Karnataka Weather Forecast: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
Monsoon 2026: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮತ್ತು ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.

ಬೆಂಗಳೂರು, ಜೂನ್ 12: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿರಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ.
ಮುಖ್ಯಾಂಶಗಳು
- ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ, ಭಾರಿ ಮಳೆಯ ಮುನ್ಸೂಚನೆ.
- ಉತ್ತರ ಒಳನಾಡು ಮತ್ತು ಮಲೆನಾಡು ಭಾಗಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
- ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಹವಾಮಾನ ಇಲಾಖೆ ಸೂಚನೆ.
ಕರಾವಳಿಗೆ ಆರೆಂಜ್ ಅಲರ್ಟ್
ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲವು ಗಂಟೆಗಳಲ್ಲಿ ಭಾರಿ ಇಂದ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಭಾಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಉತ್ತರ ಒಳನಾಡಿನಲ್ಲಿ ಭಾರೀ ಮಳೆ
ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಮಲೆನಾಡು ಭಾಗಕ್ಕೆ ಹೈ ಅಲರ್ಟ್
ಮಲೆನಾಡು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗಗಳಲ್ಲಿ 30-40 ಕಿ.ಮೀ ವೇಗದ ಗಾಳಿ ಬೀಸಲಿದೆ.
ಭಾರಿ ಮಳೆ ಮತ್ತು ಗಾಳಿಯ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಮತ್ತು ರೈತರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಹಾಗೂ ಹಳೆಯ ಕಟ್ಟಡ/ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಹವಾಮಾನ ಇಲಾಖೆ ಸೂಚಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.




