ಬೆಂಗಳೂರಿನಲ್ಲಿ ದಾರುಣ ಘಟನೆ: 2 ವರ್ಷದಿಂದ ಹೆಂಡ್ತಿಯಿಂದ ದೂರವಾಗಿದ್ದ ಟೆಕ್ಕಿ ಸಾವಿಗೆ ಶರಣು!
ಇತ್ತೀಚಿಗಷ್ಟೇ ಕೌಟುಂಬಿಕ ಕಲಹದಿಂದ ಬೇಸತ್ತು ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನ ಚಿಕ್ಕಬಾಣಾವರದಲ್ಲಿನ ಅಪಾರ್ಟ್ಮೆಂಟ್ ನಲ್ಲಿ ಒಂಟಿಯಾಗಿ ವಾಸವಾಗಿದ್ದ ಖಾಸಗಿ ಕಂಪನಿಯ ಉದ್ಯೋಗಿ ಪ್ರಶಾಂತ್ ನಾಯರ್ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಶಾಂತ್ ಲೆನೋವೋ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಬೆಂಗಳೂರು, ಏಪ್ರಿಲ್ 07: ಪತ್ನಿಯಿಂದ ದೂರವಾಗಿ, ಒಂಟಿಯಾಗಿ ವಾಸವಾಗಿದ್ದ ಖಾಸಗಿ ಕಂಪನಿ ಉದ್ಯೋಗಿ (Techie) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಾಣಾವರದಲ್ಲಿ (Chikkabanavara) ನಡೆದಿದೆ. ಪ್ರಶಾಂತ್ ನಾಯರ್ ಮೃತ ದುರ್ದೈವಿ. ಚಿಕ್ಕಬಾಣಾವರದಲ್ಲಿನ ಡಿ ಎಕ್ಸ್ ಸ್ಮಾರ್ಟ್ ಎಂಬ ಅಪಾರ್ಟ್ಮೆಂಟ್ನಲ್ಲಿ ಪ್ರಶಾಂತ್ ವಾಸವಾಗಿದ್ದರು.
ಪ್ರಶಾಂತ ಕಳೆದ ಎರಡು ವರ್ಷಗಳಿಂದ ಪತ್ನಿಯಿಂದ ದೂರ ಇದ್ದರು. ಕೌಟುಂಬಿಕ ಕಲಹದಿಂದ ಪತ್ನಿಯಿಂದ ದೂರವಾಗಿ ಒಂಟಿಯಾಗಿ ವಾಸಿಸುತ್ತಿದ್ದರು. ಮೂರು ತಿಂಗಳ ಹಿಂದೆ ದಂಪತಿ ಪರಸ್ಪರ ಒಪ್ಪಿಗೆಯಿಂದ ವಿಚ್ಚೇದನ ಕೊರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪ್ರಶಾಂತ್ ಒಂಟಿಯಾಗಿ ಇರುತಿದ್ದರು ಎಂದು ತಿಳಿದುಬಂದಿದೆ. ಇಂದು (ಏ.07) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಪ್ರಶಾಂತ್ ಲೆನೋವೋ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮರ್ಮಾಂಗಕ್ಕೆ ಒದ್ದು ಕೊಲ್ಲಲು ಪ್ರಯತ್ನಿಸಿದ್ದಾಳೆ: ಪತ್ನಿ ವಿರುದ್ಧ ಕಿರುಕುಳ ಆರೋಪ ಮಾಡಿದ ಟೆಕ್ಕಿ
ಖಾಸಗಿ ಕಂಪನಿಯ ಉದ್ಯೋಗಿ ನೇಣಿಗೆ ಶರಣು
ಕೋಲಾರ: ಖಾಸಗಿ ಕಂಪನಿಯ ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರ ತಾಲೂಕು ದಿಂಬ ಗ್ರಾಮದ ಹರೀಶ್ (24) ಮೃತ ದುರ್ದೈವಿ. ಕೋಲಾರ ತಾಲ್ಲೂಕು ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಕಂಪನಿಯಲ್ಲಿ ಹರೀಶ್ ಕೆಲಸ ಮಾಡುತ್ತಿದ್ದರು. ಕಂಪನಿಯ ಹಿರಿಯ ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ತನ್ನ ಕಂಪನಿಯ ಎದುರಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ವೇಮಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವರದಿ: ಪ್ರದೀಪ್ ಚಿಕ್ಕಾಟಿ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:46 pm, Mon, 7 April 25