
ಬೆಂಗಳೂರು, ಏಪ್ರಿಲ್ 12: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯ ಲಾಭವನ್ನು ರಾಜ್ಯದ ಕೋಟ್ಯಾಂತರ ಹೆಣ್ಣು ಮಕ್ಕಳು ಪಡೆಯುತ್ತಿದ್ರೆ, ಇತ್ತ ಬಿಎಂಟಿಸಿಯ ಕೆಲ ಕಿಲಾಡಿ ನೌಕರು ಮಾತ್ರ ಅನ್ನ ತಿಂದ ಮನೆಗೆ ಕನ್ನ ಹಾಕೋ ಕೆಲಸ ಮಾಡುತ್ತಿದ್ದಾರೆ. ಕನ್ನಡ ಬಾರದ ಪುರುಷ ಪ್ರಯಾಣಿಕರಿಗೆ ಶಕ್ತಿ ಯೋಜನೆಯ ಟಿಕೆಟ್ ನೀಡಿ ದುಡ್ಡು ಮಾಡ್ತಿದ್ದಾರೆ. ಮತ್ತೊಂದೆಡೆ ಪ್ರಯಾಣಿಕರಿಗೆ ಸಹಾಯ ಆಗಲಿ ಎಂದು ಬಿಎಂಟಿಸಿ ಯುಪಿಐ ಕ್ಯೂಆರ್ ಕೋಡ್ಗಳನ್ನು ಅಳವಡಿಸಿದೆ. ಇದನ್ನು ಸ್ಕ್ಯಾನ್ ಮಾಡಿ ಟಿಕೆಟ್ ಹಣ ಪಾವತಿಸುವಂತೆ ಪ್ರಯಾಣಿಕರಿಗೆ ಸೂಚಿವ ಬದಲು, ಕೆಲ ನಿರ್ವಾಹಕರು ತಮ್ಮ ವೈಯಕ್ತಿಕ ಯುಪಿಐ ಮಾಹಿತಿ ನೀಡಿ ದುಡ್ಡು ಪೀಕುವ ಕೆಲಸಕ್ಕೂ ಇಳಿದಿದ್ದಾರೆ. ಈ ಹಿನ್ನೆಲೆ ನಿಗಮಕ್ಕೆ ಸೇರಬೇಕಿದ್ದ ಲಕ್ಷ ಲಕ್ಷ ಹಣ ತಮ್ಮ ಜೇಬಿಗೆ ಇಳಿಸಿಕೊಂಡಿದ್ದ ನಾಲ್ಕು ಜನ ಕಿಲಾಡಿ ಕಂಡಕ್ಟರ್ಗಳನ್ನೀಗ ಮನೆಗೆ ಕಳುಹಿಸಲಾಗಿದೆ.
ಶಕ್ತಿ ಯೋಜನೆಯ ಫ್ರೀ ಟಿಕೆಟ್ ಮೇಲೆ ಕನ್ನಡದಲ್ಲಿ ಮಾತ್ರ ಉಚಿತ ಪ್ರಯಾಣ ಎಂದು ಪ್ರಿಂಟ್ ಮಾಡಲಾಗಿದೆ. ಹೀಗಾಗಿ ಕನ್ನಡ ಓದಲು ಬಾರದ ಪ್ರಯಾಣಿಕರನ್ನೇ ಟಾರ್ಗೆಟ್ ಮಾಡಿ ಅವರಿಗೆ ಟಿಕೆಟ್ ನೀಡಿ ಹಣ ಪಡೆಯಲಾಗುತ್ತಿತ್ತು. ತನಿಖೆಯಲ್ಲಿ ಕೆಲ ನಿರ್ವಾಹಕರ ಈ ಕಳ್ಳಾಟ ಬಯಲಾಗಿದ್ದು, ಅಕೌಂಟ್ನಲ್ಲಿ ಸಾವಿರಾರು ರೂಪಾಯಿ ಹಣವೂ ಪತ್ತೆಯಾಗಿದೆ.
ಇದನ್ನೂ ಓದಿ: BMTC ನಿಗಮಕ್ಕೆ ಚಳ್ಳೆಹಣ್ಣು ತಿನ್ನಿಸಿ ಹಣ ಪೀಕುತ್ತಿದ್ದ ನಾಲ್ವರು ಕಂಡಕ್ಟರ್ ಸಸ್ಪೆಂಡ್
ಇನ್ನು ಈ ಕಿಲಾಡಿ ಕಂಡಕ್ಟರ್ಗಳು ಡಿಪೋದಿಂದ ಬಸ್ಗಳು ಹೊರಗೆ ಬರ್ತಿದ್ದಂತೆ ಬಿಎಂಟಿಸಿಯ ಯುಪಿಐ ಕ್ಯೂಆರ್ ಕೋಡ್ಗಳನ್ನು ಕಿತ್ತು ಇಟ್ಟುಕೊಳ್ಳುತ್ತಿದ್ದರು. ಪ್ರಯಾಣಿಕರು ಯುಪಿಐ ಪೇಮೆಂಟ್ ಮಾಡಿ ಟಿಕೆಟ್ ಖರೀದಿ ಮಾಡಬೇಕು ಎಂದು ಕೇಳಿದಾಗ, ತಮ್ಮ ಮೊಬೈಲ್ನಲ್ಲಿರುವ ಸ್ವಂತ ಅಕೌಂಟ್ನ ಕ್ಯೂಆರ್ ಕೋಡ್ ನೀಡಿ ಹಣ ಹಾಕಿಸಿಕೊಳ್ಳುತ್ತಿದ್ದರು. ಈ ಬಗ್ಗೆ ಆರೋಪ ಕೇಳಿ ಬಂದ ಹಿನ್ನೆಲೆ ಬಿಎಂಟಿಸಿಯ ಸೆಕ್ಯೂರಿಟಿ ಅಧಿಕಾರಿಗಳು ತಪಾಸಣೆ ಮಾಡಿದಾಗ ಹತ್ತಕ್ಕೂ ಹೆಚ್ಚು ಕಂಡಕ್ಟರ್ಗಳು ತಗ್ಲಾಕೊಂಡಿದ್ದು, ಪ್ರತಿಯೊಬ್ಬರ ಅಕೌಂಟ್ ನಲ್ಲಿ 10ರಿಂದ 50 ಸಾವಿರ ರೂಪಾಯಿವರೆಗೆ ಯುಪಿಐ ವಹಿವಾಟು ನಡೆದಿರೋದು ಬಯಲಾಗಿದೆ. ಆ ಸಂಬಂಧ ಸದ್ಯ ನಾಲ್ಕು ಜನರನ್ನು ಸಸ್ಪೆಂಡ್ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿ ಮನೆಗೆ ಹೋಗೋದು ಫಿಕ್ಸ್ ಎನ್ನಲಾಗಿದೆ. ಇಂತಹುದೇ ಘಟನೆ ಸಂಬಂಧ ಈ ಹಿಂದೆಯೂ ಕೆಲವರನ್ನು ಬಿಎಂಟಿಸಿ ಅಮಾನತು ಮಾಡಿತ್ತೆಂಬುದು ಇಲ್ಲಿ ಗಮನಾರ್ಹ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.