
ಬೆಂಗಳೂರು, ಮೇ 01: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 2 ದಿನಗಳಿಂದ ಆಲಿಕಲ್ಲು (Karnataka Weather) ಮಳೆಯಾಗುತ್ತಿದ್ದು, ಇಂದೂ ಸಹ ಕರಾವಳಿ ಹೊರತುಪಡಿಸಿ ಉಳಿದೆಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ದಕ್ಷಿಣ ಕರ್ನಾಟಕದ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕಲಬುರಗಿ, ರಾಯಚೂರು ಸೇರಿದಂತೆ ಹಲವೆಡೆ ಇಂದು ಗರಿಷ್ಠ 42-42 ಡಿಗ್ರಿ ಸೆಲ್ಸಿಯಸ್ನಷ್ಟು ತಾಪಮಾನವಿರಲಿದ್ದು, ಇನ್ನೂ 3 ದಿನ ಇದೇ ವಾತಾವರಣ ಇರಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದೆಡೆ ಶುಷ್ಕ ವಾತಾವರಣವಿರಲಿದೆ. ಉತ್ತರ ಒಳನಾಡಿನ ರಾಯಚೂರು, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದಂತೆ ಎಲ್ಲೆಡೆ ಶುಷ್ಕ ಹವಾಮಾನ ಇರಲಿದೆ.
ದಕ್ಷಿಣ ಒಳನಾಡಿನ ಮೈಸೂರು, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಚಾಮರಾಜನಗರದಲ್ಲಿ ಗುಡುಗು ಸಿಡಿಲು, ಆಲಿಕಲ್ಲು ಸಹಿತ ಜೋರು ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಮಂಡ್ಯ ಮತ್ತು ತುಮಕೂರಿನಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಮಂಡ್ಯ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಬೆಂಗಳೂರು ಮಳೆಗೆ ಮತ್ತೊಂದು ಸಾವು; ಜೆ.ಪಿ. ನಗರದ ಮಿನಿ ಫಾರೆಸ್ಟ್ ಬಳಿ ಶಾಕ್ ಹೊಡೆದು ರಘು ದುರ್ಮರಣ, ಒಟ್ಟು 9 ಬಲಿ!
ಬುಧವಾರ ಸಂಜೆ ಬೆಂಗಳೂರಿನಲ್ಲಿ ಸುರಿದ ಮಳೆ ಹಲವರನ್ನು ಬಲಿ ಪಡೆದಿದೆ. ಜೆ.ಪಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದಕ್ಕೂ ಮುನ್ನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತದಿಂದ 7 ಜನರು ಸಾವನ್ನಪ್ಪಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ