ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಬಂಧನ ಕೇಸ್​: ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಿಷ್ಟು

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್, ಸಂಸದ ಪ್ರತಾಪ್ ಸಿಂಹ ಸೋದರ ವಿಕ್ರಂ ಸಿಂಹ ಅಕ್ರಮವಾಗಿ ಮರ ಕಡಿದಿರುವುದು ನಿಜ ಅಲ್ವಾ.​ ಅನುಮತಿ ಇಲ್ಲದೆ ಮರ ಕಡಿದಿದ್ದಾರೆ, ಆದ್ದರಿಂದ ಕ್ರಮ ಆಗಿದೆ ಎಂದು ಹೇಳಿದ್ದಾರೆ. ಪ್ರಕರಣದಲ್ಲಿ ಅನವಶ್ಯಕವಾಗಿ ರಾಜಕೀಯ ಬಣ್ಣ ಕೊಡುತ್ತಿದ್ದಾರೆ ಎಂದಿದ್ದಾರೆ.

ಬೆಂಗಳೂರು, ಡಿಸೆಂಬರ್​ 31: ಸಂಸದ ಪ್ರತಾಪ್ ಸಿಂಹ ಸೋದರ ವಿಕ್ರಂ ಸಿಂಹ ಅಕ್ರಮವಾಗಿ ಮರ ಕಡಿದಿರುವುದು ನಿಜ ಅಲ್ವಾ.​ ಅನುಮತಿ ಇಲ್ಲದೆ ಮರ ಕಡಿದಿದ್ದಾರೆ, ಆದ್ದರಿಂದ ಕ್ರಮ ಆಗಿದೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್​ (G Parameshwara) ಹೇಳಿದ್ದಾರೆ. ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಸಿಎಂ ಹೆಸರು ತರುವುದು ಬೇಡ. ಪ್ರಕರಣದಲ್ಲಿ ಅನವಶ್ಯಕವಾಗಿ ರಾಜಕೀಯ ಬಣ್ಣ ಕೊಡುತ್ತಿದ್ದಾರೆ ಎಂದಿದ್ದಾರೆ.

ಕೊವಿಡ್ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ

ಹೊಸ ವರ್ಷಾಚರಣೆ ವಿಚಾರವಾಗಿ ಮಾತನಾಡಿದ ಅವರು, ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ಆಗಬಾರದು. ವಾರದ ಹಿಂದೆಯೇ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ಆಗಿದೆ. ಪ್ರತಿ ವರ್ಷ ಬೆಂಗಳೂರು ನಗರದಲ್ಲಿ ಸಾವಿರಾರು ಜನ ಸೇರುತ್ತಾರೆ. ಎಂ.ಜಿ.ರೋಡ್, ಬ್ರಿಗೇಡ್ ರೋಡ್​ನಲ್ಲಿ ಹೆಚ್ಚಿನ ಜನ ಸೇರುತ್ತಾರೆ. ಹೀಗಾಗಿ ವಿಶೇಷ ಗಮನ ಕೊಡಬೇಕು ಅಂತಾ ಸೂಚನೆ ಕೊಟ್ಟಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ: ಹೊಸ ವರ್ಷ ಆಚರಣೆಗೆ ಬೆಂಗಳೂರು ಸೇರಿ ಹಲವೆಡೆ ಭರ್ಜರಿ ಸಿದ್ದತೆ; ಇಲ್ಲಿದೆ ವಿವರ

ಈ ಬಾರಿ ಎಲ್ಲರೂ ಸಂತೋಷದಿಂದ ಹೊಸ ವರ್ಷಾಚರಣೆ ಮಾಡಲಿ. ಕೊವಿಡ್ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. 60 ವರ್ಷ ಮೇಲ್ಪಟ್ಟವರು ಮಾಸ್ಕ್ ಹಾಕಿಕೊಳ್ಳಬೇಕು ಎಂದು ಹೇಳಿದ್ದಾರೆ.

ವಿಶೇಷ ಸ್ಥಾನಮಾನದ ಬಗ್ಗೆ ಸಿಎಂ ನಿರ್ಧಾರ ಕೈಗೊಂಡಿದ್ದಾರೆ

ರೆಬೆಲ್ ಕಾಂಗ್ರೆಸ್​ ಶಾಸಕರಿಗೆ ವಿಶೇಷ ಸ್ಥಾನಮಾನ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ವಿಶೇಷ ಸ್ಥಾನಮಾನದ ಬಗ್ಗೆ ಸಿಎಂ ನಿರ್ಧಾರ ಕೈಗೊಂಡಿದ್ದಾರೆ. ಇಲಾಖೆಗಳಲ್ಲಿ ಮುಖ್ಯಮಂತ್ರಿಗಳು ಎಲ್ಲವನ್ನೂ ನೋಡಲಾಗಲ್ಲ. ಆರ್ಥಿಕ ಇಲಾಖೆ ಕಡೆ ವಿಶೇಷ ಗಮನ ಕೊಡಬೇಕಾಗುತ್ತೆ. ಸಿಎಂ ಅವರು ಪರಿಣಿತರಿದ್ದಾರೆ ಎಂದರು.

ಹೆಚ್​ಡಿ ಕುಮಾರಸ್ವಾಮಿ ಗೃಹ ಸಚಿವ ಜಿ.ಪರಮೇಶ್ವರ್ ತಿರುಗೇಟು

ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ವಿಚಾರವಾಗಿ ಮಾತನಾಡಿದ್ದು, ಹೆಚ್​ಡಿ ಕುಮಾರಸ್ವಾಮಿ ಬಗ್ಗೆ ಮಾತನಾಡದೆ ಇರೋದೇ ಒಳ್ಳೇದು. ಕುಮಾರಸ್ವಾಮಿಯನ್ನ ಹಾಗೇ ಬಿಟ್ಟುಬಿಡೋದೇ ವಾಸಿ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.