India Energy Week 2023: 2030ರ ಒಳಗೆ ಭಾರತದಲ್ಲಿ ವಾಯುಮಾಲಿನ್ಯ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತೆ -ಕೇಂದ್ರ ಇಂಧನ ಸಚಿವ ಹರ್​ದೀಪ್ ಸಿಂಗ್ ಪುರಿ

ಭಾರತದಲ್ಲಿ ಎಲ್ಲರಿಗೂ ಕೈಗೆಡುಕುವ ದರದಲ್ಲಿ ಇಂಧನ ಒದಗುವಂತೆ ಮಾಡಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. 2030ರ ಒಳಗೆ ಭಾರತದಲ್ಲಿ ವಾಯುಮಾಲಿನ್ಯ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಲಿದೆ. -ಹರ್​ದೀಪ್ ಸಿಂಗ್ ಪುರಿ

India Energy Week 2023: 2030ರ ಒಳಗೆ ಭಾರತದಲ್ಲಿ ವಾಯುಮಾಲಿನ್ಯ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತೆ -ಕೇಂದ್ರ ಇಂಧನ ಸಚಿವ ಹರ್​ದೀಪ್ ಸಿಂಗ್ ಪುರಿ
ಕೇಂದ್ರ ಇಂಧನ ಸಚಿವ ಹರ್​ದೀಪ್ ಸಿಂಗ್ ಪುರಿ
Updated By: ಆಯೇಷಾ ಬಾನು

Updated on: Feb 06, 2023 | 12:38 PM

ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಮಾದಾವರದಲ್ಲಿರುವ ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಇಂಧನ ಸಪ್ತಾಹ ಕಾರ್ಯಕ್ರಮದ ವೇದಿಕೆಗೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ​ಗೆಹ್ಲೋಟ್ ಸೇರಿದಂತೆ ಹಲವು ದೇಶಗಳ ಇಂಧನ ಸಚಿವರು ಪಾಲ್ಗೊಂಡಿದ್ದು ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ.

ಕೇಂದ್ರ ಇಂಧನ ಸಚಿವ ಹರ್​ದೀಪ್ ಸಿಂಗ್ ಪುರಿ ಕಾರ್ಯಕ್ರಮದಲ್ಲಿ ಉದ್ಘಾಟನಾ ಭಾಷಣ ಮಾಡಿದರು. ಈ ವೇಳೆ ಮಾತನಾಡಿದ ಅವರು, ವಿವಿಧ ದೇಶಗಳ ಇಂಧನ ಸಚಿವರು, ಹಲವು ಜಾಗತಿಕ ಕಂಪನಿಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಪರಿಸರ ಸ್ನೇಹಿ ಇಂಧನ ಬಳಕೆಗೆ ಹೊಸ ವೇಗ ನೀಡುವ ಪ್ರಯತ್ನ ಇದು. ಅಮೃತ ಕಾಲ ಮತ್ತು ವಸುಧೈವ ಕುಟುಂಬಕಂ ಆಶಯಗಳನ್ನು ಮತ್ತೊಮ್ಮೆ ವಿವರಿಸಿದರು.

ಇದನ್ನೂ ಓದಿ: PM Modi Karnataka Visit Live: ಟರ್ಕಿ ಭೂಕಂಪಕ್ಕೆ ಮಿಡಿದ ಮೋದಿ ಮನಸು, ವಿಷಾದದೊಂದಿಗೆ ಭಾಷಣ ಆರಂಭ

ಭಾರತದಲ್ಲಿ ಎಲ್ಲರಿಗೂ ಕೈಗೆಡುಕುವ ದರದಲ್ಲಿ ಇಂಧನ ಒದಗುವಂತೆ ಮಾಡಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. 2030ರ ಒಳಗೆ ಭಾರತದಲ್ಲಿ ವಾಯುಮಾಲಿನ್ಯ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಲಿದೆ. ಈ ನಿಟ್ಟಿನಲ್ಲಿ ಭಾರತ ಸರ್ಕಾರ ಸತತ ಪರಿಶ್ರಮ ಹಾಕುತ್ತಿದೆ. ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರಿಸರ ಸ್ನೇಹಿ ಇಂಧನಕ್ಕೆ ನಾವು ಆದ್ಯತೆ ನೀಡಿದ್ದೇವೆ. ಆದರೆ ಅಭಿವೃದ್ಧಿಯ ವಿಚಾರದಲ್ಲಿ ರಾಜಿಯಾಗುತ್ತಿಲ್ಲ. ಸೂರ್ಯನ ಬೆಳಕಿನಿಂದ ಅಡುಗೆ ಮಾಡುವ ಸೋಲಾರ್ ಕುಕ್​ಟಾಪ್​ಗಳ ಬಳಕೆಗೆ ಇಂದು ಚಾಲನೆ ಸಿಗಲಿದೆ. ಈ ತಂತ್ರಜ್ಞಾನವನ್ನು ಭಾರತ ಹಂಚಿಕೊಳ್ಳಲಿದೆ. ಇದನ್ನು ಯಥಾವತ್ತಾಗಿ ಏಷ್ಯಾದ ಇತರ ದೇಶಗಳೂ ಬಳಸಬಹುದಾಗಿದೆ. ತ್ಯಾಜ್ಯ ಪೆಟ್ ಬಾಟಲಿಗಳಿಂದ ಹಲವು ಉತ್ಪನ್ನಗಳನ್ನು ತಯಾರಿಸುವ ತಂತ್ರಜ್ಞಾನ ಅಭಿವೃದ್ಧಿಪಡಿಸಲಾಗಿದೆ. ಪರಿಸರ ಮಾಲಿನ್ಯ ತಗ್ಗಿಸಲು ಇದು ನೆರವಾಗಲಿದೆ ಎಂದು ಹರ್​ದೀಪ್ ಸಿಂಗ್ ಪುರಿ ತಿಳಿಸಿದರು.

ಜೈವಿಕ ಇಂಧನಕ್ಕೆ ಭಾರತ ಸರ್ಕಾರವು ಉತ್ತೇಜನ ನೀಡುತ್ತಿದೆ. ಕೆಲವು ಪೆಟ್ರೋಲ್ ಪಂಪ್​ಗಳಲ್ಲಿ ಜೈವಿಕ ಇಂಧನ ಬೆರೆತ ಪೆಟ್ರೋಲಿಯಂ ಉತ್ಪನ್ನಗಳು ಲಭ್ಯವಾಗಲಿವೆ. ಇಂದು ಪ್ರಧಾನಿ ನರೇಂದ್ರ ಮೋದಿ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಹೊಸ ತಂತ್ರಜ್ಞಾನದ ಮೂಲಕ ನಿರ್ಮಾಣವಾದ ಪರಿಸರ ಸ್ನೇಹಿ ವಾಹನಗಳಿಗೂ ಪ್ರಧಾನಿ ಇಂದು ಹಸಿರು ನಿಶಾನೆ ತೋರಿಸಲಿದ್ದಾರೆ. ಪರಿಸರ ಮಾಲಿನ್ಯ ತಗ್ಗಿಸುವುದನ್ನು ನಮ್ಮ ಸರ್ಕಾರ ಆದ್ಯತೆಯಾಗಿ ಪರಿಗಣಿಸಿದೆ. ಹಸಿರು ಇಂಧನದ ಬಗ್ಗೆ ಬಜೆಟ್ ಭಾಷಣದಲ್ಲಿಯೂ ಪ್ರಸ್ತಾಪಿಸಲಾಗಿತ್ತು. ದೊಡ್ಡ ಮೊತ್ತದ ಅನುದಾನವನ್ನು ಈ ಕ್ಷೇತ್ರಕ್ಕೆ ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ಶೂನ್ಯ ಇಂಗಾಲ ಹೊರಸೂಸುವಿಕೆ ಆಶಯ ಸಾಕಾರಗೊಳಿಸಲು ನಾವು ಶ್ರಮಿಸಬೇಕಿದೆ. ಅದು ನಮ್ಮ ಆದ್ಯತೆಯಾಗಬೇಕು. 2030ರ ವೇಳೆಗೆ 1 ಬಿಲಿಯನ್ ಟನ್ ಎಮಿಷನ್ ಕಡಿತ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ. 20% ಬಯೋ ಇಂಧನ ಬಳಕೆ ಹೆಚ್ಚಳ ಮಾಡಲು ಗುರಿ ಇಟ್ಟುಕೊಳ್ಳಲಾಗಿದೆ. ಏಪ್ರಿಲ್ ತಿಂಗಳ ವೇಳೆ ಇ-20 ಇಂಧನ ಲಭ್ಯತೆ ಆಗಲಿದ್ದು ಪ್ರಧಾನಿ ಉದ್ಘಾಟನೆ ಮಾಡಲಿದ್ದಾರೆ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:25 pm, Mon, 6 February 23