ಕೋಮುವಾದಿ, ಜಾತಿವಾದಿ ಬಿಜೆಪಿಗೆ ತಕ್ಕ ಉತ್ತರ ನೀಡಬೇಕು; ಕಾಂಗ್ರೆಸ್‌ ಪಕ್ಷದ 2ನೇ ಅಭ್ಯರ್ಥಿಗೆ ಮತ ನೀಡುವಂತೆ ಜೆಡಿಎಸ್ ಶಾಸಕರಿಗೆ ಪತ್ರ ಬರೆದ ಸಿದ್ದರಾಮಯ್ಯ

| Updated By: ಆಯೇಷಾ ಬಾನು

Updated on: Jun 09, 2022 | 2:29 PM

ಪಠ್ಯಪುಸ್ತಕ ಪರಿಷ್ಕರಣೆಯ ನೆಪದಲ್ಲಿ ನಾವು ಗೌರವಿಸುವ ಮಹಾಪುರುಷರಿಗೆ ಸರ್ಕಾರ ಅವಮಾನ ಮಾಡಿದೆ. ರಾಜ್ಯಸಭಾ ಚುನಾವಣೆ ಮೂಲಕ ಒದಗಿ ಬಂದ ಅವಕಾಶ ಬಳಸಿಕೊಳ್ಳಿ. ಕೋಮುವಾದಿ & ಜಾತಿವಾದಿ ಬಿಜೆಪಿಗೆ ತಕ್ಕ ಉತ್ತರ ನೀಡಬೇಕು. ಕಾಂಗ್ರೆಸ್ನ 2ನೇ ಅಭ್ಯರ್ಥಿಗೆ ಮತಹಾಕುವ ಮೂಲಕ ಉತ್ತರಿಸಬೇಕು ಎಂದು ಜೆಡಿಎಸ್ ಶಾಸಕರಿಗೆ ಪತ್ರದ ಮೂಲಕ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಕೋಮುವಾದಿ, ಜಾತಿವಾದಿ ಬಿಜೆಪಿಗೆ ತಕ್ಕ ಉತ್ತರ ನೀಡಬೇಕು; ಕಾಂಗ್ರೆಸ್‌ ಪಕ್ಷದ 2ನೇ ಅಭ್ಯರ್ಥಿಗೆ ಮತ ನೀಡುವಂತೆ ಜೆಡಿಎಸ್ ಶಾಸಕರಿಗೆ ಪತ್ರ ಬರೆದ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us on

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತ ಹಾಕುವಂತೆ ಜೆಡಿಎಸ್‌ ಶಾಸಕರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಕೋಮುವಾದಿ, ಜಾತಿವಾದಿ ಬಿಜೆಪಿಗೆ ತಕ್ಕ ಉತ್ತರ ನೀಡಬೇಕು ಹೀಗಾಗಿ ಕಾಂಗ್ರೆಸ್‌ ಪಕ್ಷದ 2ನೇ ಅಭ್ಯರ್ಥಿಗೆ ಮತ ನೀಡಿ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಮನವಿ ಮಾಡಿದ್ದಾರೆ. 37 ಶಾಸಕರನ್ನು ಹೊಂದಿದ್ದ ಜೆಡಿಎಸ್ ಬೆಂಬಲಿಸಿ ಹೆಚ್.ಡಿ.ಕುಮರಾಸ್ವಾಮಿಯನ್ನು ರಾಜ್ಯದ ಮುಖ್ಯಮಂತ್ರಿ ಮಾಡಿದ್ದೆವು. ರಾಜ್ಯಸಭೆ ಚುನಾವಣೆಗೆ ನಮ್ಮ ಅಭ್ಯರ್ಥಿ ಘೋಷಿಸಿದ ಮರು ದಿನ ಗೆಲ್ಲಿಸುವಷ್ಟು ಮತಗಳು ಲಭ್ಯವಿಲ್ಲದೆ ಇದ್ದರೂ ಜೆಡಿಎಸ್ ಅಭ್ಯರ್ಥಿ ಹಾಕಿದ್ದಾರೆ. ಇದು ನಮಗೆ ನೋವನ್ನುಂಟು ಮಾಡಿದೆ. ಸರ್ವಜನಾಂಗದ ಶಾಂತಿಯ ತೋಟವನ್ನು ಬಿಜೆಪಿ ಹಾಳುಮಾಡ್ತಿದೆ. ಪಠ್ಯಪುಸ್ತಕ ಪರಿಷ್ಕರಣೆಯ ನೆಪದಲ್ಲಿ ನಾವು ಗೌರವಿಸುವ ಮಹಾಪುರುಷರಿಗೆ ಸರ್ಕಾರ ಅವಮಾನ ಮಾಡಿದೆ. ರಾಜ್ಯಸಭಾ ಚುನಾವಣೆ ಮೂಲಕ ಒದಗಿ ಬಂದ ಅವಕಾಶ ಬಳಸಿಕೊಳ್ಳಿ. ಕೋಮುವಾದಿ & ಜಾತಿವಾದಿ ಬಿಜೆಪಿಗೆ ತಕ್ಕ ಉತ್ತರ ನೀಡಬೇಕು. ಕಾಂಗ್ರೆಸ್ನ 2ನೇ ಅಭ್ಯರ್ಥಿಗೆ ಮತಹಾಕುವ ಮೂಲಕ ಉತ್ತರಿಸಬೇಕು ಎಂದು ಜೆಡಿಎಸ್ ಶಾಸಕರಿಗೆ ಪತ್ರದ ಮೂಲಕ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಜೆಡಿಎಸ್‌ ಶಾಸಕರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಬರೆದ ಪತ್ರ ಹೀಗಿದೆ
ಜಾತ್ಯತೀತ ಜನತಾದಳದ ವಿಧಾನಸಭಾ ಸದಸ್ಯರಿಗೆ ಪ್ರೀತಿಯ ನಮಸ್ಕಾರಗಳು.
ದೇಶ ಅತ್ಯಂತ ಆತಂಕಕಾರಿ ಹಾದಿಯಲ್ಲಿ ಸಾಗುತ್ತಿರುವುದು ನಮ್ಮೆಲ್ಲರ ಅರಿವಿನಲ್ಲಿದೆ. ಸಾಮಾಜಿಕ ನ್ಯಾಯ, ಸಮಾನತೆ, ಭಾತೃತ್ವ, ಜಾತ್ಯತೀತತೆ ಮೊದಲಾದ ಸಂವಿಧಾನದ ಆಶಯಗಳ ಮೇಲೆ ಪ್ರಭುತ್ವವೇ ನಡೆಸುತ್ತಿರುವ ನಿರಂತರ ದಾಳಿಯಿಂದ ದೇಶದ ಪ್ರಜಾಪ್ರಭುತ್ವವೇ ಅಪಾಯದಲ್ಲಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಕ್ಷೇತ್ರಗಳು ಸೇರಿದಂತೆ ಎಲ್ಲ ಬದಲಾವಣೆಗಳಿಗೂ ರಾಜಕೀಯ ಬದಲಾವಣೆಯೇ ಚಾಲನಾ ಶಕ್ತಿ ಎನ್ನುವುದು ನಾವು ಇತಿಹಾಸದಿಂದ ಕಲಿತ ಪಾಠವಾಗಿದೆ. ಕಲಿತ ಪಾಠವನ್ನು ಪ್ರಯೋಗಿಸುವ ಅವಕಾಶ ಎದುರಾದಾಗ ಮುಕ್ತ ಮನಸ್ಸಿನಿಂದ ತೊಡಗಿಸಿಕೊಳ್ಳುವುದು ಪ್ರತಿಯೊಬ್ಬ ಜವಾಬ್ದಾರಿಯುತ ಪ್ರಜೆಯ ಕರ್ತವ್ಯವಾಗಿದೆ. ಇಂತಹದ್ದೊಂದು ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುವ ಅವಕಾಶವನ್ನು ಇದೇ ಜೂನ್ ಹತ್ತರಂದು ರಾಜ್ಯದಿಂದ ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆ ನಮಗೆ ನೀಡಿದೆ. ಕಾಂಗ್ರೆಸ್ ಕೋಮುವಾದದ ಜೊತೆ ಎಂದೂ ರಾಜಿಯಾಗದೆ ಜಾತ್ಯತೀತತೆ ಪರವಾಗಿ ಗಟ್ಟಿಯಾಗಿ ನಿಂತಿರುವ ಪಕ್ಷ. ಕೋಮುವಾದಿ ಶಕ್ತಿಗಳನ್ನು ಸೋಲಿಸುವ ಪ್ರಸಂಗ ಎದುರಾದಾಗ ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರವನ್ನು ಲೆಕ್ಕಿಸದೆ ಜಾತ್ಯತೀತತೆ ಪರವಾಗಿ ಕಾಂಗ್ರೆಸ್ ಪಕ್ಷ ನಿಂತಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ. ಇದನ್ನೂ ಓದಿ: ಬೆಂಗಳೂರು: ಡ್ರಗ್ಸ್ ನಶೆಯಲ್ಲಿದ್ದ ಆಫ್ರಿಕನ್ ಮೂಲದ ವ್ಯಕ್ತಿಯಿಂದ ರಸ್ತೆ ಮೇಲೆ ಓಡಾಡುವ ಜನರಿಗೆ ತೊಂದರೆ

ಜಾತ್ಯತೀತ ಜನತಾದಳದ ಹಿರಿಯ ನಾಯಕ ಹೆಚ್.ಡಿ.ದೇವೇಗೌಡರಿಗೆ ಪ್ರಧಾನಿಯಾಗುವ ಅವಕಾಶ ಎದುರಾದಾಗ ಕಾಂಗ್ರೆಸ್ ಪಕ್ಷ ಮುಕ್ತ ಹೃದಯದಿಂದ ಬೆಂಬಲಿಸಿತ್ತು. ಎರಡು ವರ್ಷಗಳ ಹಿಂದೆ ಹೆಚ್.ಡಿ.ದೇವೇಗೌಡರು ರಾಜ್ಯಸಭಾ ಚುನಾವಣೆಯನ್ನು ಎದುರಿಸಿದಾಗ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಗೌಡರನ್ನು ಬೆಂಬಲಿಸಿ ಗೆಲ್ಲಿಸಿತ್ತು. ನಾಲ್ಕು ವರ್ಷಗಳ ಹಿಂದೆ ಕೇವಲ 37 ಶಾಸಕರನ್ನು ಹೊಂದಿದ್ದ ಜಾತ್ಯತೀತ ಜನತಾದಳಕ್ಕೆ ನಮ್ಮ ಕಾಂಗ್ರೆಸ್ ಪಕ್ಷ ಬೆಂಬಲಿಸಿ ಹೆಚ್.ಡಿ.ಕುಮರಾಸ್ವಾಮಿ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಿತ್ತು.

ಇದು ನಮ್ಮ ಸೈದ್ದಾಂತಿಕ ಬದ್ದತೆ. ಈ ಬಾರಿ ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಇದೇ ಸೈದ್ದಾಂತಿಕ ಬದ್ದತೆಯಿಂದ ಜಾತ್ಯತೀತ ಜನತಾದಳ ನಮ್ಮ ಎರಡನೇ ಅಭ್ಯರ್ಥಿಯನ್ನು ಬೆಂಬಲಿಸಿ ಗೆಲ್ಲಿಸಬಹುದು ಎಂಬ ನಿರೀಕ್ಷೆಯಿಂದ ನಮ್ಮ ಯುವನಾಯಕ ಮನ್ಸೂರ್ ಅಲಿ ಖಾನ್ ಅವರನ್ನು ಕಣಕ್ಕಿಳಿಸಿದ್ದೆವು. ನಮ್ಮ ಅಭ್ಯರ್ಥಿ ಘೋಷಣೆ ಮಾಡಿದ ಮರುದಿನ ತಮ್ಮಲ್ಲಿ ಒಬ್ಬ ಅಭ್ಯರ್ಥಿಯನ್ನೂ ಗೆಲ್ಲಿಸುವಷ್ಟು ಮತಗಳು ಲಭ್ಯವಿಲ್ಲದೆ ಇದ್ದರೂ ಜೆಡಿಎಸ್ ಪಕ್ಷ, ಹಠಾತ್ತನೆ ತನ್ನ ಅಭ್ಯರ್ಥಿಯನ್ನು ಘೋಷಿಸಿರುವುದು ನಮಗೆ ಆಘಾತವುಂಟುಮಾಡಿದೆ.

ಈ ಚುನಾವಣೆ ಬಹುಮುಖ್ಯವಾಗಿ ಜಾತ್ಯತೀತತೆ ಮತ್ತು ಕೋಮುವಾದ ಎಂಬ ಎರಡು ಸಿದ್ದಾಂತಗಳ ನಡುವಿನ ಸಮರವೂ ಆಗಿದೆ ಎನ್ನುವುದನ್ನು ನೀವು ಬಲ್ಲಿರಿ. ರಾಷ್ಟ್ರಕವಿ ಕುವೆಂಪು ಅವರು ಹೆಮ್ಮೆಯಿಂದ ಹೇಳಿಕೊಂಡ ಸರ್ವಜನಾಂಗದ ಶಾಂತಿಯ ತೋಟವನ್ನು ಬಿಜೆಪಿ, ಧಾರ್ಮಿಕ ದ್ವೇಷಾಸೂಯೆಗಳಿಂದ ಹಾಳುಗೆಡಹುತ್ತಿರುವುದನ್ನು ನಾವು ನಿತ್ಯ ನೋಡುತ್ತಿದ್ದೇವೆ. ಪಠ್ಯಪುಸ್ತಕ ಪರಿಷ್ಕರಣೆಯ ನೆಪದಲ್ಲಿ ಬಸವಣ್ಣ,ಅಂಬೇಡ್ಕರ್,ನಾರಾಯಣ ಗುರು, ನಾಡಪ್ರಭು ಕೆಂಪೇಗೌಡ,ಕುವೆಂಪು ಸೇರಿದಂತೆ ನಾವು ಗೌರವಿಸುವ ಮಹಾಪುರುಷರಿಗೆ ಮಾಡಿರುವ ಅವಮಾನ ಇದಕ್ಕೆ ಇತ್ತೀಚಿನ ಜ್ವಲಂತ ಉದಾಹರಣೆ. ಕನ್ನಡಿಗರೆಲ್ಲರ ಆತ್ಮಸ್ವರೂಪಿಯಾದ ಕುವೆಂಪು ವಿರಚಿತ ನಾಡಗೀತೆಯನ್ನೇ ತಿರುಚಿದ ಕಿಡಿಗೇಡಿಯಿಂದಲೇ ಈ ಎಲ್ಲ ದುಷ್ಕತ್ಯಗಳನ್ನು ಮಾಡಿಸುವ ಧಾರ್ಷ್ಟ್ಯವನ್ನು ಬಿಜೆಪಿ ತೋರಿದೆ. ರಾಜ್ಯಸಭಾ ಚುನಾವಣೆಯ ಮೂಲಕ ಒದಗಿ ಬಂದ ಅವಕಾಶವನ್ನು ಬಳಸಿಕೊಂಡು ಕೋಮುವಾದಿ ಮತ್ತು ಜಾತಿವಾದಿ ಬಿಜೆಪಿಗೆ ತಕ್ಕ ಉತ್ತರ ನೀಡಬೇಕೆಂದು ಜಾತ್ಯತೀತತೆ,ಸೌಹಾರ್ದತೆ ಮತ್ತು ಸಹಬಾಳ್ವೆಯ ಮೇಲೆ ನಂಬಿಕೆ ಇಟ್ಟಿರುವ ನಾಡಬಾಂಧವರೆಲ್ಲರ ಮನದಾಳದ ಹಾರೈಕೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜಾತ್ಯತೀತತೆಯ ಸಾವು-ಬದುಕಿನ ಪ್ರಶ್ನೆಯಾಗಿ ರಾಜ್ಯಸಭಾ ಚುನಾವಣೆ ನಮ್ಮ ಮುಂದಿದೆ. ಸೈದ್ದಾಂತಿಕವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಂದು ಕಡೆ ಇದ್ದರೆ, ಕೋಮುವಾದವನ್ನೇ ಉಸಿರಾಡುವ ಬಿಜೆಪಿ ಇನ್ನೊಂದು ಕಡೆ ಇದೆ. ಈ ಹಿನ್ನೆಲೆಯಲ್ಲಿ ನಮ್ಮ ಎರಡನೇ ಅಭ್ಯರ್ಥಿಯಾಗಿರುವ ಮನ್ಸೂರ್ ಅಲಿ ಖಾನ್ ಅವರ ಸೋಲು-ಗೆಲುವನ್ನು ರಾಜ್ಯದ ಅಲ್ಪಸಂಖ್ಯಾತ ಸಮುದಾಯ ಮಾತ್ರವಲ್ಲ ಜಾತ್ಯತೀತತೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಕುತೂಹಲದಿಂದ ಗಮನಿಸುತ್ತಿದ್ದಾರೆ. ಸೈದ್ದಾಂತಿಕ ಬದ್ದತೆಯಿಂದ ಜಾತ್ಯತೀತ ಜನತಾದಳ ಬೆಂಬಲಿಸಿದರೆ ಈ ಯುವನಾಯಕನ ಆಯ್ಕೆ ನಿರಾತಂಕವಾಗಿ ನಡೆದುಹೋಗುತ್ತದೆ. ಮನ್ಸೂರು ಅಲಿ ಖಾನ್ ಅವರ ಗೆಲುವು ಯಾವುದೇ ಒಂದು ಪಕ್ಷದ ಗೆಲುವಾಗದೆ ಜಾತ್ಯತೀತ ಸಿದ್ದಾಂತದ ಮೇಲೆ ನಂಬಿಕೆ ಇಟ್ಟಿರುವ ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾದಳ ಪಕ್ಷಗಳೆರಡರ ಸೈದ್ದಾಂತಿಕ ಗೆಲುವಾಗುತ್ತದೆ. ಪ್ರಜಾಪ್ರತಿನಿಧಿಗಳಾದ ನಾವೆಲ್ಲರೂ ನಮ್ಮ ಪ್ರಭುಗಳಾದ ಪ್ರಜೆಗಳ ಆತ್ಮಸಾಕ್ಷಿಗೆ ದನಿಯಾಗಬೇಕಾಗಿರುವುದು ಕರ್ತವ್ಯವಾಗಿದೆ. ಈ ಆತ್ಮಸಾಕ್ಷಿಯ ಮತವನ್ನು ಜಾತ್ಯತೀತತೆಗೆ ಬದ್ದವಾಗಿರುವ ನಮ್ಮ ಪಕ್ಷದ ಮನ್ಸೂರ್ ಅಲಿ ಖಾನ್ ಅವರಿಗೆ ಚಲಾಯಿಸಬೇಕೆಂದು ನನ್ನ ಸವಿನಯ ವಿನಂತಿ.
ವಿಶ್ವಾಸಪೂರ್ವಕವಾಗಿ
ಸಿದ್ದರಾಮಯ್ಯ
ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕ