AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಚಳಿಯ ಮುನ್ಸೂಚನೆ, 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

Karnataka Weather: ರಾಜ್ಯದೆಲ್ಲೆಡೆ ಇನ್ನೆರಡು ದಿನಗಳಲ್ಲಿ ಶೀತದಲೆ ಅಪ್ಪಳಿಸಲಿದ್ದು, ಕನಿಷ್ಠ ತಾಪಮಾನ 9°C ಗೆ ಇಳಿಯುವ ಸಾಧ್ಯತೆಯಿದೆ. ಈ ಹಿನ್ನೆಲೆ ಬೀದರ್, ಕಲಬುರಗಿ ಸೇರಿ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿರುವ ಹವಾಮಾನ ಇಲಾಖೆ, ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಸಲಹೆ ನೀಡಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿಯಿದ್ದು, ಮಂಜು ಕವಿದ ವಾತಾವರಣ ಇರಲಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಚಳಿಯ ಮುನ್ಸೂಚನೆ, 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​
ರಾಜ್ಯದಲ್ಲಿ ಶೀತದಲೆಯ ಮುನ್ಸೂಚನೆ, 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​
ಭಾವನಾ ಹೆಗಡೆ
|

Updated on:Dec 14, 2025 | 7:39 AM

Share

ಬೆಂಗಳೂರು, ಡಿಸೆಂಬರ್ 14: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೈಕೊರೆಯುವ ಚಳಿ (Weather Forecast) ಜನಜೀವನವನ್ನು ತತ್ತರಗೊಳಿಸಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಕನಿಷ್ಠ ತಾಪಮಾನ 14–15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಹೆಚ್‌ಎಎಲ್ ವ್ಯಾಪ್ತಿಯಲ್ಲಿ ನಿನ್ನೆ 13 ಡಿಗ್ರಿ ಸೆಲ್ಸಿಯಸ್ ತನಕ ತಾಪಮಾನ ಇಳಿಕೆಯಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳಲ್ಲಿ ಶೀತದ ಅಲೆಗಳು ಉಂಟಾಗುವ ಸಾಧ್ಯತೆಯಿದ್ದು, 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ರಾಜ್ಯದಲ್ಲಿ 9 ಡಿಗ್ರಿಗಿಳಿಯಲಿರುವ ತಾಪಮಾನ

ಡಿಸೆಂಬರ್ 14, 15 ಹಾಗೂ 16ರಂದು ಚಳಿ ಜೊತೆ ರಾಜ್ಯದಲ್ಲಿ ಶೀತಗಾಳಿ ಬೀಸುವ ಸಾಧ್ಯತೆ ಇದ್ದು, ಬೀದರ್, ಕಲಬುರಗಿ, ರಾಜಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಹಾಸನ, ಚಿಕ್ಕಬಳ್ಳಾಪುರ, ಶಿವಮೊಗ್ಗ, ದಾವಣಗೆರೆ, ಹಾವೇರಿ, ಬಳ್ಳಾರಿ, ಗದಗ, ಕೊಪ್ಪಳ, ಬಾಗಲಕೋಟೆ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಈ ಎಲ್ಲಾ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 9 ರಿಂದ 12 ಡಿಗ್ರಿ ಸೆಲ್ಸಿಯಸ್ ಮಟ್ಟಕ್ಕೆ ಇಳಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿಯೂ ಕನಿಷ್ಠ ತಾಪಮಾನ 12ರಿಂದ 13 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಬೆಂಗಳೂರಿನಲ್ಲಿ 12ರಿಂದ 14 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ಉತ್ತರ ಭಾರತದಿಂದ ಒಣಹವೆ ಪ್ರವೇಶಿಸಿರುವುದೇ ಚಳಿ ಹೆಚ್ಚಾಗಲು ಪ್ರಮುಖ ಕಾರಣವೆಂದು ಹವಮಾನ ಇಲಾಖೆಯ ವಿಜ್ಞಾನಿ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಡಿಸೆಂಬರ್ 17ರ ನಂತರ ಚಳಿ ನಿಧಾನವಾಗಿ ಕಡಿಮೆಯಾಗಲಿದ್ದು, ತಾಪಮಾನ ಏರಿಕೆಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಮಕ್ಕಳು ಹಾಗೂ ವಯಸ್ಸಾದವರು ಮುಂಜಾನೆ ವಾಕ್ ಮಾಡುವುದನ್ನು ತಪ್ಪಿಸಬೇಕು. ಸಂಜೆ ಬಳಿಕ ಹೊರಾಂಗಣ ಚಟುವಟಿಕೆ ನಡೆಸುವುದು ಉತ್ತಮ ಎಂದು ಸಲಹೆ ನೀಡಲಾಗಿದೆ. ಬಿಸಿ ನೀರು ಬಳಸುವುದು, ಸಮತೋಲನ ಆಹಾರ ಸೇವನೆ, ಹಿಟರ್ ಬಳಕೆ ಹಾಗೂ ಉಣ್ಣೆಯ ಬಟ್ಟೆ ಧರಿಸುವುದು ಒಳಿತು ಎಂದು ಹವಮಾನ ಇಲಾಖೆ ಸೂಚಿಸಿದೆ.

ಎಲ್ಲೆಲ್ಲಿ ಒಣ ಹವೆ

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ ಕರ್ನಾಟಕ ಹವಾಮಾನ ವರದಿ: ಇನ್ನೆರಡು ದಿನಗಳಲ್ಲಿ ಬೆಳಗಾವಿ, ಬೀದರ್ ಸೇರಿ ಹಲವೆಡೆ ಶೀತದಲೆಯ ಮುನ್ಸೂಚನೆ

ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ

ಬೆಂಗಳೂರಲ್ಲಿ ಇಂದು ಮಂಜು ಮುಸುಕಿದ ವಾತಾವರಣವಿದ್ದು, ಚಳಿಯ ಪ್ರಮಾಣ ಹೆಚ್ಚುತ್ತಲೇ ಇದೆ. ಗಾಳಿಯ ವೇಗ ಪ್ರತಿ ಗಂಟೆಗೆ 8 ಕಿ.ಮೀ ಇರಲಿದೆ. ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 14.°C ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:29 am, Sun, 14 December 25