
ಬೆಂಗಳೂರು, ಆಗಸ್ಟ್ 25: ಕದ್ದ ಹಣದಲ್ಲೇ ಬಡವರಿಗೆ ನೆರವಾಗಿ, ಸ್ನೇಹಿತರಿಗೆ ಗ್ರಾಂಡ್ ಪಾರ್ಟಿ ನೀಡುತ್ತಿದ್ದ ಖತರ್ನಾಕ್ ಮನೆಗಳ್ಳ ಶಿವರಸನ್ (34) ಎಂಬಾತನನ್ನು ನಗರದ (Bengaluru) ಬೇಗೂರು ಪೊಲೀಸರು ಬಂಧಿಸಿದ್ದಾರೆ. ವೈಟ್ಫೀಲ್ಡ್ನಲ್ಲಿ ವಾಸವಿದ್ದ ಈತ, ಬೆಳಗಿನ ಜಾವ ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ. ಬಂಧಿತನಿಂದ 8 ಮನೆಗಳ್ಳತನ ಪ್ರಕರಣ ಭೇದಿಸಲಾಗಿದ್ದು, ಚಿನ್ನ-ಬೆಳ್ಳಿ ಸೇರಿದಂತೆ 36 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮೂಲತಃ ಕಲಾವಿದ ಆಗಿ ಕೆಲಸ ಮಾಡುತ್ತಿದ್ದ ಶಿವರಸನ್, ಶೋಕಿ ಜೀವನಕ್ಕಾಗಿ ಕಳ್ಳತನದ ಹಾದಿ ಹಿಡಿದಿದ್ದ. ವೈಟ್ಫೀಲ್ಡ್ನಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಿದ್ದ ಈತ, ಬೆಳಗಿನ ಜಾವದಲ್ಲಿ ಬೈಕ್ನಲ್ಲಿ ಸುತ್ತಾಡಿ ಬೀಗ ಹಾಕಿದ್ದ ಮನೆಗಳನ್ನು ಟಾರ್ಗೆಟ್ ಮಾಡುತ್ತಿದ್ದ. ಆಟೋ ಚಾಲಕರು ಮತ್ತು ಬಡವರಿಗೆ ಕದ್ದ ಹಣದಿಂದ ಸ್ವಲ್ಪ ಧನಸಹಾಯ ಮಾಡಿ, ಅವರಿಂದಲೇ ಬೀಗ ಹಾಕಿದ ಮನೆಗಳ ಮಾಹಿತಿ ಸಂಗ್ರಹಿಸುತ್ತಿದ್ದ. ಈತನ ವಿರುದ್ಧ ಈಗಾಗಲೇ ಬೆಂಗಳೂರಿನ ವಿವಿಧ ಠಾಣೆಗಳಲ್ಲಿ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಬೇಗೂರು ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯಿಂದ ಬೇಗೂರಿನ 3, ರಾಮಮೂರ್ತಿನಗರದ 2, ಆಲವಳ್ಳಿ, ಹೊಸಕೋಟೆ (ಹನಗೊಂಡನಹಳ್ಳಿ) ಹಾಗೂ ಕೆ.ಆರ್.ಪುರಂನ ತಲಾ 1 ಮನೆ ಸೇರಿದಂತೆ ಒಟ್ಟು 8 ಮನೆಗಳ್ಳತನ ಪ್ರಕರಣಗಳನ್ನು ಭೇದಿಸಲಾಗಿದೆ.
ಬಂಧಿತನಿಂದ 196 ಗ್ರಾಂ ಚಿನ್ನ ಹಾಗೂ 4 ಕೆಜಿ ಬೆಳ್ಳಿ ಸೇರಿದಂತೆ ಒಟ್ಟು 36 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ