
Breaking News Today Live Updates in Kannada: ದೇಶ ಮತ್ತು ವಿದೇಶಗಳ ಇಂದಿನ ಪ್ರಮುಖ ಸುದ್ದಿಗಳ ಲೈವ್ ಅಪ್ಡೇಟ್ಸ್ಗೆ ಸುಸ್ವಾಗತ. ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು (ಆಗಸ್ಟ್ 7) ಕರಾವಳಿ ಹಾಗೂ ಮಲೆನಾಡಿನ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತೊಂದೆಡೆ, ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರ ಅನುಕೂಲಕ್ಕಾಗಿ ವಿಶೇಷ ‘ಸುಗಮ ದರ್ಶನ’ ನೀತಿಯನ್ನು ಜಾರಿಗೆ ತರಲಾಗಿದೆ. ಇನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಯುದ್ಧ ಶೀಘ್ರ ಅಂತ್ಯಗೊಳ್ಳುವ ಸುಳಿವು ನೀಡಿದ್ದು, ಯುಎಸ್ ಮಿಲಿಟರಿ ಶಸ್ತ್ರಾಸ್ತ್ರ ಕೊರತೆ ವರದಿ ಮಾಡಿದ ‘ವಾಷಿಂಗ್ಟನ್ ಪೋಸ್ಟ್’ ಪತ್ರಿಕೆಯ ವಿರುದ್ಧ ದೇಶದ್ರೋಹದ ಆರೋಪ ಹೊರಿಸಿ ಕೆಂಡಾಮಂಡಲರಾಗಿದ್ದಾರೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ (ಆಗಸ್ಟ್ 08) ಭಾರಿ ಮಳೆ ಮುನ್ಸೂಚನೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 4 ತಾಲೂಕುಗಳಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ. ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕಿನಲ್ಲಿ ನಾಳೆ (ಆಗಸ್ಟ್ 08) ಅಂಗನವಾಡಿ, ಎಲ್ಲ ಶಾಲಾ-ಕಾಲೇಜುಗಳಿಗೆ
ರಜೆ ಘೋಷಣೆ ಮಾಡಿದ ದಕ್ಷಿಣ ಕನ್ನಡ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಕರ್ನಾಟಕದಲ್ಲಿ ಎಸ್ಐಆರ್ ಪ್ರಕ್ರಿಯೆ ಅವಧಿ ಮತ್ತೆ ವಿಸ್ತರಣೆ ಮಾಡಲಾಗಿದೆ. ಆಗಸ್ಟ್ 8ರ ಬದಲು ಆಗಸ್ಟ್ 17ರತನಕ ವಿಸ್ತರಣೆ ಮಾಡಲಾಗಿದ್ದು, ಆಕ್ಷೇಪಣೆ ಸಲ್ಲಿಸಲು ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಅವಕಾಶ ನೀಡಲಾಗಿದೆ. ಇನ್ನು ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ.
ಇದೇ ಆಗಸ್ಟ್ 13ರಿಂದ ಆ.27ರವರೆಗೆ ವಿಧಾನಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ವಿಧಾನಸೌಧ ಸುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಫ್ರೀಡಂ ಪಾರ್ಕ್ ನಲ್ಲಿ ಅನುಮತಿ ಪ್ರತಿಭಟನೆ ಹೊರತುಪಡಿಸಿ ವಿಧಾನಸೌಧ ಸುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ.
ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು. ಮೆರವಣಿಗೆ ಮತ್ತು ಸಭೆಗಳನ್ನು ನಡೆಸುವುದನ್ನು ನಿಷೇಧಿಸಿದೆ. ಮಾರಕಾಸ್ತ್ರಗಳನ್ನ ಇಟ್ಟುಕೊಳ್ಳುವುದು, ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಆ ರೀತಿ ಉಪಕರಣಗಳ ಸಾಗಾಟ ಮತ್ತು ಶೇಖರಿಸುವುದಕ್ಕೆ ನಿಷೇಧ.ಹಾಗೇ ಯಾವುದೇ ವ್ಯಕ್ತಿಗಳ ಅಥವಾ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದು. ಆ ರೀತಿ ಪ್ರಚೋದಿಸುವ ಚಟುವಟಿಕೆಗಳಿಗೆ ನಿಷೇಧಿಸಲಾಗಿದೆ.
ಬೀದರ್-ಯಶವಂತಪುರ ರೈಲಿನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತೆಲಂಗಾಣದ ಜಹೀರಾಬಾದ್ ನಿಲ್ದಾಣದಲ್ಲಿ ನಿಂತಿದ್ದ ವೇಳೆ ರೈಲಿನ ಇಂಜಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬಳಿಕ ರೈಲು ಹೊರಟಿದೆ.
ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಿದ್ದಾರೆ. ಸರ್ಕಾರದ ಒತ್ತಾಯದ ಮೇರೆಗೆ ಅವರು ರಾಜೀನಾಮೆ ನೀಡಿದ್ದಾರೆ. ಇದಕ್ಕೆ ಪೂರಕವೆಂಬಂತೆ ಹಂಗಾಮಿ ಸ್ಪೀಕರ್ ಸ್ಥಾನ ಒಪ್ಪಿಕೊಳ್ಳದಿರಲು ತೀರ್ಮಾನಿಸಿದ್ದಾರೆ. ಹೌದು…ಹಂಗಾಮಿ ಸ್ಪೀಕರ್ ಸ್ಥಾನ ಹೊಂದುವುದಿಲ್ಲ ಎಂದು ಬಸವರಾಜ ಹೊರಟ್ಟಿ ಹೇಳಿದ್ದು, ಈ ಬಗ್ಗೆ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಬಸವರಾಜ ಹೊರಟ್ಟಿ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಬೆಂಗಳೂರಿನ ಕುಮಾರಕೃಪಾ ಪೂರ್ವದಲ್ಲಿರುವ ಸಭಾಪತಿಗಳ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿ ಹೊರಟ್ಟಿ ಜೊತೆ ಮಾತುಕತೆ ನಡೆಸಿದ್ದಾರೆ. ವಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್, ಶಾಸಕ ಡಾ. ಅಶ್ವಥ್ ನಾರಾಯಣ ಸೇರಿದಂತೆ ಬಿಜೆಪಿ ನಾಯಕರು ಇದ್ದರು.
ಉಡುಪಿ ಉದ್ಯಮಿ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾಗಿದ್ದ ಡೇವಿಡ್ ಡಿಸೋಜಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕೆ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಸಿ ಎಸ್ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದಾರೆ. ಆಗಸ್ಟ್ 7 ರಿಂದ ಆಗಸ್ಟ್ 13 ರವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ 4 ದಿನ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ. ಇನ್ನು ಉಡುಪಿ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಆಗಸ್ಟ್ 7 ರಂದು ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಆಗಸ್ಟ್ 8 ರಂದು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ . ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಮತ್ತಷ್ಟು ಓದಿ
ಪಂಜಾಬ್ನಲ್ಲಿ ಭಯೋತ್ಪಾದಕರು ರೂಪಿಸಿದ್ದ ದೊಡ್ಡ ಸಂಚನ್ನು ಪೊಲೀಸರು ವಿಫಲಗೊಳಿಸಿದ್ದಾರೆ.
ಪಂಜಾಬ್ನ ಅಮೃತಸರದಲ್ಲಿ 9 ಜನರನ್ನು ಬಂಧಿಸಲಾಗಿದ್ದು, ಬಂಧಿತರ ಬಳಿಯಿದ್ದ ಪೆಟ್ರೋಲ್ ಬಾಂಬ್, ಪಿಸ್ತೂಲ್ಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೊರಟ್ಟಿ ರಾಜೀನಾಮೆಯೊಂದಿಗೆ ತೆರವಾದ ವಿಧಾನ ಮಂಡಲದ ನಾಲ್ಕೂ ಸ್ಥಾನಗಳು ಖಾಲಿಯಾಗಿವೆ. ವಿಧಾನ ಪರಿಷತ್ ಸಭಾಪತಿ ಮತ್ತು ಉಪಸಭಾಪತಿ, ವಿಧಾನಸಭೆ ಸ್ಪೀಕರ್ ಮತ್ತು ಡೆಪ್ಯುಟಿ ಸ್ಪೀಕರ್ ಸ್ಥಾನಗಳು ಖಾಲಿ ಆಗಿದ್ದು, ಈ ಸ್ಥಾನಗಳಿಗೆ ಯಾರನ್ನ ಆಯ್ಕೆ ಮಾಡಲಾಗುತ್ತೆ ಎನ್ನುವುದನ್ನು ಕಾದುನೋಡಬೇಕು.
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವೆಂಕಟಗಿರಿ ಗ್ರಾಮದ ಬಳಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗಳಿಗೆ ಮೈನಿಂಗ್ ಲಾರಿಯೊಂದು ಹಿಂಬದಿಯಿಂದ ಬಂದು ಭೀಕರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಹೊಸಪೇಟೆ ಮೂಲದ ಕುಮಾರ್ (34) ಹಾಗೂ ಮಂಜುನಾಥ (38) ಎಂಬುವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಚಾಲಕನ ಅಜಾಗರೂಕತೆಯ ಚಾಲನೆಯೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದ್ದು, ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಗಸ್ಟ್ 14ರಂದು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ. ತಮ್ಮ ಮೇಲಿನ ಅವಿಶ್ವಾಸ ನಿರ್ಣಯದ ಆರೋಪಗಳು ನಿರಾಧಾರ ಎಂದಿರುವ ಅವರು, ಆ ಪ್ರಮೇಯವೇ ಬರುವುದಿಲ್ಲ ಎಂದಿದ್ದಾರೆ. ಊರಿಗೆ ತೆರಳುವ ಮುನ್ನ ಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿರುವುದಾಗಿ ಟಿವಿ9ಗೆ ತಿಳಿಸಿದ್ದಾರೆ.
ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ಬೆಂಗಳೂರಿನಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಹೊರಟ್ಟಿ ಅವರ ಸ್ಥಾನಕ್ಕೆ ಗೌರವ ನೀಡಲಿದ್ದು, ಅವರು ಒಪ್ಪಿದರೆ ಹಂಗಾಮಿ ಸಭಾಪತಿ ಮಾಡುತ್ತೇವೆ. ಇಲ್ಲಿ ಅವಿಶ್ವಾಸ ನಿರ್ಣಯದ ಪ್ರಶ್ನೆಯೇ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರಿನ ಬೆಳ್ಳಂದೂರು ಕೆರೆ ಬಳಿ ಪಶ್ಚಿಮ ಬಂಗಾಳ ಮೂಲದ ಲಕ್ಷ್ಮಣ ಮಲ್ಲಿಕ್ (18) ಎಂಬ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಲಾಗಿದೆ. ಇಂದು ಮುಂಜಾನೆ ಶವ ಪತ್ತೆಯಾಗಿದ್ದು, ಬೆಳ್ಳಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಬಿಎನ್ಎಸ್ 103ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರಿನ ಪ್ರತಿಷ್ಠಿತ ಅಶೋಕ ಹೋಟೆಲ್ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಈ ವೇಳೆ ಅಡುಗೆಗೆ ಬಳಸಲು ಇಟ್ಟಿದ್ದ ಅವಧಿ ಮೀರಿದ (ಎಕ್ಸ್ಪೈರಿ) 31 ಲೀಟರ್ ಹಾಲು ಪತ್ತೆಯಾಗಿದೆ. ನಿಯಮ ಉಲ್ಲಂಘನೆಯ ಹಿನ್ನೆಲೆಯಲ್ಲಿ ಹೋಟೆಲ್ಗೆ ನೋಟಿಸ್ ನೀಡಿ ಕಾನೂನು ಕ್ರಮ ಜರುಗಿಸಲು ಇಲಾಖೆ ಮುಂದಾಗಿದೆ.
ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೊನೆಯ ಆಷಾಢ ಶುಕ್ರವಾರದ ಅಂಗವಾಗಿ ಜಗನ್ಮಾತೆ ಚಾಮುಂಡೇಶ್ವರಿ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ವಿಶೇಷ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದ ದೇವಿಯ ದರ್ಶನ ಪಡೆಯಲು ತೆಲುಗು ಚಿತ್ರರಂಗದ ಖ್ಯಾತ ನಟ ಸುನಿಲ್ ಭೇಟಿ ನೀಡಿ, ಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು. ವೀಡಿಯೋ ನೋಡಿ
ಗಾಯತ್ರಿ ಶಾಂತೇಗೌಡ ಅವರು ವಿಧಾನಪರಿಷತ್ ಸದಸ್ಯರಾಗಿ (ಎಂಎಲ್ಸಿ) ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದರು. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಉಪಸ್ಥಿತರಿದ್ದರು.
ಬೆಂಗಳೂರಿನ ಬಿಜಿಎಸ್ ಫ್ಲೈಓವರ್ನಿಂದ ಚಾಮರಾಜಪೇಟೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ವೈಟ್ ಟ್ಯಾಪಿಂಗ್ ಕಾಮಗಾರಿ ಹಿನ್ನೆಲೆ ಮೂರು ತಿಂಗಳು ಬಂದ್ ಮಾಡಲಾಗಿದೆ. ಬಸವನಗುಡಿ, ಚಾಮರಾಜಪೇಟೆ ಕಡೆಗೆ ತೆರಳುವವರು ಫ್ಲೈಓವರ್ ಹತ್ತದೆ ಸರ್ವಿಸ್ ರಸ್ತೆ ಹಾಗೂ ಪರ್ಯಾಯ ಮಾರ್ಗ ಬಳಸುವಂತೆ ಟ್ರಾಫಿಕ್ ಪೊಲೀಸರು ಸೂಚಿಸಿದ್ದಾರೆ.
ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಭಾಪತಿ ಕಚೇರಿಯಲ್ಲಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪ್ರಮುಖ ರಾಜಕೀಯ ವಿದ್ಯಮಾನಗಳು ಹಾಗೂ ಸದನದ ಕಲಾಪಗಳ ಕುರಿತು ಉಭಯ ನಾಯಕರು ಸಮಾಲೋಚನೆ ನಡೆಸಿದರು ಎನ್ನಲಾಗಿದೆ.
ಬೆಂಗಳೂರಿನ ಹಲವು ಪ್ರತಿಷ್ಠಿತ ಪಂಚತಾರಾ (ಫೈವ್ ಸ್ಟಾರ್) ಹೋಟೆಲ್ಗಳ ಮೇಲೆ ಆರೋಗ್ಯ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ನಿಯಮಗಳ ಉಲ್ಲಂಘನೆ ದೂರುಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಚಿತ್ರದುರ್ಗದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ವಿಪಕ್ಷಗಳ ಟೀಕೆಗಳನ್ನು ತಳ್ಳಿಹಾಕಿದ ಅವರು, ಸ್ವಾತಂತ್ರ್ಯಕ್ಕೆ ಎಲ್ಲರ ತ್ಯಾಗವಿದೆ, ರಾಜಕೀಯಕ್ಕಾಗಿ ಹಿಂದೂ ರಾಷ್ಟ್ರದ ಚರ್ಚೆ ಮಾಡಲಾಗುತ್ತಿದೆ ಎಂದರಲ್ಲದೆ, ಸಚಿವರ ಅಸಮಾಧಾನವನ್ನು ಸಿಎಂ-ಡಿಸಿಎಂ ಬಗೆಹರಿಸಲಿದ್ದಾರೆ ಎಂದರು.
ಮೈಸೂರಿನ ಐತಿಹಾಸಿಕ ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಕೊನೆಯ ಶುಕ್ರವಾರದ ಅಂಗವಾಗಿ ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಬೆಳಗಿನ ಜಾವದಿಂದಲೇ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದು, ಸುಗಮ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ವೀಡಿಯೋ ನೋಡಿ
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಹಾತೂರು ಗ್ರಾಮದಲ್ಲಿ ಮಾಜಿ ಸೈನಿಕ ಕೊಂಗೆಪಂಡ ಜಯ ಎಂಬುವರ ಮನೆಯಲ್ಲಿ ಭಾರಿ ಕಳವು ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯ ಸಾಧಿಸಿದ ಕಳ್ಳರು 4 ಲಕ್ಷ ರೂಪಾಯಿ ಮೌಲ್ಯದ ನಗನಾಣ್ಯಗಳನ್ನು ದೋಚಿದ್ದು, ಗೋಣಿಕೊಪ್ಪಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿಯ ಕುಂದಾಪುರದ ಬೆಳ್ಳಾಲದಲ್ಲಿ 50 ಸಾವಿರ ರೂಪಾಯಿ ಸಾಲದ ಹಣ ವಾಪಸ್ ಕೇಳಲು ಹೋದ ಸನತ್ ಎಂಬ ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಯುವತಿಯ ಕುಟುಂಬಸ್ಥರು ಹಲ್ಲೆ ನಡೆಸಿದ್ದಾರೆ. ಬಳಿಕ ಯುವತಿಯು ಆತನ ವಿರುದ್ಧವೇ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದು, ಬೈಂದೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇನ್ಸ್ಟಾಗ್ರಾಂ ರೀಲ್ಸ್ ಮೂಲಕ ಅಗರಬತ್ತಿ, ಡ್ರೈ ಫ್ರೂಟ್ಸ್ ಪ್ಯಾಕಿಂಗ್ ಕೆಲಸದ ಆಸೆ ತೋರಿಸಿ ಸಾವಿರಾರು ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ಕಿರಣ್ ಮತ್ತು ಆರತಿ ದಂಪತಿಯನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಠೇವಣಿ ಹೆಸರಲ್ಲಿ ಲಕ್ಷ ಲಕ್ಷ ಹಣ ಪಡೆದು ವಂಚಿಸಿದ್ದ ದಂಪತಿಯಿಂದ ಸದ್ಯ ತನಿಖೆ ಮುಂದುವರಿದಿದೆ.
ರಾಜ್ಯದ ಬಹುತೇಕ ಸಚಿವರು ಬರ ವೀಕ್ಷಣೆಯಲ್ಲಿದ್ದರೆ, ದಾವಣಗೆರೆಯ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ ಹಾಗೂ ಕೆ.ಎಸ್. ಬಸವಂತಪ್ಪ ಪ್ರಮಾಣವಚನ ಸ್ವೀಕರಿಸಿದ ದಿನದಿಂದ ಬೆಂಗಳೂರಿನಲ್ಲೇ ಬೀಡುಬಿಟ್ಟಿದ್ದಾರೆ. ತಮಗೆ ಒಲಿಯಲಿರುವ ಖಾತೆಗಳ ಮೇಲೆಯೇ ಕಣ್ಣಿಟ್ಟಿರುವ ಈ ಇಬ್ಬರು ಸಚಿವರ ಭೇಟಿಗಾಗಿ ತವರಿನ ಅಭಿಮಾನಿಗಳು ಸದ್ಯ ಕಾದು ಕುಳಿತಿದ್ದಾರೆ.
Published On - 8:55 am, Fri, 7 August 26