AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಮುಂದಿನ 3-4 ದಿನ ರಾಜ್ಯಾದ್ಯಂತ ಭಾರೀ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ!

Monsoon 2026: ಬಂಗಾಳ ಉಪಸಾಗರದ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ 4 ದಿನ ಭಾರೀ ಮಳೆಯಾಗಲಿದ್ದು, ರಾಜ್ಯದೆಲ್ಲೆಡೆ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮತ್ತೊಂದೆಡೆ, ಈ ಬಾರಿ ನೈಋತ್ಯ ಮುಂಗಾರು ಮಳೆಯು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಅಂದರೆ ಮೇ 26 ರಂದು ಕೇರಳ ಪ್ರವೇಶಿಸಲಿದ್ದು, ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಆಗಮಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.​

Karnataka Weather Forecast: ಮುಂದಿನ 3-4 ದಿನ ರಾಜ್ಯಾದ್ಯಂತ ಭಾರೀ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ!
ಮುಂದಿನ 3-4 ದಿನ ರಾಜ್ಯಾದ್ಯಂತ ಭಾರೀ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ!
ಭಾವನಾ ಹೆಗಡೆ
|

Updated on: May 16, 2026 | 7:18 AM

Share

ಬೆಂಗಳೂರು, ಮೇ 16: ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 3 ರಿಂದ 4 ದಿನಗಳ ಕಾಲ (ಮೇ 15 ರಿಂದ 18 ರವರೆಗೆ) ಕರ್ನಾಟಕದಾದ್ಯಂತ ಗುಡುಗು, ಸಿಡಿಲು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ  (Weather)  ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಗಲಿನಲ್ಲಿ ತಾಪಮಾನ ಏರಿಕೆಯಾಗಿ ಬಿಸಿಲಿನ ಬೇಗೆ ಮುಂದುವರಿದರೂ, ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ಸಂಜೆ ಅಥವಾ ರಾತ್ರಿಯ ವೇಳೆಗೆ ಬಿರುಗಾಳಿ ಸಹಿತ ಸಾಧಾರಣದಿಂದ ಭಾರೀ ಮಳೆಯಾಗಲಿದೆ. ಸಿಡಿಲು ಮತ್ತು 40-50 ಕಿ.ಮೀ ವೇಗದ ಗಾಳಿಯ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚಿಸಲಾಗಿದೆ.

ಮುಖ್ಯಾಂಶಗಳು

  • ಮುಂದಿನ ನಾಲ್ಕು ದಿನ ಕರ್ನಾಟಕದಾದ್ಯಂತ ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ.
  • ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಅಲರ್ಟ್ ಘೋಷಣೆ.
  • ಮೇ 26ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ; ಜೂನ್ ಆರಂಭದಲ್ಲಿ ಕರ್ನಾಟಕಕ್ಕೆ ಆಗಮನ.

ಎಲ್ಲೆಲ್ಲಿ ಮಳೆ?

ಮುಂದಿನ ಮೂರು ದಿನಗಳ ಕಾಲ ರಾಜ್ಯದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಒಳನಾಡಿಗೆ ಈ ಎರಡು ದಿನ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತನ್ನ ಅಧಿಕೃತ X ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಕೋರಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ತುಮಕೂರು, ಮಂಡ್ಯ, ರಾಮನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೇ 18 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗದಲ್ಲಿ 64.5mm ನಿಂದ 115.5mm ವರೆಗೆ ಮಳೆ ದಾಖಲಾಗುವ ನಿರೀಕ್ಷೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ವಿಜಯಪುರ, ಕಲಬುರಗಿ, ಗದಗ, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಹವಾಮಾನದಲ್ಲಿ ಭಾರೀ ಏರುಪೇರಾಗಲಿದೆ. ಇಂದು ಮತ್ತು ನಾಳೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಕೆಲವು ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗುವ (Hailstorm) ಮುನ್ಸೂಚನೆ ಇರುವುದರಿಂದ ಈ ಭಾಗಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮುಂದಿನ ದಿನಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ಮುಂಗಾರು ಪ್ರವೇಶ: ಮೇ 26ಕ್ಕೆ ಕೇರಳಂಗೆ, ಕರ್ನಾಟಕಕ್ಕೆ ಯಾವಾಗ ಎಂಟ್ರಿ?

ಮುಂಗಾರು ಮಳೆಯ ಆಗಮನ

ದೇಶದ ಕೃಷಿ ವಲಯದ ಜೀವನಾಡಿಯಾಗಿರುವ ನೈಋತ್ಯ ಮುಂಗಾರು ಮಳೆಯು ಈ ವರ್ಷ ನಿಗದಿತ ಸಮಯಕ್ಕಿಂತ ಒಂದು ವಾರ ಮುಂಚಿತವಾಗಿಯೇ ಅಂದರೆ ಮೇ 26 ರಂದೇ ಕೇರಳವನ್ನು ಪ್ರವೇಶಿಸಲಿದೆ ಎಂದು ಐಎಂಡಿ ತಿಳಿಸಿದೆ. ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ತಲುಪಿರುವ ಮುಂಗಾರು, ಅಲ್ಲಿಂದ ವೇಗವಾಗಿ ಭಾರತದ ಪ್ರಧಾನ ಭೂಭಾಗದತ್ತ ಮುನ್ನಡೆಯುತ್ತಿದೆ. ಕೇರಳಕ್ಕೆ ಮುಂಗಾರು ಅಪ್ಪಳಿಸಿದ ಕೇವಲ ಒಂದು ವಾರದಲ್ಲಿ, ಅಂದರೆ ಜೂನ್ ಮೊದಲ ವಾರದಲ್ಲೇ ಕರ್ನಾಟಕಕ್ಕೂ ಮುಂಗಾರು ಪ್ರವೇಶಿಸಲಿದೆ. ಕಳೆದ ವರ್ಷ ತೀವ್ರ ಬರಗಾಲ ಎದುರಿಸಿದ್ದ ಕರುನಾಡಿನ ರೈತರಿಗೆ ಈ ಮುಂಚಿತ ಮುಂಗಾರಿನ ವರದಿ ಹೊಸ ಭರವಸೆ ಮತ್ತು ಸಂತಸವನ್ನು ತಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More