AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರಕ್ಕೆ ಬ್ರೇಕ್! ಉತ್ತರ ಕರ್ನಾಟಕದಲ್ಲಿ ಒಣ ಹವೆಯ ಮುನ್ಸೂಚನೆ

Monsoon 2026: ಕರ್ನಾಟಕದಲ್ಲಿ ಮಳೆಯ ಅಬ್ಬರ ತಗ್ಗಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ರೆಡ್ ಅಲರ್ಟ್ ಮುಕ್ತಾಯಗೊಂಡು ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ. ಮುಂದಿನ ಕೆಲವು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಮಲೆನಾಡಿನ ಕೆಲವೆಡೆ ಹಗುರ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ.

Karnataka Weather Forecast: ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರಕ್ಕೆ ಬ್ರೇಕ್! ಉತ್ತರ ಕರ್ನಾಟಕದಲ್ಲಿ ಒಣ ಹವೆಯ ಮುನ್ಸೂಚನೆ
ಮಲೆನಾಡಿನ ಒಂದೆರಡು ಕಡೆಗಳಲ್ಲಿ ಮಾತ್ರ ಸಾಧಾರಣ ಮಳೆಯ ಮುನ್ಸೂಚನೆ. Image Credit source: India Today
ಭಾವನಾ ಹೆಗಡೆ
|

Updated on: Jul 12, 2026 | 7:24 AM

Share

ಮುಖ್ಯಾಂಶಗಳು

  • ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
  • ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ.
  • ಮಲೆನಾಡಿನ ಒಂದೆರಡು ಕಡೆಗಳಲ್ಲಿ ಮಾತ್ರ ಸಾಧಾರಣ ಮಳೆಯ ಮುನ್ಸೂಚನೆ.

ಬೆಂಗಳೂರು, ಜುಲೈ 12: ಕಳೆದ ಕೆಲವು ದಿನಗಳಿಂದ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ (Weather) ಅಬ್ಬರ ಜೋರಾಗಿತ್ತು. ನಿರಂತರವಾಗಿ ಸುರಿದ ಭಾರೀ ಮಳೆಯಿಂದಾಗಿ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿತ್ತು ಹಾಗೂ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು. ಆದರೆ, ಇದೀಗ ಮಳೆಯ ತೀವ್ರತೆ ಗಣನೀಯವಾಗಿ ಕಡಿಮೆಯಾಗಿದ್ದು, ಪರಿಸ್ಥಿತಿ ಸುಧಾರಿಸಿದಂತೆ ಕಾಣುತ್ತಿದೆ.

ಅಂತೂ ಶಾಂತವಾದ ಮಳೆರಾಯ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಕಳೆದ ವಾರಕ್ಕೆ ಹೋಲಿಸಿದರೆ ಮಳೆಯ ಪ್ರಮಾಣ ತಗ್ಗಿದೆ. ಆದಾಗ್ಯೂ, ಈ ಮೂರೂ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದರೆ ಎಲ್ಲಿಯೂ ಭಾರೀ ಮಳೆಯ ಮುನ್ನೆಚ್ಚರಿಕೆ ಇಲ್ಲದ ಕಾರಣ ಸದ್ಯಕ್ಕೆ ಯಾವುದೇ ಆತಂಕ ಬೇಡ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂಬರುವ ದಿನಗಳಲ್ಲಿ ಒಣ ಹವೆಯ ಸೂಚನೆ

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ್, ಹಾವೇರಿ, ಕಲ್ಬುರ್ಗಿ, ಬೀದರ್ ಸೇರಿದಂತೆ ಇತರೆ ಭಾಗಗಳಲ್ಲಿ ಮಳೆ ಸಂಪೂರ್ಣವಾಗಿ ಕ್ಷೀಣಿಸಿದೆ. ಈ ವಲಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆಯಾದರೂ, ಮಳೆಯ ಲಕ್ಷಣಗಳಿಲ್ಲ.

ಸಾಧಾರಣ ಮಳೆ, ಗಾಳಿ

ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಉಳಿದಂತೆ ಬೆಂಗಳೂರು, ಮೈಸೂರು, ಹಾಸನ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಪ್ರಮುಖವಾಗಿ ಒಣ ಹವೆ ಇರಲಿದ್ದು, ಅಲ್ಲಲ್ಲಿ ಸಾಧಾರಣ ಗಾಳಿ ಬೀಸುವ ಸಾಧ್ಯತೆ ಇದೆ. ಒಟ್ಟಾರೆ ಕರಾವಳಿ ಹಾಗೂ ಮಲೆನಾಡನ್ನು ಬೆಚ್ಚಿಬೀಳಿಸಿದ್ದ ರೆಡ್ ಅಲರ್ಟ್ ದಿನಗಳು ಸದ್ಯಕ್ಕೆ ಮುಗಿದಿದ್ದು, ಇಡೀ ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಸದ್ಯಕ್ಕೆ ತಣ್ಣಗಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us