
ಬೆಂಗಳೂರು, ಸೆಪ್ಟೆಂಬರ್ 09: ಭಾರತ ರತ್ನ ಪುರಸ್ಕೃತ ಖ್ಯಾತ ವಿಜ್ಞಾನಿ ಪ್ರೊ. ಸಿಎನ್ಆರ್ ರಾವ್ ಅವರಿಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ ಮಾಡಲಾಗಿದೆ ಎಂಬ ಆರೋಪವನ್ನು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಗಳು ತಳ್ಳಿಹಾಕಿದ್ದಾರೆ. ‘ಈ ಸುದ್ದಿ ಸಂಪೂರ್ಣ ಸುಳ್ಳು. ಅವರಿಗೆ ಯಾವುದೇ ರೀತಿಯ ನೋಟಿಸ್ ನೀಡಿಲ್ಲ’ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಪ್ರೊ. ಸಿಎನ್ಆರ್ ರಾವ್ ಅವರ ಮನೆಗೆ ಖುದ್ದು ಭೇಟಿ ನೀಡಿ, ಅವರ ಕುಟುಂಬಕ್ಕೆ ಎನ್ಯುಮರೇಷನ್ ಫಾರ್ಮ್ ವಿತರಿಸಿದ್ದಾರೆ. ರಾಜ್ಯ SVEEP ನೋಡಲ್ ಅಧಿಕಾರಿ ಹಾಗೂ ಬೆಂಗಳೂರು ಪಶ್ಚಿಮ ಪಾಲಿಕೆ ಆಯುಕ್ತರ ಸಮ್ಮುಖದಲ್ಲೇ ಈ ಗಣತಿ ನಮೂನೆಯನ್ನು ಭರ್ತಿ ಮಾಡಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ಮಾಹಿತಿ ನೀಡಿದ್ದಾರೆ.
ಈ ಹಿಂದಿನ 2002ರ ಮತದಾರರ ಪಟ್ಟಿಯಲ್ಲಿ ಅವರ ಹೆಸರು ‘ರಾಮ’ ಎಂದು ನಮೂದಾಗಿತ್ತು. ಆದರೆ ಪ್ರಸ್ತುತ ಮತದಾರರ ಪಟ್ಟಿಯಲ್ಲಿ ‘ಪ್ರೊಫೆಸರ್ ಸಿಎನ್ರಾವ್ ಎಂ’ ಎಂದು ನೋಂದಣಿಯಾಗಿದೆ. ಈ ರೀತಿ ಹೆಸರಿನಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ.
‘ಯಾವುದೇ ನೋಟಿಸ್ ನೀಡದೆಯೇ ಅವರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಉಳಿಸಿಕೊಳ್ಳಲು ಮತ್ತು ಸೇರಿಸಲು BLO ಶಿಫಾರಸು ಮಾಡಿದ್ದಾರೆ. ಈಗಾಗಲೇ ಕರಡು ಮತದಾರರ ಪಟ್ಟಿಯಲ್ಲಿ ಅವರ ಹೆಸರು ಸೇರ್ಪಡೆಯಾಗಿದ್ದು, ಅಂತಿಮ ಮತದಾರರ ಪಟ್ಟಿಯಲ್ಲೂ ಹೆಸರು ಅಧಿಕೃತವಾಗಿ ಉಳಿಯಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆ ಮೂಲಕ ಪ್ರೊ ಸಿಎನ್ ಆರ್ ರಾವ್ ಅವರಿಗೆ ನೋಟಿಸ್ ನೀಡಲಾಗಿದೆ ಎಂಬ ಸುದ್ದಿ ಸಂಪೂರ್ಣ ಸತ್ಯಕ್ಕೆ ದೂರವಾದದ್ದು’ ಎಂದು ಚುನಾವಣಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಪ್ರಶ್ನೆ 1: ಪ್ರೊ. ಸಿ.ಎನ್.ಆರ್. ರಾವ್ ಯಾರು?
ಉತ್ತರ: ಪ್ರೊ ಸಿಎನ್ಆರ್ ರಾವ್ ಅವರು ರಸಾಯಶಾಸ್ತ್ರ ವಿಜ್ಞಾನಿ ಮತ್ತು ಭಾರತ ರತ್ನ ಪುರಸ್ಕೃತರು.
ಪ್ರಶ್ನೆ 1: ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ಚುನಾವಣಾ ಆಯೋಗದಿಂದ ನೋಟಿಸ್ ನೀಡಲಾಗಿದೆಯೇ?
ಉತ್ತರ: ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ಯಾವುದೇ ನೋಟಿಸ್ ಜಾರಿ ಮಾಡಿಲ್ಲ ಎಂದು ಚುನಾವಣಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ.
ಪ್ರಶ್ನೆ: ಎಸ್ಐಆರ್ ಎಂದರೇನು?
ಉತ್ತರ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಆಗಿದ್ದು, ಚುನಾವಣಾ ಆಯೋಗ ಕೈಗೊಳ್ಳುವ ಪ್ರಕ್ರಿಯೆಯಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:32 pm, Wed, 9 September 26