ಆದಾಗ್ಯೂ ಹವಾಮಾನ ಇಲಾಖೆಯ (IMD) ಇತ್ತೀಚಿನ ವರದಿಯ ಪ್ರಕಾರ ಇಂದು ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಪ್ರಮುಖವಾಗಿ ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಭಾಗಗಳಿಗೆ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ.

ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಸಾಧಾರಣ ಅಥವಾ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಆದರೆ ಬರುವ ವಾರ ಅಂದರೆ ಜೂನ್ 22 ರಿಂದ ಮುಂಗಾರು ಮಳೆ ಮತ್ತೆ ಚುರುಕುಗೊಳ್ಳಲಿದ್ದು, ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಇಂದು ರಾಜ್ಯದಲ್ಲಿ ಗರಿಷ್ಠ ತಾಪಮಾನ 33°C ಹಾಗೂ ಕನಿಷ್ಠ ತಾಪಮಾನ 23°C ಆಸುಪಾಸಿನಲ್ಲಿ ಇರಲಿದೆ.

ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇಂದು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿದಂತೆ ಇಡೀ ಮಲೆನಾಡು ಭಾಗದಲ್ಲಿ ಇಂದು ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆಯು ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಘಾಟ್ ಪ್ರದೇಶಗಳಲ್ಲಿ ಸಂಚರಿಸುವ ಚಾಲಕರು ಜಾಗರೂಕರಾಗಿರಲು ಸೂಚಿಸಲಾಗಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಕರಾವಳಿಯ ಕೆಲವು ಭಾಗಗಳಲ್ಲಿ ಸಾಧಾರಣ ಹಾಗೂ ಒಳನಾಡಿನ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಇರಲಿದ್ದು, ಮೀನುಗಾರರು ಎಚ್ಚರಿಕೆ ವಹಿಸಬೇಕು. ಜೂನ್ 22ರ ನಂತರ ಇಲ್ಲಿ ಮಳೆ ಮತ್ತಷ್ಟು ತೀವ್ರಗೊಳ್ಳಲಿದೆ.

ಇದನ್ನೂ ಓದಿ; ರಾಜ್ಯದಲ್ಲಿ ಭೀಕರ ಬರಗಾಲದ ವದಂತಿ ಸುಳ್ಳು: ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದ ಹವಾಮಾನ ತಜ್ಞರು

ಮಲೆನಾಡಿಗೆ ಹೋಲಿಸಿದರೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮುಂಗಾರು ಮಳೆ ಸದ್ಯಕ್ಕೆ ಕ್ಷೀಣಿಸಿದೆ. ಕಲಬುರಗಿ, ಬೆಳಗಾವಿ, ಬೀದರ್, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಇಂದು ಪ್ರಧಾನವಾಗಿ ಒಣ ಹವಾಮಾನ ಇರಲಿದೆ. ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು 33°C ನಿಂದ 35°C ವರೆಗೆ ದಾಖಲಾಗುವ ಸಾಧ್ಯತೆಯಿದ್ದು, ಸೆಖೆಯ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಹಗುರವಾದ ತುಂತುರು ಮಳೆಯಾಗುವ ಸಾಧ್ಯತೆಯನ್ನು ಹೊರತುಪಡಿಸಿದರೆ ಭಾರಿ ಮಳೆಯ ಮುನ್ಸೂಚನೆ ಇಲ್ಲ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us