
ಬೆಂಗಳೂರು, ಆಗಸ್ಟ್.17: ರಾಜ್ಯಪಾಲ ಥಾವರ ಚಂದ ಗೆಹ್ಲೋಟ್ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಂಜೆ ವಿಶೇಷ ಸಚಿವ ಸಂಪುಟ ಸಭೆಯನ್ನು ಕರೆದಿದ್ದರು. ಆದರೆ ಕೆಲವು ಕಾರಣಗಳಿಂದ ವಿಶೇಷ ಸಚಿವ ಸಂಪುಟ ಸಭೆ ರದ್ದುಗೊಳಿಸಲಾಗಿದೆ. ಸಂಜೆ 5 ಗಂಟೆಗೆ ನಿಗದಿಯಾಗಿದ್ದ ಸಂಪುಟ ಸಭೆ ರದ್ದಾಗಿದೆ. ಸಿಎಂ ಇಂದಿನ ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ. ವೇಳಾಪಟ್ಟಿಯಂತೆ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ.
ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುತ್ತಿದ್ದಂತೆ ಗೃಹ ಕಛೇರಿ ಕೃಷ್ಣಾದಲ್ಲಿ ಮುಂದಿನ ಕಾನೂನು ಹೋರಾಟದ ಕುರಿತು ಮುಖ್ಯಮಂತ್ರಿಗಳು ಸರಣಿ ಸಭೆಯನ್ನು ನಡೆಸಿ ಚರ್ಚೆ ನಡೆಸಿದರು. ಸಚಿವರಾದ ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ, ಭೈರತಿ ಸುರೇಶ್ ಸೇರಿದಂತೆ ಹಲವು ಸಚಿವರು ಗೃಹ ಕಛೇರಿಗೆ ಆಗಮಿಸಿ ಇದು ಪ್ರತಿಪಕ್ಷಗಳ ಷಡ್ಯಂತ್ರವಾಗಿದ್ದು, ಕಾನೂನು ಹೋರಾಟದಲ್ಲಿ ನಿಮ್ಮ ಜೊತೆ ನಿಲ್ಲುತ್ತೇವೆ ಎಂದು ಸಿದ್ದರಾಮಯ್ಯಗೆ ಭರವಸೆ ನೀಡುತ್ತಿದ್ದರು.
ಇದನ್ನೂ ಓದಿ: ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್: ಸಿಎಂ ಸಿದ್ದರಾಮಯ್ಯ ಮುಂದಿರುವ ಆಯ್ಕೆಗಳೇನು?
ಇನ್ನು ಮತ್ತೊಂದೆಡೆ ರಾಜ್ಯದ ಎಲ್ಲಾ ಸಚಿವರು ಬೆಂಗಳೂರಿಗೆ ಆಗಮಿಸಬೇಕು ಎಂದು ಸೂಚಿಸಿ ಸಂಜೆ 5 ಗಂಟೆಗೆ ವಿಶೇಷ ಸಚಿವ ಸಂಪುಟ ಸಭೆ ನಿಗದಿ ಮಾಡಲಾಗಿತ್ತಿ. ಆದರೆ ಇದೀಗ ಮುಖ್ಯಮಂತ್ರಿಗಳು ವಿಶೇಷ ಸಚಿವ ಸಂಪುಟ ಸಭೆಯನ್ನು ದಿಢೀರ್ ರದ್ದುಗೊಳಿಸಿದ್ದಾರೆ.
ಬಲ್ಲ ಮೂಲಗಳ ಮಾಹಿತಿ ಪ್ರಕಾರ, ಎಐಸಿಸಿ ನಾಯಕರ ದೂರವಾಣಿ ಕರೆ ಹಿನ್ನಲೆಯಲ್ಲಿ ವಿಶೇಷ ಸಚಿವ ಸಂಪುಟ ಸಭೆಯನ್ನು ಸಿಎಂ ರದ್ದುಗೊಳಿಸಿದ್ದಾರೆ ಎನ್ನಲಾಗಿದೆ.
ಪ್ರಾಸಿಕ್ಯೂಷನ್ ಸಂಬಂಧ ಎಐಸಿಸಿ ನಾಯಕರು ಸಿಎಂ ಸಿದ್ದರಾಮಯ್ಯಗೆ ದೂರವಾಣಿ ಕರೆ ಮಾಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಉಸ್ತುವಾರಿ ಸುರ್ಜೇವಾಲ ಕರೆ ಮಾಡಿದ್ದು, ಸಿಎಂ ಸಿದ್ದರಾಮಯ್ಯಗೆ ಅಭಯ ನೀಡಿದ್ದಾರೆ. ನಿಮ್ಮ ಜತೆ ನಾವಿದ್ದೇವೆ, ಧೈರ್ಯವಾಗಿರಿ. ಏನೇ ಆದರೂ ಕಾನೂನು ಹೋರಾಟ ನಡೆಸೋಣ ಅಂತ ಹೇಳೋ ಮೂಲಕ ರಾಜ್ಯವ್ಯಾಪಿ ಸಮರಕ್ಕೆ ರಣಕಹಳೆ ಮೊಳಗಿಸುವಂತೆ ಸೂಚನೆ ಕೊಟ್ಟಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 12:11 pm, Sat, 17 August 24