
ಬೆಂಗಳೂರು, ಮೇ 29: ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಕಬಳಿಸಲು ಯತ್ನಿಸಿದ ಬೃಹತ್ ಭೂಗಳ್ಳತನ (Land) ಹಗರಣವೊಂದು ಬೆಳಕಿಗೆ ಬಂದಿದೆ. ಈ ಸಂಬಂಧ ವಂಚಕ ಶಾಲೂಮ್ ಕುಮಾರ್ ಎಂಬಾತನನ್ನು ಪೊಲೀಸರು ತಡರಾತ್ರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಸದ್ಯ ಶೇಷಾದ್ರಿಪುರಂ ಠಾಣೆಯಲ್ಲಿ ಈ ಕುರಿತು ಎಫ್ಐಆರ್ ದಾಖಲಾಗಿದೆ.
ಬಿಡಿಎ ವಿಜಿಲೆನ್ಸ್ ವಿಭಾಗದ ಅಧಿಕಾರಿ ಗೋವಿಂದರಾಜು ದೂರಿನ ಆಧಾರದ ಮೇಲೆ ಶೇಷಾದ್ರಿಪುರಂ ಪೊಲೀಸರು ಆರೋಪಿ ಶಾಲೂಮ್ ಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 471, 419, 465, 420, 120B, 468 ಹಾಗೂ 34ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ತದನಂತರ ತಡರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಹೆಡೆಮುರಿಕಟ್ಟಿದ್ದಾರೆ.
ಬಂಧಿತ ಆರೋಪಿ ಶಾಲೂಮ್ ಕುಮಾರ್ ಗ್ರೇಟರ್ ಬೆಂಗಳೂರು ಅಥಾರಿಟಿ ಹೆಸರಿನಲ್ಲಿ ನಕಲಿ ದಾಖಲೆ ಹಾಗೂ ನಕಲಿ ಜಿಪಿಎ ಪತ್ರಗಳನ್ನು ಸೃಷ್ಟಿಸುತ್ತಿದ್ದ. ಈ ನಕಲಿ ದಾಖಲೆಗಳ ಮೂಲಕ ಅರ್ಕಾವತಿ ಲೇಔಟ್ ಹಾಗೂ ಒಎಂಬಿಆರ್ ಲೇಔಟ್ಗಳಲ್ಲಿರುವ ಬಿಡಿಎಗೆ ಸೇರಿದ ಕೋಟ್ಯಂತರ ರೂ. ಮೌಲ್ಯದ ಸೈಟ್ಗಳನ್ನು ಕಬಳಿಸಲು ಸಂಚು ರೂಪಿಸಿದ್ದ. ಈ ಅಕ್ರಮ ದಂಧೆ ಬಗ್ಗೆ ತಿಳಿದ ಸಾರ್ವಜನಿಕರು ಬಿಡಿಎ ವಿಜಿಲೆನ್ಸ್ ವಿಭಾಗಕ್ಕೆ ದೂರು ನೀಡಿದ್ದರು.
ಇದನ್ನೂ ಓದಿ: ಕಾರಾಗೃಹ ಇಲಾಖೆಯ ಕೋಟ್ಯಂತರ ರೂ ಮೌಲ್ಯದ ಕಟ್ಟಡವನ್ನೇ ಕಬ್ಜ ಮಾಡಿದ ಭಲೇ ಕಿಲಾಡಿಗಳು
ಸಾರ್ವಜನಿಕರ ದೂರು ಬೆನ್ನಲ್ಲೇ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ಬಿಡಿಎ ವಿಜಿಲೆನ್ಸ್ ವಿಭಾಗದ ಎಸ್ಪಿ ನಾಗರಾಜ್, ಪ್ರಕರಣದ ಸಮಗ್ರ ತನಿಖೆಗೆ ಆದೇಶಿಸಿದ್ದರು. ತನಿಖೆ ಪೂರ್ಣಗೊಳಿಸಿದ ಎಸ್ಪಿ ನಾಗರಾಜ್, ಅಕ್ರಮ ನಡೆದಿರುವುದನ್ನು ದೃಢಪಡಿಸಿ, ಬಿಡಿಎ ಆಯುಕ್ತರಾದ ಮೇಜರ್ ಮಣಿವಣ್ಣನ್ ಅವರಿಗೆ ವರದಿ ಸಲ್ಲಿಸಿದ್ದರು. ವಿಜಿಲೆನ್ಸ್ ವರದಿಯನ್ನು ಕೂಲಂಕಷವಾಗಿ ಪರಿಶೀಲಿಸಿದ ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್, ವಂಚಕನ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು.
ಇನ್ನು ಈ ಕೋಟ್ಯಂತರ ರೂ ಮೌಲ್ಯದ ಭೂಕಬಳಿಕೆ ದಂಧೆಯಲ್ಲಿ ಕೇವಲ ಶಾಲೂಮ್ ಕುಮಾರ್ ಮಾತ್ರವಲ್ಲದೆ, ಬಿಡಿಎ ಒಳಗಿನ ಸಿಬ್ಬಂದಿ ಅಥವಾ ಇತರ ಪ್ರಭಾವಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ, ಪ್ರಕರಣದಲ್ಲಿ ಶಾಮೀಲಾಗಿರುವ ಉಳಿದ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಲು ಶೇಷಾದ್ರಿಪುರಂ ಠಾಣೆ ಪೊಲೀಸರು ಈಗಾಗಲೇ ವಿಶೇಷ ಅಧಿಕಾರ ತಂಡವನ್ನು ರಚಿಸಲಾಗಿದ್ದು, ಶೋಧ ಕಾರ್ಯ ನಡೆಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.