
ಬೆಂಗಳೂರು, ಸೆಪ್ಟೆಂಬರ್ 10: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಬರಬೇಕಿರುವ 2,186 ಕೋಟಿ ರೂಪಾಯಿ ಹಣ ಬಾಕಿ ಹಿನ್ನೆಲೆ ನ್ಯಾಯಾಲಯದ ಮೊರೆ ಹೋಗಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದ್ದು, 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಗ್ರಾಮ ಪಂಚಾಯತ್ಗಳಿಗೆ 2186.20 ಕೋಟಿ ರೂಪಾಯಿ ಅನುದಾನ ಬರಬೇಕಿದೆ. ಆದರೆ ಈ ಹಣವನ್ನು ಕೇಂದ್ರ ಸರ್ಕಾರ ತಡೆಹಿಡಿದಿರುವ ಕಾರಣ ಅನುದಾನ ಬಾಕಿ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಲಾಗಿದೆ.
ವಿಕಾಸಸೌಧದ ಕಚೇರಿಯಲ್ಲಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿರುವ ಸಚಿವ ಈಶ್ವರ ಖಂಡ್ರೆ, 2025-26ನೇ ಸಾಲಿನಲ್ಲಿ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಹಂಚಿಕೆ ಮಾಡಿದ್ದ ಅನುದಾನ ಬಿಡುಗಡೆಗೆ ನಿರಾಕರಿಸಿರುವ ಕೇಂದ್ರ ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಾರಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ತಲೆದೋರಿದೆ. 710 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, 149 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. 561 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆಯಲಾಗಿದೆ. ಬಿತ್ತನೆ ಮಾಡಿದ ಬೀಜ ಮೊಳಕೆ ಒಡೆಯದೆ ರೈತರು ಕಂಗಾಲಾಗಿದ್ದಾರೆ ಎಂದು ಖಂಡ್ರೆ ತಿಳಿಸಿದ್ದಾರೆ.
ಇದನ್ನೂ ಓದಿ: ಬಡವರಿಗೆ 15 ಲಕ್ಷ ಉಚಿತ ಸೈಟ್: ಮಹಿಳೆಯರು, ರೈತರು, ವಿದ್ಯಾರ್ಥಿಗಳಿಗೆ ಸರ್ಕಾರ ಬಂಪರ್ ಕೊಡುಗೆ!
ಪರಿಸ್ಥಿತಿ ಹೀಗಿರುವಾಗ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡದಿರುವ ಕಾರಣ ಮತ್ತಷ್ಟು ಸಂಕಷ್ಟ ಎದುರಾಗಿದೆ. ಹೀಗಾಗಿ ನ್ಯಾಯಯುತ ಹಂಚಿಕೆಯನ್ನು ಬಿಡುಗಡೆ ಮಾಡದಿರುವ ಬಗ್ಗೆ ಕೋರ್ಟ್ನಲ್ಲಿ ಪ್ರಶ್ನಿಸುವ ಕಾನೂನು ಅಂಶಗಳ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಸಭೆಯಲ್ಲಿ ಚರ್ಚಿಸಿದ್ದಾರೆ. ಸಭೆಯಲ್ಲಿ ಅಂತಿಮವಾಗಿ ಈ ಬಗ್ಗೆ ಸುಪ್ರೀಂಕೋರ್ಟ್ ಮೊರೆ ಹೋಗಲು ತೀರ್ಮಾನಿಸಲಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 11:34 am, Thu, 10 September 26