Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಸಂಬಂಧಿಗೆ ಇಡಿ ಡ್ರಿಲ್​

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದ ತನಿಖೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿಯನ್ನು ವಿಚಾರಣೆಗೆ ಒಳಪಡಿಸಿದೆ. ಲೋಕಾಯುಕ್ತವು ಮಾಜಿ ಆಯುಕ್ತ ನಟೇಶ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಈ ಹಗರಣ ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಮೈಸೂರು ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಸಂಬಂಧಿಗೆ ಇಡಿ ಡ್ರಿಲ್​
ಸಿದ್ದರಾಮಯ್ಯಗೆ ಇಡಿ ಸಂಕಷ್ಟ
Follow us
Jagadisha B
| Updated By: ವಿವೇಕ ಬಿರಾದಾರ

Updated on:Nov 18, 2024 | 6:21 PM

ಮೈಸೂರು, ನವೆಂಬರ್​ 18: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ನಡೆಸುತ್ತಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ನ.18) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಅವರ ವಿಚಾರಣೆ ನಡೆಸಿದರು. ಮುಡಾ ಹಗರಣದಲ್ಲಿ ಮಲ್ಲಿಕಾರ್ಜುನ​ ಸ್ವಾಮಿ 3ನೇ ಆರೋಪಿಯಾಗಿದ್ದಾರೆ.

ಬೆಂಗಳೂರಿನ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ವಿಚಾರಣೆ ನಡೆದಿದ್ದು, ಕೆಸರೆ ಗ್ರಾಮದಲ್ಲಿರುವ 3.16 ಎಕರೆ ಜಮೀನಿನ ಕುರಿತು ಮಲ್ಲಿಕಾರ್ಜುನ ಸ್ವಾಮಿ ಅವರಿಂದ ಮಾಹಿತಿ ಪಡೆದರು ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.

ಮುಡಾ ಮಾಜಿ ಆಯುಕ್ತನಿಗೆ ನೋಟಿಸ್​

ಲೋಕಾಯುಕ್ತ ಅಧಿಕಾರಿಗಳು ಮುಡಾದ ಹಿಂದಿನ ಆಯುಕ್ತರಾಗಿದ್ದ ನಟೇಶ್‌ ಅವರಿಗೆ ನೋಟಿಸ್ ನೀಡಿದ್ದಾರೆ. ಮಂಗಳವಾರ (ನ.19) ವಿಚಾರಣೆಗೆ ಹಾಜರಾಗುವಂತೆ ಮೈಸೂರು ಲೋಕಾಯುಕ್ತ ಎಸ್​ಪಿ ಟಿ.ಜೆ.ಉದೇಶ್‌ ನೋಟಿಸ್​ ಮೂಲಕ ಹೇಳಿದ್ದಾರೆ.

ಸರ್ಕಾರದ ಅನುಮತಿ ಕಡ್ಡಾಯ

ಸರ್ಕಾರಿ ಅಧಿಕಾರಿಯನ್ನು ವಿಚಾರಣೆ ನಡೆಸಲು ಸರ್ಕಾರದ ಅನುಮತಿ ಕಡ್ಡಾಯವಾಗಿದೆ. ಹೀಗಾಗಿ 17(A) ಅಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮುಡಾದ ಮಾಜಿ ಆಯುಕ್ತ ನಟೇಶ್ ಅವರನ್ನು ವಿಚಾರಣೆಗೆ ಒಳಪಡಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಬಳಿ ಒಂದು ತಿಂಗಳ ಹಿಂದೆಯೇ ಅನುಮತಿ ಕೇಳಿದ್ದರು. ಮುಖ್ಯ ಕಾರ್ಯದರ್ಶಿಗಳು ಎರಡು ದಿನಗಳ ಹಿಂದೆ ವಿಚಾರಣೆಗೆ ಅನುಮತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನಟೇಶ್ ಅವರಿ​ಗೆ ಲೋಕಾಯುಕ್ತ ನೋಟಿಸ್ ನೀಡಿತ್ತು.

ಇದನ್ನೂ ಓದಿ: ಮುಡಾ ಹಗರಣ: ಇಡಿ ವಿಚಾರಣೆಗೆ ಹಾಜರಾಗಿದ್ದ ಮೈಸೂರು ಪಾಲಿಕೆ ನೌಕರ ವಜಾ

ನಟೇಶ್​ ವಿಚಾರಣೆ ಏಕೆ?

ಈ ಹಿಂದೆ ಮುಡಾ ಆಯುಕ್ತರಾಗಿದ್ದ ನಟೇಶ್​ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಬದಲಿ ನಿವೇಶನ ಹಂಚಿಕೆ ಮಾಡಿದ್ದರು. ಬದಲಿ ನಿವೇಶನ ಹಂಚಿಕೆಯಲ್ಲಿ ಭ್ರಷ್ಟಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಟೇಶ್​ ಅವರು ಈ ಹಿಂದೆ ಮೂರು ಬಾರಿ ಇಡಿ ಅಧಿಕಾರಿಗಳ ಮುಂದೆ ಮೂರು ಬಾರಿ ವಿಚಾರಣೆಗೆ ಹಾಜರಾಗಿದ್ದರು.

ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿರುವ ಹಗರಣ

ಮುಡಾ ಹಗರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವೂ ಇದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪ್ರಕರಣ ರಾಷ್ಟ್ರಾದ್ಯಂತ ಸದ್ದು ಮಾಡಿತು. ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು. ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಕೂಡ ನಡೆಸುತ್ತಿದ್ದು, ಇಡಿ ಅಧಿಕಾರಿಗಳು ಸಿದ್ದರಾಮಯ್ಯ ಅವರನ್ನೂ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:07 pm, Mon, 18 November 24