ಮನೆಯಲ್ಲಿ ಪೂಜೆ ಮಾಡಿಸುವ ನೆಪದಲ್ಲಿ ಬಾಬಾ ಕಿಡ್ನಾಪ್: 4.25 ಲಕ್ಷ ಸುಲಿಗೆ ಮಾಡಿದ ಗ್ಯಾಂಗ್ ಪೊಲೀಸರ ವಶಕ್ಕೆ!
ಮನೆಯಲ್ಲಿ ಶಾಂತಿ ಪೂಜೆ ಮಾಡಿಸುವ ನೆಪದಲ್ಲಿ ಯಲಹಂಕದ ಬಾಬಾ ತಾರಿಕ್ ಹುಸೇನ್ ಎಂಬುವರನ್ನು ಅಪಹರಿಸಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರೋಬ್ಬರಿ 4.25 ಲಕ್ಷ ರೂ. ಸುಲಿಗೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದ್ದು, ಬ್ಯಾಂಕ್ಗೆ ಕರೆದೊಯ್ದು ಹಣ ಡ್ರಾ ಮಾಡಿಸಿಕೊಂಡಿದ್ದ ಖತರ್ನಾಕ್ ಗ್ಯಾಂಗ್ ಈಗ ಜೈಲು ಪಾಲಾಗಿದೆ.

ಮುಖ್ಯಾಂಶಗಳು
- ಪೂಜೆ ಮಾಡಿಸುವ ನೆಪದಲ್ಲಿ ಯಲಹಂಕದ ಬಾಬಾನನ್ನು ಅಪಹರಿಸಿದ ಖತರ್ನಾಕ್ ಗ್ಯಾಂಗ್
- ತುಮಕೂರು ಹೊರವಲಯಕ್ಕೆ ಕರೆದೊಯ್ದು ಲಾಂಗ್ ಮತ್ತು ಮಚ್ಚಿನಿಂದ ಹಲ್ಲೆ
- ಖಾಸಗಿ ಬ್ಯಾಂಕ್ನಿಂದ ಬಲವಂತವಾಗಿ 4.25 ಲಕ್ಷ ರೂಪಾಯಿ ಡ್ರಾ
ಬೆಂಗಳೂರು, ಜುಲೈ 10: ಮನೆಯಲ್ಲಿ ಪೂಜೆ ಮಾಡಿಸುವ ನೆಪದಲ್ಲಿ ಬಾಬಾ ಒಬ್ಬರನ್ನು ಅಪಹರಿಸಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರೋಬ್ಬರಿ 4.25 ಲಕ್ಷ ರೂಪಾಯಿ ದೋಚಿದ್ದ ನಾಲ್ವರು ಕಿಡ್ನಾಪರ್ಸ್ಗಳನ್ನು (Kidnap) ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.ತುಮಕೂರು ಮೂಲದ ಆರಿಫ್ ಮತ್ತು ಆದಿಲ್, ಚಿಕ್ಕಬಾಣಾವರದ ಇಮ್ರಾನ್ ಹಾಗೂ ಆರ್.ಟಿ. ನಗರದ ಕಾದೀರ್ ಬಂಧಿತ ಆರೋಪಿಗಳಾಗಿದ್ದಾರೆ. ನಗರದ ಯಲಹಂಕದಲ್ಲಿ ವಾಸವಾಗಿರುವ ಬಾಬಾ ಮೊಹಮ್ಮದ್ ತಾರಿಕ್ ಹುಸೇನ್ ಎಂಬುವರು ನೀಡಿದ ದೂರಿನ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ.
ಪೂಜೆಯ ನೆಪದಲ್ಲಿ ಸಂಚು ಕಿಡ್ನಾಪ್!
ಕೆಲ ದಿನಗಳ ಹಿಂದೆ ಬಾಬಾ ತಾರಿಕ್ ಹುಸೇನ್ ಅವರನ್ನು ಸಂಪರ್ಕಿಸಿದ್ದ ಆರೋಪಿ ಆರಿಫ್, ನಮ್ಮ ಮನೆಗೆ ಬಂದು ಶಾಂತತೆಗಾಗಿ ಪೂಜೆ ಮಾಡಿಕೊಡಬೇಕು ಎಂದು ಕೋರಿ ಮುಂಗಡವಾಗಿ 10 ಸಾವಿರ ರೂಪಾಯಿಗಳನ್ನು ಆನ್ಲೈನ್ ಮೂಲಕ ಪಾವತಿಸಿದ್ದ. ಆದರೆ ಬಾಬಾ ತಾರಿಕ್ ಕಾರಣಾಂತರಗಳಿಂದ ಮೂರು ದಿನಗಳ ಕಾಲ ಭೇಟಿ ನೀಡಿರಲಿಲ್ಲ. ಜೂನ್ 29 ರಂದು ಆರೋಪಿ ಆರಿಫ್, ಬಾಬಾನನ್ನು ಕರೆತರಲು ತಾನೇ ಕಾರು ಕಳುಹಿಸಿಕೊಡುವುದಾಗಿ ಹೇಳಿದ್ದ. ಅದರಂತೆ ಕಾರ್ ಬಂದಾಗ ತಾರಿಕ್ ಹೋಗಲು ಸಿದ್ಧರಿರಲಿಲ್ಲ. ಈ ವೇಳೆ ಆರೋಪಿಗಳು ಅವರನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಪರಾರಿಯಾಗಿದ್ದರು.
ಹಳೇ ದ್ವೇಷದ ಹಿನ್ನೆಲೆ ಲಾಂಗ್ ಮಚ್ಚಿನಿಂದ ಹಲ್ಲೆ
ಕಿಡ್ನ್ಯಾಪ್ ಆದ ಬಾಬಾನನ್ನು ತುಮಕೂರು ಹೊರವಲಯಕ್ಕೆ ಕರೆದೊಯ್ದಾಗ ಅಲ್ಲಿ ಮೂವರು ವ್ಯಕ್ತಿಗಳು ಕಾಯುತ್ತಿದ್ದರು. ಈ ವೇಳೆ ಗ್ಯಾಂಗ್ನಲ್ಲಿದ್ದ ಆದಿಲ್ ಎಂಬಾತ, “ಹಿಂದೆ ನೀನು ಶಾಂತಿ ಪೂಜೆ ಮಾಡುವುದಾಗಿ ಹಣ ಪಡೆದುಕೊಂಡಿದ್ದೆ, ಆದರೆ ಅದರಿಂದ ನನಗೆ ಯಾವುದೇ ಉಪಯೋಗವಾಗಿಲ್ಲ” ಎಂದು ಹಳೇ ಕದನ ತೆಗೆದು ಜಗಳವಾಡಿದ್ದಾನೆ. ಹಣ ನೀಡುವಂತೆ ಬೆದರಿಸಿದಾಗ ಬಾಬಾ ನಿರಾಕರಿಸಿದ್ದಾರೆ. ಇದರಿಂದ ಕೆರಳಿದ ನಾಲ್ವರು ಆರೋಪಿಗಳು ಲಾಂಗ್ ಮತ್ತು ಮಚ್ಚುಗಳನ್ನು ಬಳಸಿ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಬ್ಯಾಂಕ್ಗೆ ಕರೆದೊಯ್ದು ಲಕ್ಷಾಂತರ ಹಣ ಡ್ರಾ!
ಬಳಿಕ ಬಾಬಾನ ಮೊಬೈಲ್ ಪಾಸ್ವರ್ಡ್ ಹಾಗೂ ಯುಪಿಐ (UPI) ಪಿನ್ ಪಡೆದುಕೊಂಡ ಆರೋಪಿಗಳು, ಬ್ಯಾಂಕ್ ಖಾತೆಯಲ್ಲಿದ್ದ 5 ಲಕ್ಷಕ್ಕೂ ಅಧಿಕ ಹಣವನ್ನು ಗಮನಿಸಿದ್ದಾರೆ. ತಕ್ಷಣವೇ ಆರಿಫ್ 13 ಸಾವಿರ ರೂಪಾಯಿಗಳನ್ನು ವರ್ಗಾಯಿಸಿಕೊಂಡಿದ್ದಾನೆ. ಅಂದು ರಾತ್ರಿ ಅಜ್ಞಾತ ಸ್ಥಳದಲ್ಲಿ ಬಾಬಾನನ್ನು ಕೂಡಿಹಾಕಿದ್ದ ಗ್ಯಾಂಗ್, ಮರುದಿನ ದಾಖಲೆಗಳನ್ನು ವಾಟ್ಸಾಪ್ ಮಾಡಿಸಿಕೊಂಡು ಖಾಸಗಿ ಬ್ಯಾಂಕ್ಗೆ ಬಲವಂತವಾಗಿ ಕರೆದೊಯ್ದಿದ್ದಾರೆ.
ಇದನ್ನೂ ಓದಿ ಕೇವಲ ಒಂದು 500 ರೂ. ನಕಲಿ ನೋಟಿನ ಬೆನ್ನುಬಿದ್ದ ಪೊಲೀಸರಿಗೆ ಬಯಲಾಯ್ತು ರಾಜ್ಯವ್ಯಾಪಿ ಖೋಟಾ ನೋಟಿನ ಬೃಹತ್ ಜಾಲ!
ಅಲ್ಲಿ ಬಾಬಾನಿಂದಲೇ ವಿಥ್ಡ್ರಾ ಫಾರ್ಮ್ಗೆ ಸಹಿ ಹಾಕಿಸಿ, ಸಂಜೆ ವೇಳೆ 4.25 ಲಕ್ಷ ರೂಪಾಯಿ ಹಣವನ್ನು ಡ್ರಾ ಮಾಡಿಕೊಂಡಿದ್ದಾರೆ. ಹಣ ಕೈ ಸೇರಿದ ನಂತರ ಬಾಬಾನನ್ನು ಕಾರಿನಲ್ಲಿ ದಾಬಸ್ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರದ ಹೊರವಲಯಕ್ಕೆ ಕರೆತಂದು, ಘಟನೆ ಕುರಿತು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಮೊಬೈಲ್ ನೀಡಿ ಪರಾರಿಯಾಗಿದ್ದರು ಎಂದು ಬಾಬಾ ತಾರಿಕ್ ಆರೋಪಿಸಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ಕೂ ಜನರನ್ನು ಜೈಲಿಗಟ್ಟಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




