ಪಹಲ್ಗಾಮ್ ಉಗ್ರರ ದಾಳಿ: ಕನ್ನಡಿಗರ ನೆರವಿಗೆ ಧಾವಿಸಿದ ಸಂಸದ ತೇಜಸ್ವಿ ಸೂರ್ಯ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದ್ದಾರೆ. ಭಯೋತ್ಪಾದಕರ ದಾಳಿಯಲ್ಲಿ ಶಿವಮೊಗ್ಗದ ಉದ್ಯಮಿ ಮಂಜುನಾಥ್ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವಾರು ಜನ ಕನ್ನಡಿಗರು ಗಾಯಗೊಂಡಿದ್ದಾರೆ. ಕನ್ನಡಿಗರ ನೆರವಿಗೆ ಸಂಸದ ತೇಜಸ್ವಿ ಸೂರ್ಯ ಧಾವಿಸಿದ್ದಾರೆ. ಸ್ಥಳೀಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.

ಬೆಂಗಳೂರು, ಏಪ್ರಿಲ್ 22: ಜಮ್ಮು-ಕಾಶ್ಮೀರದ (jammu and kashmir) ಪಹಲ್ಗಾಮ್ದಲ್ಲಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ (Pahalgam Terror Attack) ಗಾಯಗೊಂಡ ಕನ್ನಡಿಗರ ನೆರವಿಗೆ ಸಂಸದ ತೇಜಸ್ವಿ ಸೂರ್ಯ ಧಾವಿಸಿದ್ದಾರೆ. ಸಂಸದ ತೇಜಸ್ವಿ ಸೂರ್ಯ (Tejasvi Surya) ಅವರು ಲೋಕಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸದಸ್ಯರಾಗಿ ಜಮ್ಮು ಕಾಶ್ಮೀರದ ಪ್ರವಾಸದಲ್ಲಿದ್ದು, ಉಗ್ರರರ ದಾಳಿ ವಿಚಾರ ತಿಳಿಯುತ್ತಿದ್ದಂತೆ ನೆರವಿಗೆ ಧಾವಿಸಿದ್ದಾರೆ.
ಉಗ್ರರ ಗುಂಡಿಗೆ ಬಲಿಯಾದ ಶಿವಮೊಗ್ಗದ ಮಂಜುನಾಥ್ ಅವರ ಪತ್ನಿ ಪಲ್ಲವಿ ಮತ್ತು ಘಟನೆಯಲ್ಲಿನ ಗಾಯಗೊಂಡವರ ಜೊತೆ ದೂರವಾಣಿ ಮಾತುಕತೆ ನಡೆಸಿ ಎಲ್ಲಾ ಸಹಕಾರ ನೀಡುವ ಭರವಸೆಯನ್ನು ನೀಡಿದ್ದಾರೆ. ಇನ್ನು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಜೊತೆ ಕೂಡಾ ಕನ್ನಡಿಗರ ವಾಪಸಾತಿ ಬಗ್ಗೆ ತೇಜಸ್ವಿ ಸೂರ್ಯ ಅವರ ಜೊತೆ ಚರ್ಚೆ ನಡೆಸಿದ್ದಾರೆ.
ತೇಜಸ್ವಿ ಸೂರ್ಯಗೆ ಕರೆ ಮಾಡಿದ ಅಶೋಕ್
ಸಂಸದ ತೇಜಸ್ವಿ ಸೂರ್ಯ ಜೊತೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಅವರು ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರ ಯೋಗಕ್ಷೇಮ ಮತ್ತು ಸುರಕ್ಷಿತ ವಾಪಸಾತಿ ಕುರಿತು ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ. ತೇಜಸ್ವಿ ಸೂರ್ಯ ಅವರು ಈಗಾಗಲೇ ದಕ್ಷಿಣ ಕಾಶ್ಮೀರದ ಡಿಐಜಿ, ಅನಂತನಾಗ್ ಜಿಲ್ಲಾಧಿಕಾರಿ ಮತ್ತು ರಾಜ್ಯಪಾಲರ ಕಚೇರಿ ಸಿಬ್ಬಂದಿ ಜೊತೆ ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿಗೆ ಶಿವಮೊಗ್ಗ ಉದ್ಯಮಿ ಬಲಿ
ತೇಜಸ್ವಿ ಸೂರ್ಯ ಸಂತಾಪ
“ಪಹಲ್ಗಾಮ್ ನ ಉಗ್ರಗಾಮಿ ದಾಳಿಯಲ್ಲಿ ಶಿವಮೊಗ್ಗದ ವ್ಯಕ್ತಿಯೊಬ್ಬರು ಮೃತರಾಗಿದ್ದು, ಅವರ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ಸಾಂತ್ವನ ವ್ಯಕ್ತಪಡಿಸಿದ್ದೇನೆ. ಈ ಸಂಕಷ್ಟದ ಸಂದರ್ಭದಲ್ಲಿ ಕುಟುಂಬದೊಂದಿಗೆ ನಾವೆಲ್ಲರೂ ಇದ್ದು, ಸಹಕಾರ ನೀಡಲಿದ್ದೇವೆ ಎಂಬುದಾಗಿ ತಿಳಿಸಿದ್ದೇನೆ. ಭಾರತ ಸರ್ಕಾರವು ಉಗ್ರಗಾಮಿ ದಾಳಿಯ ಹಿಂದಿರುವವರನ್ನು ಶಿಕ್ಷಿಸಿ, ಇಂತಹ ದಾಳಿಗಳನ್ನು ಸಹಿಸುವುದಿಲ್ಲ ಎಂಬ ಸಂದೇಶ ನೀಡಲಿದೆ” ಎಂದು ಸಂಸದ ತೇಜಸ್ವಿ ಸೂರ್ಯ ಸಂತಾಪ ಸೂಚಿಸಿದ್ದಾರೆ.
ಟ್ವಿಟರ್ ಪೋಸ್ಟ್
ಪಹಲ್ಗಾಮ್ ನ ಉಗ್ರಗಾಮಿ ದಾಳಿಯಲ್ಲಿ ಶಿವಮೊಗ್ಗದ ವ್ಯಕ್ತಿಯೊಬ್ಬರು ಮೃತರಾಗಿದ್ದು, ಅವರ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ಸಾಂತ್ವನ ವ್ಯಕ್ತಪಡಿಸಿದ್ದೇನೆ.
ಈ ಸಂಕಷ್ಟದ ಸಂದರ್ಭದಲ್ಲಿ ಕುಟುಂಬದೊಂದಿಗೆ ನಾವೆಲ್ಲರೂ ಇದ್ದು, ಸಹಕಾರ ನೀಡಲಿದ್ದೇವೆ ಎಂಬುದಾಗಿ ತಿಳಿಸಿದ್ದೇನೆ.
ಭಾರತ ಸರ್ಕಾರವು ಉಗ್ರಗಾಮಿ ದಾಳಿಯ ಹಿಂದಿರುವವರನ್ನು ಶಿಕ್ಷಿಸಿ,…
— Tejasvi Surya (@Tejasvi_Surya) April 22, 2025
ದೆಹಲಿಗೆ ತೆರಳಿದ ಬೆಂಗಳೂರು ಪೊಲೀಸ್
ಭಯೋತ್ಪಾದಕರ ದಾಳಿಯಲ್ಲಿ ಕನ್ನಡಿಗರು ಗಾಯಗೊಂಡಿದ್ದಾರೆ. ಈ ವಿಚಾರ ತಿಳಿದ ರಾಜ್ಯ ಸರ್ಕಾರ ಕೂಡಲೇ ರಾಜ್ಯದ ಪೊಲೀಸ್ ಅಧಿಕಾರಿಗಳನ್ನು ಕಾಶ್ಮೀರಕ್ಕೆ ಕಳುಹಿಸಿದೆ. IPS ಅಧಿಕಾರಿ ಆರ್.ಚೇತನ್ ನೇತೃತ್ವದ ನಾಲ್ವರು ಪೂಲೀಸರ ತಂಡ ಮತ್ತು ಸಿಬ್ಬಂದಿ ಕಾಶ್ಮೀರಕ್ಕೆ ತೆರಳಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:54 pm, Tue, 22 April 25