
ಬೆಂಗಳೂರು, ಮೇ 18: ಹವಾಮಾನ ಇಲಾಖೆಯು ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ (Weather)ಮತ್ತು ಗಾಳಿ ಸಹಿತ ಗುಡುಗು ಸಿಡಿಲಿನ ಮುನ್ಸೂಚನೆ ನೀಡಿದೆ. ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವರುಣನ ಅಬ್ಬರ ಜೋರಾಗಿರಲಿದ್ದು, ಹವಾಮಾನ ಇಲಾಖೆಯು ರಾಜ್ಯದ ಹಲವು ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರಿ ಮಳೆ ಹಾಗೂ ಆಲಿಕಲ್ಲು ಮಳೆಯ ಮುನ್ನೆಚ್ಚರಿಕೆಯನ್ನು ನೀಡಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಆಲಿಕಲ್ಲು ಮಳೆಯಾಗುವ (Hailstorm) ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ.
ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸಲಿದ್ದು, ಆಲಿಕಲ್ಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯೊಂದಿಗೆ ಆಲಿಕಲ್ಲು ಜೊತೆಗೆ ವರುಣಾರ್ಭಟವಿರಲಿದ್ದು, ಈ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ನೀಡಲಾಗಿದೆ.
ಆಲಿಕಲ್ಲು ಮಳೆ ಮತ್ತು ಬಿರುಗಾಳಿ ಬೀಸುವ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು. ಪ್ರಮುಖವಾಗಿ ರೈತರು ಹಾಗೂ ಜಾನುವಾರು ಸಾಕಣೆದಾರರು ಹವಾಮಾನ ವೈಪರೀತ್ಯದ ಬಗ್ಗೆ ಎಚ್ಚರಿಕೆ ವಹಿಸಲು ಕೋರಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಹಾಗೂ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಈ ಭಾಗಕ್ಕೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ನಿರೀಕ್ಷೆಯಿದೆ.
ರಾಯಚೂರು, ಯಾದಗಿರಿ, ವಿಜಯಾಪುರ, ಬೆಳಗಾವಿ, ಬಾಗಲಕೋಟೆ ಸೇರಿದಂತೆ ಚಿಕ್ಕಮಗಳೂರು, ಹಾಸನ, ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ. ಉಳಿದ ಉತ್ತರ ಒಳನಾಡಿನ ಭಾಗಗಳಲ್ಲಿ ಒಣ ಹವಾಮಾನ ಇರಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ ಅಬ್ಬರ; ಸಿಡಿಲು ಬಡಿದು ಇಬ್ಬರು ಸಾವು, ಶಿವಮೊಗ್ಗದಲ್ಲಿ ರೈಲು ಸಂಚಾರ ವ್ಯತ್ಯಯ
ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ತೀರದಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ (ಕೆಲವೊಮ್ಮೆ 60 ಕಿ.ಮೀ ವರೆಗೆ) ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ, ಮೇ 19ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಮುಂದಿನ 5 ದಿನಗಳ ಕಾಲ ರಾಜ್ಯದ ಗರಿಷ್ಠ ತಾಪಮಾನದಲ್ಲಿ ಯಾವುದೇ ಮಹತ್ತರ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ. ಸಿಡಿಲು ಮತ್ತು ಬಿರುಗಾಳಿ ಬೀಸುವ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಕೋರಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ