ಮೈಸೂರಿನಲ್ಲಿ ಗಣೇಶೋತ್ಸವಕ್ಕೆ ಪೊಲೀಸ್ ಷರತ್ತು; ಇನ್ಸ್ಪೆಕ್ಟರ್ ಧನಂಜಯ್ ಅಮಾನತಿಗೆ ಪ್ರಲ್ಹಾದ್ ಜೋಶಿ ಒತ್ತಾಯ
ಟಿ. ನರಸೀಪುರದಲ್ಲಿ ಗಣೇಶ ಸಮಿತಿಯ ಯುವಕರಿಗೆ ಬೆದರಿಕೆ ಹಾಕಿದ ಆರೋಪಕ್ಕೆ ಗುರಿಯಾಗಿರುವ ಇನ್ಸ್ಪೆಕ್ಟರ್ ಧನಂಜಯ್ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಬೇಕೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ತುಷ್ಟಿಕರಣ ರಾಜಕಾರಣ ಹಾಗೂ ಹಿಂದೂ ವಿರೋಧಿ ಧೋರಣೆಯನ್ನು ತೀವ್ರವಾಗಿ ಖಂಡಿಸಿ ಎಕ್ಸ್ ಪೋಸ್ಟ್ ಮಾಡಿದ್ದಾರೆ.

ಮುಖ್ಯಾಂಶಗಳು
- ಗಣೇಶ ಸಮಿತಿ ಯುವಕರಿಗೆ ಬೆದರಿಕೆ ಹಾಕಿದ ಇನ್ಸ್ಪೆಕ್ಟರ್ ಧನಂಜಯ್ ಅಮಾನತಿಗೆ ಆಗ್ರಹ.
- ಕಾಂಗ್ರೆಸ್ ಸರ್ಕಾರದ ವಿರುದ್ಧ ಟ್ವೀಟ್ ಮೂಲಕ ಹರಿದಾಯ್ದ ಕೇಂದ್ರ ಸಚಿವ ಜೋಶಿ.
- ಗಣೇಶೋತ್ಸವ ಆಚರಣೆಗೆ ಅಡ್ಡಿಪಡಿಸುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲವೆಂದು ಕಟ್ಟುನಿಟ್ಟಿನ ಎಚ್ಚರಿಕೆ.
ಬೆಂಗಳೂರು, ಸೆಪ್ಟೆಂಬರ್ 13: ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಗಣೇಶೋತ್ಸವ ಆಚರಣೆ ವೇಳೆ ಯುವಕರಿಗೆ ಬೆದರಿಕೆ ಹಾಕಿದ ಆರೋಪಕ್ಕೆ ಗುರಿಯಾಗಿರುವ ಇನ್ಸ್ಪೆಕ್ಟರ್ ಧನಂಜಯ್ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ಭಕ್ತಿಭಾವದಿಂದ ಹಬ್ಬ ಆಚರಿಸಲು ಬಂದ ಯುವಕರಿಗೆ ಸಾರ್ವಜನಿಕವಾಗಿ ಇನ್ಸ್ಪೆಕ್ಟರ್ ಧಮ್ಕಿ ಹಾಕಿರುವುದು ಅಕ್ಷಮ್ಯ ಅಪರಾಧ ಎಂದು ಅವರು ಟ್ವೀಟ್ ಮೂಲಕ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ತುಷ್ಟಿಕರಣ ರಾಜಕಾರಣದ ಫರ್ಮಾನೇ?: ಜೋಶಿ ಪ್ರಶ್ನೆ
ನಮ್ಮದೇ ದೇಶದಲ್ಲಿ ಮತ್ತು ನಮ್ಮದೇ ನೆಲದಲ್ಲಿ ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸಲು ಹಿಂದೂಗಳು ಗೋಗರೆಯಬೇಕಾದ ಪರಿಸ್ಥಿತಿ ಬಂದಿರುವುದು ಅತ್ಯಂತ ದುರ್ದೈವದ ಸಂಗತಿಯಾಗಿದೆ ಎಂದು ಜೋಶಿ ಆತಂಕ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕವಾಗಿ ಯುವಕರಿಗೆ ಬೆದರಿಕೆ ಹಾಕುವಷ್ಟು ಧೈರ್ಯ ಅಧಿಕಾರಿಗೆ ಎಲ್ಲಿಂದ ಬಂತು? ಇದು ಪೊಲೀಸ್ ಇಲಾಖೆಗೆ ಗೃಹ ಸಚಿವರು ನೀಡಿದ ಅಧಿಕಾರವೋ ಅಥವಾ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ತುಷ್ಟಿಕರಣ ರಾಜಕಾರಣದ ಫರ್ಮಾನೋ ಎಂದು ಅವರು ತೀವ್ರವಾಗಿ ಚಾಟಿ ಬೀಸಿದ್ದಾರೆ.
ಸನಾತನ ಸಂಸ್ಕೃತಿಯ ಮೇಲಿನ ಧಕ್ಕೆ ಸಹಿಸುವುದಿಲ್ಲ
ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಅಧಿಕಾರಿಯೇ ಒಂದು ಸಮುದಾಯದ ಏಜೆಂಟ್ನಂತೆ ವರ್ತಿಸುತ್ತಿರುವುದು ಖಂಡನೀಯ. ಕಾನೂನು ಮತ್ತು ಸುವ್ಯವಸ್ಥೆಯ ನೆಪವೊಡ್ಡಿ ಹಿಂದೂ ಹಬ್ಬಗಳ ಆಚರಣೆಯನ್ನು ಹತೋಟಿ ಮಾಡಲು ಹೊರಟಿರುವುದು ಈ ಸರ್ಕಾರದ ಹಿಂದೂ ವಿರೋಧಿ ಧೋರಣೆಗೆ ಹಿಡಿದ ಕನ್ನಡಿಯಾಗಿದೆ. ನಮ್ಮ ಸನಾತನ ಸಂಸ್ಕೃತಿ, ಆಚರಣೆ ಹಾಗೂ ಭಕ್ತಿಭಾವದ ಮೇಲೆ ಧಕ್ಕೆ ತರಲು ಯತ್ನಿಸಿದರೆ ಅದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಜೋಶಿ ಹೇಳಿದ್ದಾರೆ.
ನಮ್ಮದೇ ದೇಶದಲ್ಲಿ, ನಮ್ಮದೇ ನೆಲದಲ್ಲಿ ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸಲು ಹಿಂದೂಗಳು ಗೋಗರೆಯಬೇಕಾದ ಪರಿಸ್ಥಿತಿ ರಾಜ್ಯದಲ್ಲಿದೆ ಎಂದರೆ ಇದಕ್ಕಿಂತ ದುರ್ದೈವದ ಸಂಗತಿ ಇನ್ನೊಂದಿಲ್ಲ!
ಮೈಸೂರಿನ ಟಿ. ನರಸೀಪುರದ ಇನ್ಸ್ಪೆಕ್ಟರ್, ಗಣೇಶ ಸಮಿತಿಯ ಯುವಕರಿಗೆ ಸಾರ್ವಜನಿಕವಾಗಿ ಧಮ್ಕಿ ಹಾಕುವಷ್ಟು ಧೈರ್ಯ ನೀಡಿದವರು ಯಾರು? ಇದು ಪೊಲೀಸ್ ಇಲಾಖೆಗೆ…
— Pralhad Joshi (@JoshiPralhad) September 13, 2026
ಪೊಲೀಸ್ ಕೃತ್ಯದ ಹಿನ್ನೆಲೆ
ಮೈಸೂರು ಜಿಲ್ಲೆಯ ಟಿ. ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯ ನೆಪ ಹೇಳಿ ಇನ್ಸ್ಪೆಕ್ಟರ್ ಧನಂಜಯ್ ಅವರು ಗಣೇಶ ಸಮಿತಿಯ ಯುವಕರಿಗೆ ಸಾರ್ವಜನಿಕವಾಗಿ ಗದರಿಸಿದ್ದರು. ಅಲ್ಲದೆ ಕಾರ್ಯಕ್ರಮ ರದ್ದುಪಡಿಸುವುದಾಗಿ ಬೆದರಿಕೆ ಹಾಕಿದ್ದರು. ಅಧಿಕಾರಿಯ ಈ ವರ್ತನೆ ಸಾರ್ವಜನಿಕರ ಹಾಗೂ ಹಿಂದೂಪರ ಸಂಘಟನೆಗಳ ತೀವ್ರ ಆಕ್ರೋಶದ ಬೆನ್ನಲ್ಲೇ ಪ್ರಲ್ಹಾದ್ ಜೋಶಿ ಅಧಿಕಾರಿಯ ಅಮಾನತಿಗೆ ಒತ್ತಾಯಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:14 am, Sun, 13 September 26




