
ಬೆಂಗಳೂರು, ಮೇ 25: ನಿನ್ನೆ ನಗರದಲ್ಲಿ ಕರ್ನಾಟಕದ ಅತಿದೊಡ್ಡ ಡಿಜಿಟಲ್ ಅರೆಸ್ಟ್ ಪ್ರಕರಣವೊಂದು (Digital Arrest Fraud) ಬೆಳಕಿಗೆ ಬಂದಿತ್ತು. ವೃದ್ಧೆಯನ್ನು ಡಿಜಿಟಲ್ ಅರೆಸ್ಟ್ ಮಾಡಿ ಬರೋಬ್ಬರಿ 24 ಕೋಟಿ ರೂ ವಂಚಿಸಿದ್ದ ಖದೀಮರ ಹೆಡೆಮುರಿ ಕಟ್ಟುವಲ್ಲಿ ಸೈಬರ್ ಕಮಾಂಡ್ ಪೊಲೀಸರು ಯಶಸ್ವಿಯಾಗಿದ್ದಾರೆ. ಒಟ್ಟು ಆರು ಆರೋಪಿಗಳನ್ನು ಬಂಧಿಸಿದ್ದಾರೆ (Arrest). ವಿಚಾರಣೆ ವೇಳೆ ಆರೋಪಿಗಳ ಹಿನ್ನೆಲೆ ಕಂಡು ಪೊಲೀಸರೇ ಶಾಕ್ ಆಗಿದ್ದಾರೆ. ಕರ್ನಾಟಕದಲ್ಲೂ ತನ್ನ ಗ್ಯಾಂಗ್ನ್ನು ವಿಸ್ತರಿಸಿಕೊಂಡಿದ್ದ ಆರೋಪಿಗಳು ರಾಜ್ಯದಲ್ಲಿ ಹುಡುಗರನ್ನು ಇಟ್ಟುಕೊಂಡು ಮಾಹಿತಿ ಪಡೆಯುತ್ತಿದ್ದರು ಎಂಬ ಮಾಹಿತಿ ಬಯಲಾಗಿದೆ.
ಹರಿಯಾಣದ ಗುರುಗ್ರಾಮದಲ್ಲಿ ಕಚೇರಿ ಮಾಡಿಕೊಂಡಿದ್ದ ಗ್ಯಾಂಗ್, ಈ ಕೇಸ್ಗೂ ಮುನ್ನ ಹಲವು ಸೈಬರ್ ಅರೆಸ್ಟ್ ಪ್ರಕರಣದಲ್ಲಿ ಭಾಗಿಯಾಗಿದ್ದರು. ಬ್ಯಾಂಕ್ಗಳ ಮೂಲಕ ಮಾಹಿತಿ ಪಡೆದುಕೊಂಡು ದೊಡ್ಡ ಉದ್ಯೋಗದಲ್ಲಿದ್ದು ನಿವೃತ್ತರಾದವರನ್ನೇ ಟಾರ್ಗೆಟ್ ಮಾಡುತ್ತಿದ್ದರು. ಹಣ ಬಂದ ನಂತರ ಹಲವು ಮ್ಯೂಲ್ ಖಾತೆಗಳಿಗೆ ಹಣ ವರ್ಗಾವಣೆ ಮಾಡುತ್ತಿದ್ದರು. ಕರ್ನಾಟಕದಲ್ಲಿ ಮಾತ್ರವಲ್ಲದೆ ಹಲವು ರಾಜ್ಯಗಳಲ್ಲಿ ಈ ಸೈಬರ್ ವಂಚಕರ ಗ್ಯಾಂಗ್ ವಿಸ್ತರಿಸಿಕೊಂಡಿದೆ. ಸದ್ಯ ಆರೋಪಿಗಳ ಅಕೌಂಟ್ನಲ್ಲಿದ್ದ 60 ಲಕ್ಷ ರೂ ಹಣವನ್ನು ಪೊಲೀಸರು ಫ್ರೀಜ್ ಮಾಡಿದ್ದಾರೆ.
ಬೆಂಗಳೂರಿನ ಶಿವಾಜಿನಗರ ನಿವಾಸಿ ಲಕ್ಷ್ಮೀ ರಾಮಮೂರ್ತಿಗೆ (74) ಖದೀಮರು ವಂಚಿಸಿದ್ದಾರೆ. ಮನಿ ಲ್ಯಾಂಡರಿಂಗ್ ಕೇಸ್ ಹೆಸರಿನಲ್ಲಿ ತಿಂಗಳಗಟ್ಟಲೆ ಡಿಜಿಟಲ್ ಅರೆಸ್ಟ್ ಮಾಡಿ ಬರೋಬ್ಬರಿ 24 ಕೋಟಿ ರೂ ವಂಚನೆ ಮಾಡಿದ್ದಾರೆ. ಲಕ್ಷ್ಮೀ ರಾಮಮೂರ್ತಿ ಅವರು ಈ ಹಿಂದೆ ದುಬೈನಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡಿ ನಿವೃತ್ತಿಯಾಗಿದ್ದರು.
ಬೆಂಗಳೂರು ಮತ್ತು ಮುಂಬೈನಲ್ಲಿ ಇದ್ದ ಆಸ್ತಿಗಳನ್ನು ಮಾರಾಟ ಮಾಡಿ ಅಮೆರಿಕಾದಲ್ಲಿರುವ ಮಕ್ಕಳ ಜೊತೆ ನೆಲೆಸಲು ಮುಂದ್ದಾಗಿದ್ದರು. ಆದರೆ ಇದೇ ಹಣದ ಮೇಲೆ ಕಣ್ಣು ಹಾಕಿದ್ದ ಸೈಬರ್ ಖದೀಮರು ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವಿಡಿಯೋ ಕರೆ ಮಾಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಮಾಡಿದ್ದೀರಾ, ನಿಮ್ಮ ಬ್ಯಾಂಕ್ ಖಾತೆಯಲ್ಲಿನ ಹಣ ಮತ್ತು ಅಕೌಂಟ್ ಮನಿ ಲ್ಯಾಂಡರಿಂಗ್ಗೆ ಬಳಕೆಯಾಗಿದೆ. ನೀವು ಯಾರ ಜೊತೆಯೂ ಮಾತನಾಡಬಾರದು. ಎಲ್ಲಾ ಹಣವನ್ನು ಪರಿಶೀಲನೆಗೆ ಕಳುಹಿಸಿ ಎಂದು ಆರ್ಟಿಜಿಎಸ್ ಮೂಲಕ ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾರೆ.
ಇದನ್ನೂ ಓದಿ: ಉಂಡ ಮನೆಗೆ ಕನ್ನ ಹಾಕಿದ ಆಸಾಮಿ: ಕರ್ನಾಟಕ ಬ್ಯಾಂಕ್ಗೆ 16 ಲಕ್ಷ ರೂ ವಂಚನೆ
ಕಳೆದ ಜನವರಿಯಿಂದ ಮೇ ತಿಂಗಳವರೆಗೆ ನಿರಂತರವಾಗಿ ವೃದ್ದೆಯನ್ನು ಬೆದರಿಸಿದ್ದ ವಂಚಕರು, ಹಂತ ಹಂತವಾಗಿ ಬರೋಬ್ಬರಿ 24 ಕೋಟಿ ರೂ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಲಕ್ಷ್ಮೀ ಅವರಿಂದ ಬಂದ ಹಣವನ್ನು 20ಕ್ಕೂ ಹೆಚ್ಚು ಅಕೌಂಟ್ಗಳಿಗೆ ಹಣ ವರ್ಗಾವಣೆ ಮಾಡಿದ್ದರು.
ವರದಿ: ವಿಕಾಸ್ ಕ್ರೈಂ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.