ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರಮುಖ ಸಾಕ್ಷಿಗೆ ಬೆದರಿಕೆ ಆರೋಪ; ತನಿಖೆಗೆ ಕೋರ್ಟ್ ಸೂಚನೆ
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಪ್ರಮುಖ ಸಾಕ್ಷಿಗೆ ಬೆದರಿಕೆ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಿಐಡಿ ಎಡಿಜಿಪಿಗೆ ವಿಶೇಷ ನ್ಯಾಯಾಲಯ ಸೂಚನೆ ನೀಡಿದೆ. ನನಗೆ ಅಥವಾ ನನ್ನ ಮಗನಿಗೆ ಏನಾದರೂ ಆದರೆ ಅದಕ್ಕೆ ಆರೋಪಿಗಳೇ ಹೊಣೆ ಎಂದು ಸಾಕ್ಷಿದಾರರು ನ್ಯಾಯಾಲಯದಲ್ಲಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಮುಖ್ಯಾಂಶಗಳು
- ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣ
- ಹೊಳೆನರಸೀಪುರ ಮೂಲದ ಸಾಕ್ಷಿಗೆ ಬೆದರಿಕೆ ಆರೋಪ
- ಆರೋಪದ ಬಗ್ಗೆ ತನಿಖೆಗೆ ಕೋರ್ಟ್ ಸೂಚನೆ
ಬೆಂಗಳೂರು, ಆಗಸ್ಟ್ 21: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಸಾಕ್ಷ್ಯ ದಾಖಲಿಸಿದ ಬಳಿಕ ಬೆದರಿಕೆ ಕರೆಗಳು ಬಂದಿವೆ ಎಂದು ಪ್ರಮುಖ ಸಾಕ್ಷಿಯೊಬ್ಬರು ವಿಚಾರಣೆ ವೇಳೆ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ತಮ್ಮ ಹಾಗೂ ತಮ್ಮ ಮಗನ ಸುರಕ್ಷತೆ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ ಪ್ರಸಂಗ ನಡೆದಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಮೂಲದ 43 ವರ್ಷದ ಸಮಾಜ ಸೇವಕಿ ಜುಲೈ 6, 2026ರಂದು ಪ್ರಾಸಿಕ್ಯೂಷನ್ ಸಾಕ್ಷಿ-4 (PW-4) ಆಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ದಾಖಲಿಸಿದ್ದರು.
ಸಿಐಡಿ ತನಿಖೆಗೆ ನ್ಯಾಯಾಲಯ ಸೂಚನೆ
ಸಾಕ್ಷಿಯ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ (ADGP) ಬೆದರಿಕೆ ಆರೋಪದ ಬಗ್ಗೆ ತನಿಖೆ ನಡೆಸಿ ಮುಂದಿನ ವಿಚಾರಣೆ ದಿನ ವರದಿ ಸಲ್ಲಿಸುವಂತೆ ನಿರ್ದೇಶಿಸಿದೆ. ಇದಲ್ಲದೆ, ನನಗೆ ಅಥವಾ ನನ್ನ ಮಗನಿಗೆ ಏನಾದರೂ ಆದರೆ ಅದಕ್ಕೆ ಆರೋಪಿಗಳೇ ಹೊಣೆ ಎಂದು ಸಾಕ್ಷಿದಾರರು ನ್ಯಾಯಾಲಯದಲ್ಲಿ ಹೇಳಿದ್ದಾರೆ. ಆರೋಪಿಗಳಿಂದ ಜೀವಕ್ಕೆ ಅಪಾಯವಿರುವ ಆತಂಕವನ್ನೂ ಅವರು ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಸಿಕ್ಕ ಮೊಬೈಲ್, ಪೆನ್ಡ್ರೈವ್ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ
ಇತ್ತೀಚೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಹೈ ಸೆಕ್ಯುರಿಟಿ ಬ್ಯಾರಕ್ನಲ್ಲಿ ಪ್ರಜ್ವಲ್ ರೇವಣ್ಣ ಇದ್ದ ಸೆಲ್ನಿಂದ ಮೊಬೈಲ್ ಫೋನ್, ಚಾರ್ಜರ್, ಪೆನ್ ಡ್ರೈವ್ ಹಾಗೂ ಬರವಣಿಗೆಯ ಪ್ಯಾಡ್ ಅನ್ನು ಸಿಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಈ ಸಂಬಂಧ ಪ್ರಜ್ವಲ್ ಹಾಗೂ ಅವರ ಸಹ ಕೈದಿಯ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ ಬೆನ್ನಲ್ಲೇ ಪ್ರಜ್ವಲ್ಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:46 pm, Fri, 21 August 26




