ಬೆಂಗಳೂರಿಗರಿಗೆ ಗುಡ್​​ ನ್ಯೂಸ್​​: ನಮ್ಮ ಮೆಟ್ರೋ 3ನೇ ಹಂತಕ್ಕೆ ಕೇಂದ್ರ ಸರ್ಕಾರದಿಂದ ಶೀಘ್ರ ಅನುಮೋದನೆ ಸಾಧ್ಯತೆ

ಬೆಂಗಳೂರಿನ ನಮ್ಮ ಮೆಟ್ರೋ 3ನೇ ಹಂತದ ಡಬಲ್ ಡೆಕ್ಕರ್‌ ಯೋಜನೆಗೆ RITES ಸಕಾರಾತ್ಮಕ ವರದಿ ನೀಡಿದ್ದು, ಕೇಂದ್ರ ಸರ್ಕಾರದಿಂದ ಶೀಘ್ರದಲ್ಲೇ ಅಂತಿಮ ಅನುಮೋದನೆ ದೊರೆಯುವ ಸಾಧ್ಯತೆ ದಟ್ಟವಾಗಿದೆ. ಮೆಟ್ರೋ ಮಾರ್ಗದ ಮೇಲೆಯೇ ಫ್ಲೈಓವರ್ ನಿರ್ಮಾಣವಾದರೆ ಪ್ರಯಾಣಿಕರು ಮೆಟ್ರೋ ಬಳಕೆ ಕಡಿಮೆ ಮಾಡಬಹುದು ಎಂಬ ಕಾರಣ ನೀಡಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಯೋಜನೆಯ ಸಾಮಾಜಿಕ-ಆರ್ಥಿಕ ಕಾರ್ಯಸಾಧ್ಯತೆ ಬಗ್ಗೆ ಈ ಹಿಂದೆ ಪ್ರಶ್ನೆ ಎತ್ತಿತ್ತು.

ಬೆಂಗಳೂರಿಗರಿಗೆ ಗುಡ್​​ ನ್ಯೂಸ್​​: ನಮ್ಮ ಮೆಟ್ರೋ 3ನೇ ಹಂತಕ್ಕೆ ಕೇಂದ್ರ ಸರ್ಕಾರದಿಂದ ಶೀಘ್ರ ಅನುಮೋದನೆ ಸಾಧ್ಯತೆ
ಸಾಂದರ್ಭಿಕ ಚಿತ್ರ
Image Credit source: Getty Images

Updated on: Jun 11, 2026 | 9:06 AM

ಬೆಂಗಳೂರು, ಜೂನ್​​ 11: ಡಬಲ್ ಡೆಕ್ಕರ್‌ ಯೋಜನೆ ಸೇರ್ಪಡೆಯಿಂದ ಅನುಮೋದನೆಗಾಗಿ ಬಾಕಿ ಉಳಿದಿದ್ದ ನಮ್ಮ ಮೆಟ್ರೋ 3ನೇ ಹಂತ (Phase-3) ಯೋಜನೆಗೆ ಕೇಂದ್ರ ಸರ್ಕಾರದ ಅನುಮೋದನೆ ದೊರೆಯುವ ಸಾಧ್ಯತೆ ಹೆಚ್ಚಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆಯಾದ RITES Ltd ಸಿದ್ಧಪಡಿಸಿರುವ ಕರಡು ವರದಿಯಲ್ಲಿ, 44.65 ಕಿ.ಮೀ ಉದ್ದದ ಈ ಯೋಜನೆಯ ಆರ್ಥಿಕ ಆಂತರಿಕ ಆದಾಯ ಪ್ರಮಾಣ (Economic Internal Rate of Return – EIRR) ಶೇ. 15.9ರಷ್ಟಿರಲಿದೆ ಎಂದು ಅಂದಾಜಿಸಲಾಗಿದೆ. ಇದು ಮೆಟ್ರೋ ಯೋಜನೆಗಳಿಗೆ ಅಗತ್ಯವೆಂದು ಪರಿಗಣಿಸಲಾದ ಶೇ.14ರ ಮಾನದಂಡಕ್ಕಿಂತ ಹೆಚ್ಚಾಗಿದೆ.

2024ರ ಸೆಪ್ಟೆಂಬರ್ 13ರಂದು ಕೇಂದ್ರ ಸರ್ಕಾರ ಮೂರನೇ ಹಂತದ ಯೋಜನೆಗೆ ಅನುಮೋದನೆ ನೀಡಿದಾಗ ಡಬಲ್ ಡೆಕ್ಕರ್‌ ವಯಾಡಕ್ಟ್‌ ಯೋಜನೆ ಇರಲಿಲ್ಲ. ನಂತರ ಭವಿಷ್ಯದಲ್ಲಿ ರಸ್ತೆ ವಿಸ್ತರಣೆ ಅಗತ್ಯ ತಪ್ಪಿಸಲು ರಾಜ್ಯ ಸರ್ಕಾರ ಹೆಚ್ಚುವರಿ 9,700 ಕೋಟಿ ವೆಚ್ಚದಲ್ಲಿ ಡಬಲ್ ಡೆಕ್ಕರ್‌ ವ್ಯವಸ್ಥೆಯನ್ನು ಸೇರಿಸಲು ನಿರ್ಧರಿಸಿತ್ತು. ಆದರೆ, ಮೆಟ್ರೋ ಮಾರ್ಗದ ಮೇಲೆಯೇ ಫ್ಲೈಓವರ್ ನಿರ್ಮಾಣವಾದರೆ ಪ್ರಯಾಣಿಕರು ಮೆಟ್ರೋ ಬಳಕೆ ಕಡಿಮೆ ಮಾಡಬಹುದು ಎಂಬ ಕಾರಣ ನೀಡಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ (MoHUA) ಯೋಜನೆಯ ಸಾಮಾಜಿಕ-ಆರ್ಥಿಕ ಕಾರ್ಯಸಾಧ್ಯತೆ ಬಗ್ಗೆ ಪ್ರಶ್ನೆ ಎತ್ತಿತ್ತು.

ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್; ಬೆಂಗಳೂರಿಗೆ ಬಂದೇ ಬಿಡ್ತು ಮೊದಲ ‘ಬ್ಲೂ ಲೈನ್’ ರೈಲು

RITES ವರದಿ ಪ್ರಕಾರ, ಡಬಲ್ ಡೆಕ್ಕರ್‌ ಸೇರಿಸಿದ ಬಳಿಕ EIRR ಶೇ.15.9ಕ್ಕೆ ಇಳಿದಿದ್ದರೂ ಅದು ಇನ್ನೂ ಅನುಮೋದನೆಗೆ ಅಗತ್ಯವಾದ ಮಟ್ಟಕ್ಕಿಂತ ಹೆಚ್ಚಾಗಿದೆ. ಮೂಲ ಯೋಜನೆಯಲ್ಲಿ EIRR ಶೇ.17.04 ಇತ್ತು. ಸಚಿವಾಲಯದ ಆಕ್ಷೇಪಣೆಗಳು ತಾಂತ್ರಿಕವಾಗಿದ್ದು, RITES ವರದಿ ಅದಕ್ಕೆ ಸ್ಪಷ್ಟ ಉತ್ತರ ನೀಡಿದೆ. ಅಂತಿಮ ವರದಿಯೂ ಇದೇ ರೀತಿಯಲ್ಲಿರಲಿದೆ. ಹೀಗಾಗಿ ಅನುಮೋದನೆ ಸಿಗುವ ವಿಶ್ವಾಸವಿದೆ ಎಂದು ಮೂಲಗಳು ತಿಳಿಸಿವೆ.

ಎಲ್ಲೆಲ್ಲಿ ಮೂರನೇ ಹಂತದ ಮಾರ್ಗ?

  • ಜೆಪಿ ನಗರ 4ನೇ ಹಂತದಿಂದ ಕೆಂಪಾಪುರವರೆಗೆ ಹೊರವರ್ತುಲ ರಸ್ತೆಯ (ORR) ಮೂಲಕ 32.5 ಕಿ.ಮೀ ಉದ್ದದ ಮಾರ್ಗ
  • ಹೊಸಹಳ್ಳಿಯಿಂದ ಕಡಬಗೆರೆವರೆಗೆ ಮಾಗಡಿ ರಸ್ತೆಯ ಮೂಲಕ 12.15 ಕಿ.ಮೀ ಉದ್ದದ ಮಾರ್ಗ

ಕೇಂದ್ರ ಸಚಿವರ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್

ಬುಧವಾರ ನವದೆಹಲಿಯಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್​​ ಲಾಲ್​​ ಖಟ್ಟರ್​ ಅವರನ್ನು ಭೇಟಿ ಮಾಡಿರುವ ಸಿಎಂ ಡಿ.ಕೆ. ಶಿವಕುಮಾರ್​​, ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಡಬಲ್ ಡೆಕ್ಕರ್‌ ಯೋಜನೆಗೆ ಅನುಮೋದನೆ ನೀಡುವಂತೆ ಮನವಿ ಮಾಡಿದ್ದರು. ಇದರ ಜೊತೆಗೆ ಎರಡನೇ ಹಂತದ ಯೋಜನೆಯ ಪರಿಷ್ಕೃತ ವೆಚ್ಚ 40,425.02 ಕೋಟಿಗೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಅದರ ಅನುಮೋದನೆಯನ್ನು ಶೀಘ್ರ ನೀಡುವಂತೆ ಆಗ್ರಹಿಸಿದ್ದಾರೆ ಎಂದು ಡೆಕ್ಕನ್​​ ಹೆರಾಲ್ಡ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Follow Us