ಕರ್ನಾಟಕದಲ್ಲಿ ಧಾರಾಕಾರ ಮಳೆ: ಶಾಲೆಗಳಿಗೆ ರಜೆ ನೀಡುವ ಅಧಿಕಾರಿ ಡಿಸಿಗಳಿಗೆ, ಶಿಕ್ಷಣ ಇಲಾಖೆ ಸುತ್ತೋಲೆ
ಮಳೆಯಿಂದಾಗಿ ಶಾಲೆಗಳಿಗೆ ಬರಲು ವಿದ್ಯಾರ್ಥಿಗಳಿಗೆ ಕಷ್ಟವಾಗುವಂತಿದ್ದರೆ ಜಿಲ್ಲಾಧಿಕಾರಿಗಳೇ ಅಗತ್ಯ ಕ್ರಮಕೈಗೊಳ್ಳಬಹುದು ಎಂದು ಶಿಕ್ಷಣ ಇಲಾಖೆ ಹೇಳಿದೆ.
![ಕರ್ನಾಟಕದಲ್ಲಿ ಧಾರಾಕಾರ ಮಳೆ: ಶಾಲೆಗಳಿಗೆ ರಜೆ ನೀಡುವ ಅಧಿಕಾರಿ ಡಿಸಿಗಳಿಗೆ, ಶಿಕ್ಷಣ ಇಲಾಖೆ ಸುತ್ತೋಲೆ](https://images.tv9kannada.com/wp-content/uploads/2021/11/Rain-School-Karnataka.jpg?w=1280)
ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಇತರ ಜಿಲ್ಲೆಗಳಲ್ಲೂ ಪರಿಸ್ಥಿತಿ ನೋಡಿಕೊಂಡು ರಜೆ ನೀಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಮಳೆಯಿಂದಾಗಿ ಶಾಲೆಗಳಿಗೆ ಬರಲು ವಿದ್ಯಾರ್ಥಿಗಳಿಗೆ ಕಷ್ಟವಾಗುವಂತಿದ್ದರೆ ಜಿಲ್ಲಾಧಿಕಾರಿಗಳೇ ಅಗತ್ಯ ಕ್ರಮಕೈಗೊಳ್ಳಬಹುದು ಎಂದು ಶಿಕ್ಷಣ ಇಲಾಖೆ ಹೇಳಿದೆ.
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇದೇ ಪರಿಸ್ಥಿತಿ ಇನ್ನೂ ಒಂದು ವಾರ ಮುಂದುವರಿಯುವ ಸಾಧ್ಯತೆಯಿದೆ. ನವೆಂಬರ್ 23ರವರೆಗೆ ಭಾರಿ ಮಳೆ ನಿರೀಕ್ಷಿತ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯುವ ಭೀತಿ ಎದುರಾಗಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
![Govt-Order-School-Holiday](https://tv9kannadamedia.s3.amazonaws.com/wp-content/uploads/2021/11/Govt-Order-School-Holiday.jpg)
ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆ
ಧಾರಾಕಾರ ಮಳೆಯಿಂದ ಬೆಂಗಳೂರಿನಲ್ಲಿ ವ್ಯಾಪಾರ ಕಳೆಗುಂದಿದೆ. ಖರೀದಿ ಮಾಡಬೇಕು ಎಂದುಕೊಂಡಿರುವ ಗ್ರಾಹಕರು ಮತ್ತು ವ್ಯಾಪಾರಕ್ಕೆಂದು ಅಂಗಡಿ ಬಾಗಿಲು ತೆಗೆದಿರುವ ವ್ಯಾಪಾರಸ್ಥರು ವಾಣಿಜ್ಯ ಚಟುವಟಿಕೆ ನಡೆಸಲು ಆಸ್ಪದವಿಲ್ಲದೆ ಕಂಗಾಲಾಗಿದ್ದಾರೆ.
‘ಕಳೆದ 15 ದಿನಗಳಿಂದ ಮದುವೆಗೆ ಬಟ್ಟೆ ಖರೀದಿ ಮಾಡಬೇಕು ಎಂದು ಎಂದುಕೊಂಡಿದ್ದೆವು. ಆದರೆ ಪ್ರತಿದಿನ ಮಳೆ ಸುರಿಯುತ್ತಿದೆ. ಮಳೆ ನಿಲ್ಲಲಿ ಎಂದು ಕಾಯುತ್ತಾ ಕುಳಿತರೆ ಮದುವೆ ದಿನ ಹತ್ತಿರ ಬರುತ್ತೆ. ಹೀಗಾಗಿ ಮಳೆ ನಡುವೆಯೇ ವ್ಯಾಪಾರ ಮಾಡಲು ಬಂದಿದ್ದೇವೆ. ಈಗ ಆಟೋದಲ್ಲಿ ಹೋಗ್ಬೇಕಂದ್ರೆ ಡಬಲ್ ಕೇಳ್ತಾರೆ. ಏನೂ ಮಾಡೋಕೆ ಆಗೊಲ್ಲ ಕೇಳಿದಷ್ಟು ಕೊಟ್ಟು ಹೋಗಬೇಕಾಗಿದೆ’ ಎಂದು ಬಟ್ಟೆ ಖರೀದಿಗೆಂದು ಚಿಕ್ಕಪೇಟೆಯ ಅಂಗಡಿಗೆ ಬಂದಿದ್ದ ಮಹಿಳೆಯೊಬ್ಬರು ಪ್ರತಿಕ್ರಿಯಿಸಿದರು.
ತಮ್ಮ ಪರಿಸ್ಥಿತಿ ವಿವರಿಸಿದ ಚಿಕ್ಕಪೇಟೆ ಬಟ್ಟೆ ಅಂಗಡಿ ವ್ಯಾಪಾರಿಗಳು, ‘ಜಿಟಿಜಿಟಿ ಮಳೆಗೆ ತುಂಬಾ ನಷ್ಟ ಆಗಿದೆ. ಜನರು ಮನೆಯಿಂದ ಹೊರಗೆ ಬರ್ತಿಲ್ಲ. ಶೇ 70ರಷ್ಟು ವ್ಯಾಪಾರ ಕುಸಿದಿದೆ. ಕೊರೊನಾ ಬಳಿಕ ಈಗಷ್ಟೇ ಚೇತರಿಸಿಕೊಳ್ತಿದ್ವಿ. ಮಳೆ ಹೀಗೆ ಮುಂದುವರಿದ್ರೆ ಕಷ್ಟವಾಗುತ್ತೆ. ಮದುವೆ, ತುರ್ತು ಕಾರ್ಯಕ್ರಮಗಳಿಗೆ ಬೇಕಾದವರು ಮಾತ್ರ ಬರ್ತಿದ್ದಾರೆ ಎಂದು ಅಲವತ್ತುಕೊಂಡರು.
ಇದನ್ನೂ ಓದಿ: Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದುವರಿದ ಮಳೆ: 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಇದನ್ನೂ ಓದಿ: ರಾಜ್ಯದ ಹಲವೆಡೆ ಭಾರಿ ಮಳೆ; ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರ ರಕ್ಷಣೆ
Published On - 8:39 pm, Thu, 18 November 21