ಡಿಸೆಂಬರ್​​ನಲ್ಲಿ ಬಿಬಿಎಂಪಿ ಚುನಾವಣೆ ನಡೆಸುತ್ತೇವೆ; ಸಚಿವ ರಾಮಲಿಂಗಾ ರೆಡ್ಡಿ

ಬಿಬಿಎಂಪಿ ವಾರ್ಡ್ ಮರು ವಿಂಗಡಣೆಗೆ ಕರ್ನಾಟಕ ಸರ್ಕಾರ ಹೊಸ ಆಯೋಗವನ್ನು ರಚಿಸಿ ಆದೇಶ ಹೊರಡಿಸಿದ ಒಂದು ದಿನದ ನಂತರ ಅವರು ಈ ಹೇಳಿಕೆ ನೀಡಿದ್ದಾರೆ.

ಡಿಸೆಂಬರ್​​ನಲ್ಲಿ ಬಿಬಿಎಂಪಿ ಚುನಾವಣೆ ನಡೆಸುತ್ತೇವೆ; ಸಚಿವ ರಾಮಲಿಂಗಾ ರೆಡ್ಡಿ
ರಾಮಲಿಂಗಾ ರೆಡ್ಡಿ

Updated on: Jun 24, 2023 | 3:01 PM

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (BBMP) ಡಿಸೆಂಬರ್‌ನಲ್ಲಿ ಚುನಾವಣೆ ನಡೆಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಶನಿವಾರ ಹೇಳಿದ್ದಾರೆ. ಬಿಬಿಎಂಪಿ ವಾರ್ಡ್ ಮರು ವಿಂಗಡಣೆಗೆ ಕರ್ನಾಟಕ ಸರ್ಕಾರ ಹೊಸ ಆಯೋಗವನ್ನು ರಚಿಸಿ ಆದೇಶ ಹೊರಡಿಸಿದ ಒಂದು ದಿನದ ನಂತರ ಅವರು ಈ ಹೇಳಿಕೆ ನೀಡಿದ್ದಾರೆ.

ಸರ್ಕಾರದ ಕೋರಿಕೆಯ ಮೇರೆಗೆ ವಾರ್ಡ್ ವಿಂಗಡಣೆಯನ್ನು ಮರುಪರಿಶೀಲಿಸಲು 12 ವಾರಗಳ ಕಾಲಾವಕಾಶವನ್ನು ಜೂನ್ 19 ರಂದು ಹೈಕೋರ್ಟ್ ನೀಡಿತ್ತು. ಈಗಿನ ಮರುವಿಂಗಡಣೆಯಲ್ಲಿ ಲೋಪದೋಷಗಳಿವೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು.

ಹೈಕೋರ್ಟ್ ಆದೇಶದ ನಂತರ ಸರ್ಕಾರ ಬಿಬಿಎಂಪಿ ಆಯುಕ್ತರ ನೇತೃತ್ವದಲ್ಲಿ ಆಯೋಗ ರಚಿಸಿ ಆದೇಶ ಹೊರಡಿಸಿದೆ. ಸಮಿತಿಯ ಸದಸ್ಯರು ಬಿಡಿಎ ಆಯುಕ್ತರು, ಬೆಂಗಳೂರು ಉಪ ಆಯುಕ್ತರು ಮತ್ತು ಬಿಬಿಎಂಪಿ ವಿಶೇಷ ಆಯುಕ್ತರು (ಕಂದಾಯ) ಆಗಿದ್ದಾರೆ.

ಸರ್ಕಾರದ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವರು, ಬಿಬಿಎಂಪಿಗೆ ಚುನಾವಣೆ ನಡೆಸಲು ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

ಚುನಾವಣೆ ನಡೆಸುವಂತೆ ನ್ಯಾಯಾಲಯದ ಮೊರೆ ಹೋಗಿದ್ದೆವು. ಡಿಸೆಂಬರ್ ವೇಳೆಗೆ ಬಿಬಿಎಂಪಿ ಚುನಾವಣೆ ನಡೆಸುತ್ತೇವೆ. ಬಿಜೆಪಿ ಸರ್ಕಾರ ಅವರ ಇಚ್ಛೆಯಂತೆ ವಾರ್ಡ್‌ ವಿಂಗಡಣೆ ಮಾಡಿತ್ತು. ಈಗ ನಾವು ಸಮಿತಿ ರಚಿಸಿದ್ದೇವೆ ಮತ್ತು ಅಧಿಕಾರಿಗಳು ತಮ್ಮ ಕೆಲಸವನ್ನು ಮಾಡುತ್ತಾರೆ. ನಾವು ಅದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ರೆಡ್ಡಿ ಹೇಳಿದ್ದಾರೆ. ಹೊಸ ಬಿಬಿಎಂಪಿ ಕಾಯ್ದೆ ಪ್ರಕಾರ 243 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: BBMP Wards: ಬಿಬಿಎಂಪಿ ವಾರ್ಡ್​ ಪುನರ್​ ವಿಂಗಡಣೆಗೆ ಆಯೋಗ ರಚಿಸಿದ ಸರ್ಕಾರ

ಈ ಮಧ್ಯೆ, ನಾವು ಚುನಾವಣೆ ನಡೆಸುತ್ತೇವೆ ಮತ್ತು ಅದರಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನ್ಯಾಯಾಲಯದ ಆದೇಶವನ್ನು ಪಾಲಿಸುತ್ತೇವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ನಡೆಸುತ್ತೇವೆ. ಈ ಹಂತದಲ್ಲಿ ಎಷ್ಟು ವಾರ್ಡ್‌ಗಳು ಚುನಾವಣೆ ವೇಳೆಗೆ ಇರಲಿವೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Loading...
Unable to load recommendations.
Follow Us