AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ: ಸಿಇಟಿ ಪರೀಕ್ಷೆಯೊಂದಿಗೇ ಮತ್ತೆ ಶುರುವಾಯ್ತು ವಿವಾದ

ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಲಾಗಿದೆ ಎಂಬ ದೂರು ಕೇಳಿಬಂದಿದ್ದು, ಆಕ್ರೋಶ ವ್ಯಕ್ತವಾಗಿದೆ. ಕಳೆದ ವರ್ಷ ಶಿವಮೊಗ್ಗ ಹಾಗೂ ಬೀದರ್​​ನಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದು ಭಾರಿ ಸದ್ದುಮಾಡಿತ್ತು. ಇದೀಗ ಈ ವರ್ಷವೂ ಅಂತಹದ್ದೇ ಘಟನೆ ಮರುಕಳಿಸಿ ಆರೋಪ ಕೇಳಿಬಂದಿದ್ದು, ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ: ಸಿಇಟಿ ಪರೀಕ್ಷೆಯೊಂದಿಗೇ ಮತ್ತೆ ಶುರುವಾಯ್ತು ವಿವಾದ
ಸಿಇಟಿ ಪರೀಕ್ಷೆಯ ಸಾಂದರ್ಭಿಕ ಚಿತ್ರ ಹಾಗೂ ಜನಿವಾರImage Credit source: Google Gemini and Tv9
Vinay Kashappanavar
| Edited By: |

Updated on: Apr 24, 2026 | 9:56 AM

Share

ಬೆಂಗಳೂರು, ಏಪ್ರಿಲ್ 24: ಕರ್ನಾಟಕದಾದ್ಯಂತ ಸಿಇಟಿ (KCET) ಪರೀಕ್ಷೆಗಳು ಆರಂಭವಾಗಿದ್ದು, ಮೊದಲ ದಿನವೇ ರಾಜಧಾನಿ ಬೆಂಗಳೂರಿನಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಆರೋಪ ವ್ಯಕ್ತವಾಗಿದೆ. ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರವನ್ನು (Sacred Thread) ಬಲವಂತವಾಗಿ ತೆಗೆಸಿ ಪರೀಕ್ಷೆಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದರೊಂದಿಗೆ, ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ವಿವಾದ ಮುನ್ನೆಲೆಗೆ ಬಂದಂತಾಗಿದೆ.

ಬೆಂಗಳೂರಿನ ಕಾಲೇಜಿನಲ್ಲಿ ನಡೆದಿದ್ದೇನು?

ಗುರುವಾರ (ಏಪ್ರಿಲ್ 23) ನಡೆದ ಪರೀಕ್ಷೆ ವೇಳೆ ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಪಾಸಣೆ ನೆಪದಲ್ಲಿ ಅಡ್ಡಗಟ್ಟಿದ ಸಿಬ್ಬಂದಿ, ಜನಿವಾರ ತೆಗೆಯುವಂತೆ ಸೂಚಿಸಿದ್ದಾರೆ ಎಂಬ ಆರೋಪವಿದೆ. ಇದಕ್ಕೆ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದಾಗ, ‘ಜನಿವಾರ ತೆಗೆಯದಿದ್ದರೆ ಪರೀಕ್ಷಾ ಕೇಂದ್ರದಿಂದ ಹೊರಹೋಗಿ’ ಎಂದು ಧಮಕಿ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಕೊನೆಗೆ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪೋಷಕರು ಅನಿವಾರ್ಯವಾಗಿ ಜನಿವಾರವನ್ನು ತೆಗೆಸಿ ಮಗನನ್ನು ಪರೀಕ್ಷಾ ಕೊಠಡಿಗೆ ಕಳುಹಿಸಿದ್ದರು.

ಕಾಲೇಜಿಗೆ ಅಧಿಕಾರಿಗಳ ಭೇಟಿ

ಘಟನೆ ಸಂಚಲನ ಮೂಡಿಸುತ್ತಿದ್ದಂತೆಯೇ ಶಿಕ್ಷಣ ಇಲಾಖೆ ಮತ್ತು ಸಿಇಟಿ ಸೆಲ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೋಷಕರ ಮನವೊಲಿಸಲು ಯತ್ನಿಸಿದ ಅಧಿಕಾರಿಗಳು, ‘ಎಲ್ಲೂ ಈ ಬಗ್ಗೆ ದೂರು ನೀಡಬೇಡಿ’ ಎಂದು ಪತ್ರ ಬರೆಸಿಕೊಂಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ‘ಧಾರ್ಮಿಕ ಹಕ್ಕಿಗೆ ಧಕ್ಕೆ ತರುವ ಇಂತಹ ಕೃತ್ಯಗಳು ನಿಲ್ಲಬೇಕು’ ಎಂದು ಪೋಷಕರು ಮತ್ತು ಧಾರ್ಮಿಕ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತೆ ಮರುಕಳಿಸಿದ ವಿವಾದ

ಕಳೆದ ವರ್ಷವೂ (2025) ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ವಿವಾದಕ್ಕೀಡಾಗಿತ್ತು. ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜು ಮತ್ತು ಬೀದರ್‌ನ ಪರೀಕ್ಷಾ ಕೇಂದ್ರಗಳಲ್ಲಿ ಇದೇ ರೀತಿಯ ಘಟನೆಗಳು ನಡೆದು ಭಾರಿ ಸುದ್ದಿಯಾಗಿದ್ದವು. ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳ ಜನಿವಾರವನ್ನು ಕತ್ತರಿಸಿ ಕಸದ ಬುಟ್ಟಿಗೆ ಹಾಕಲಾಗಿತ್ತು, ಬೀದರ್‌ನಲ್ಲಿ ಜನಿವಾರ ತೆಗೆಯಲು ನಿರಾಕರಿಸಿದ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿತ್ತು.

ಇದನ್ನೂ ಓದಿ: ಕರ್ನಾಟಕ ಸಿಇಟಿ ಪರೀಕ್ಷೆ ಮತ್ತು ಜನಿವಾರ ವಿವಾದ: ಈವರೆಗೆ ನಡೆದಿದ್ದೇನು? ಇಲ್ಲಿದೆ ವಿವರ

ಈ ಕುರಿತು ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೂ ಸಲ್ಲಿಕೆಯಾಗಿದ್ದು, ಸರ್ಕಾರಕ್ಕೆ ನೋಟಿಸ್ ಜಾರಿಯಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us