AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮಳೆಗೆ ಮತ್ತೊಂದು ಸಾವು: ಜೆ.ಪಿ. ನಗರದ ಮಿನಿ ಫಾರೆಸ್ಟ್ ಬಳಿ ಶಾಕ್ ಹೊಡೆದು ರಘು ಸಾವು, ಒಟ್ಟು 9 ಬಲಿ!

ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜೆ.ಪಿ. ನಗರದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಬಲಿಯಾಗಿದ್ದಾನೆ. ಇದಕ್ಕೂ ಮುನ್ನ, ಶಿವಾಜಿನಗರ ಮತ್ತು ಯಾರಬ್ ನಗರದಲ್ಲೂ ಇದೇ ರೀತಿಯ ದುರ್ಘಟನೆಗಳು ಸಂಭವಿಸಿ ಒಂಬತ್ತು ಸಾವುಗಳಾಗಿವೆ. ಕೋಲಾರದಲ್ಲಿ ಹಳೆಯ ವಿದ್ಯುತ್ ತಂತಿ ತುಂಡಾಗಿ ಬಿದ್ದು ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಈ ಎಲ್ಲಾ ಘಟನೆಗಳಿಗೆ ಬೆಸ್ಕಾಂ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಬೆಂಗಳೂರು ಮಳೆಗೆ ಮತ್ತೊಂದು ಸಾವು: ಜೆ.ಪಿ. ನಗರದ ಮಿನಿ ಫಾರೆಸ್ಟ್ ಬಳಿ ಶಾಕ್ ಹೊಡೆದು ರಘು ಸಾವು, ಒಟ್ಟು 9 ಬಲಿ!
ಜೆ.ಪಿ. ನಗರದ ಮಿನಿ ಫಾರೆಸ್ಟ್ ಬಳಿ ಶಾಕ್ ಹೊಡೆದು ರಘು ಸಾವು
ಪ್ರದೀಪ್​ ಚಿಕ್ಕಾಟಿ
| Edited By: |

Updated on:Apr 29, 2026 | 11:04 PM

Share

ಬೆಂಗಳೂರು, ಏ.29: ರಾಜಧಾನಿಯಲ್ಲಿ ಮಳೆಯ ಆರ್ಭಟ ಮುಂದುವರಿಯುತ್ತಿದ್ದು, ಇಂದು ಸಂಜೆ ಸಂಭವಿಸಿದ ಮಳೆಯ ಅವಾಂತರಗಳಿಗೆ ನಗರದಲ್ಲಿ ಮತ್ತೊಂದು ಬಲಿಯಾಗಿದೆ. ಜೆ.ಪಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದಕ್ಕೂ ಮುನ್ನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತದಿಂದ 7 ಜನರು ಸಾವನ್ನಪ್ಪಿದ್ದಾರೆ. ಇದರ ನಂತರ ಯಾರಬ್ ನಗರದಲ್ಲಿ ಮಳೆಯಲ್ಲಿ ಬೈಕ್ ಪಾರ್ಕ್ ಮಾಡುತ್ತಿದ್ದ ಸೈಯದ್ ಸೂಫಿಯಾನ್ ಎಂಬ ವಿದ್ಯಾರ್ಥಿ ವಿದ್ಯುತ್ ಶಾಕ್‍ಗೆ ಬಲಿಯಾಗಿದ್ದಾನೆ. ಇದೀಗ ಒಟ್ಟು ಒಂಬತ್ತು ಸಾವು ಸಂಭವಿಸಿದೆ.

ಜೆ.ಪಿ. ನಗರದ ಮಿನಿ ಫಾರೆಸ್ಟ್, 15ನೇ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ. ಸುಮಾರು 30-35 ವರ್ಷ ವಯಸ್ಸಿನ ರಘು ಎಂಬುವವರು ಮಳೆಯ ನಡುವೆ ಸಂಚರಿಸುತ್ತಿದ್ದಾಗ, ರಸ್ತೆಯಲ್ಲಿದ್ದ ವಿದ್ಯುತ್ ಕಂಬದ ಬಳಿ ಹರಿದುಬಿದ್ದಿದ್ದ ವಿದ್ಯುತ್ ತಂತಿ (ವೈರ್) ಟಚ್ ಆಗಿದ್ದರಿಂದ ತೀವ್ರವಾಗಿ ಶಾಕ್ ತಗುಲಿದೆ. ವಿದ್ಯುತ್ ಪ್ರವಾಹದ ತೀವ್ರತೆಗೆ ರಘು ಅವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಜೆ.ಪಿ. ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸುವ ಪ್ರಕ್ರಿಯೆ ನಡೆಯುತ್ತಿದೆ.

ಇದನ್ನೂ ಓದಿ: ಬೆಂಗಳೂರು ಮಳೆಗೆ ಮತ್ತೊಂದು ಬಲಿ: ಬೈಕ್ ಪಾರ್ಕ್ ಮಾಡುವಾಗ ವಿದ್ಯುತ್ ತಗುಲಿ ಪಿಯುಸಿ ವಿದ್ಯಾರ್ಥಿ ಸಾವು!

ಕೋಲಾರ: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಅಮಾಯಕ ಬಲಿ:

ಇದೊಂದು ಪ್ರತ್ಯೇಕ ಘಟನೆಯಾಗಿದ್ದು, ಜಿಲ್ಲೆಯಲ್ಲಿ ಬೆಸ್ಕಾಂ (BESCOM) ಅಧಿಕಾರಿಗಳ ಮಿತಿಮೀರಿದ ನಿರ್ಲಕ್ಷ್ಯದಿಂದಾಗಿ 55 ವರ್ಷದ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೋಲಾರ ತಾಲ್ಲೂಕಿನ ಕೋಡಿಕಣ್ಣೂರು ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಗ್ರಾಮಸ್ಥರು ವಿದ್ಯುತ್ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಡಿಕಣ್ಣೂರು ಗ್ರಾಮದ ನಿವಾಸಿ ಪ್ರಭು (55) ಅವರು ಗ್ರಾಮದ ಅಶ್ವಥಕಟ್ಟೆಯ ಮೇಲೆ ಕುಳಿತು ವಿಶ್ರಮಿಸುತ್ತಿದ್ದರು. ಈ ವೇಳೆ ಏಕಾಏಕಿ ಮೇಲಿದ್ದ ವಿದ್ಯುತ್ ತಂತಿಯು ತುಂಡಾಗಿ ಅವರ ಮೇಲೆ ಬಿದ್ದಿದೆ. ವಿದ್ಯುತ್ ಪ್ರವಾಹದ ತೀವ್ರತೆಗೆ ಪ್ರಭು ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಹಳೆಯದಾದ ವಿದ್ಯುತ್ ತಂತಿಗಳನ್ನು ಬದಲಾಯಿಸದ ಬೆಸ್ಕಾಂ ಅಧಿಕಾರಿಗಳ ಅಜಾಗರೂಕತೆಯೇ ಈ ಸಾವಿಗೆ ನೇರ ಕಾರಣ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ. ಮೃತ ಪ್ರಭು ಅವರ ಕುಟುಂಬಕ್ಕೆ ಸರ್ಕಾರ ಮತ್ತು ಬೆಸ್ಕಾಂ ತಕ್ಷಣವೇ ದೊಡ್ಡ ಮೊತ್ತದ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿವೇಕಾನಂದ ಮೆಟ್ರೋ ನಿಲ್ದಾಣದ ಬಳಿ ಗೋಡೆ ಕುಸಿತ; 18 ವರ್ಷದ ವಿದ್ಯಾರ್ಥಿಗೆ ಗಂಭೀರ ಗಾಯ!

ನಗರದ ಮೆಟ್ರೋ ನಿಲ್ದಾಣದ ಬಳಿಯೇ ಮತ್ತೊಂದು ಅಪಾಯಕಾರಿ ಘಟನೆ ಸಂಭವಿಸಿದೆ. ವಿವೇಕಾನಂದ ಮೆಟ್ರೋ ನಿಲ್ದಾಣದ ಸಮೀಪ ರಕ್ಷಣಾ ಇಲಾಖೆಗೆ (Defence Department) ಸೇರಿದ ಜಾಗದ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದ್ದು, ಹದಿಹರೆಯದ ವಿದ್ಯಾರ್ಥಿಯೊಬ್ಬ ದುರಂತಕ್ಕೆ ಸಿಲುಕಿದ್ದಾನೆ. ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯ ಹಿನ್ನೆಲೆಯಲ್ಲಿ ವಿವೇಕಾನಂದ ಮೆಟ್ರೋ ನಿಲ್ದಾಣದ ಬಳಿ ಇದ್ದ ಗೋಡೆಯು ಏಕಾಏಕಿ ಕುಸಿದಿದೆ. ಈ ಸಂದರ್ಭದಲ್ಲಿ ಅಲ್ಲಿ ಸಂಚರಿಸುತ್ತಿದ್ದ 18 ವರ್ಷದ ವಿದ್ಯಾರ್ಥಿ ಜೋಸುವಾ ಎಂಬಾತನ ಮೇಲೆ ಗೋಡೆಯ ಭಾಗಗಳು ಬಿದ್ದಿವೆ. ಘಟನೆಯಲ್ಲಿ ಜೋಸುವಾಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯರು ಆತನನ್ನು ರಕ್ಷಿಸಿ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಜೋಸುವಾಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಮಳೆಯಿಂದಾಗಿ ನಗರದ ಹಲವು ಹಳೆಯ ಗೋಡೆಗಳು ಶಿಥಿಲಗೊಂಡಿದ್ದು, ಪಾದಚಾರಿಗಳು ಮತ್ತು ವಾಹನ ಸವಾರರು ಆತಂಕದಲ್ಲಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:04 pm, Wed, 29 April 26

Follow Us