
ಶಿವಮೊಗ್ಗದ ರಾಮಕೃಷ್ಣ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸೃಷ್ಟಿ ಪೋಷಕರ ವಿರುದ್ಧವೇ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ. ರಾಯರ ಆರಾಧನೆಗೆ ಪೋಷಕರು ಈಕೆಯನ್ನು ಮನೆಯಲ್ಲೇ ಬಿಟ್ಟು ಉಳಿದಿಬ್ಬರು ಮಕ್ಕಳ ಜೊತೆ ಮಠಕ್ಕೆ ತೆರಳಿದ್ದರು. ವಾಪಸ್ ಬರುವಷ್ಟರಲ್ಲಿ ಬಾಲಕಿ ಕೃತ್ಯ ಎಸಗಿದ್ದಾಳೆ. ತಮ್ಮನ್ನು ಬಿಟ್ಟು ಹೋಗಿದ್ದಕ್ಕೆ ಬೇಸರ ಹಾಗೂ ಓದಲು ಪೋಷಕರ ಒತ್ತಡವೇ ಸಾವಿಗೆ ಕಾರಣ ಎನ್ನಲಾಗಿದೆ. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ ರೈಲು ನಿಲ್ದಾಣದಲ್ಲಿ ಸ್ಕೈವಾಕ್ ಇಲ್ಲದ ಕಾರಣ ರೈಲು ಹಳಿ ದಾಟುತ್ತಿದ್ದಾಗ ವೇಗವಾಗಿ ಬಂದ ರೈಲು ಡಿಕ್ಕಿಯಾಗಿ ಪಾಲನಜೋಗಹಳ್ಳಿಯ ಇರ್ಫಾನಾ (46), ಮೊಮ್ಮಕ್ಕಳಾದ ರುಕಿಯಾ (13) ಮತ್ತು ರಾಕಿಯಾ (8) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಜೆ ಮುಗಿಸಿ ಹಿಂದೂಪುರಕ್ಕೆ ವಾಪಸಾಗುತ್ತಿದ್ದಾಗ ಈ ದಾರುಣ ಘಟನೆ ಸಂಭವಿಸಿದೆ. ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೇಪಾಳ ದುರಂತದಲ್ಲಿ ಸಿಲುಕಿರುವ ಹಾಗೂ ನಾಪತ್ತೆಯಾದ ಕರ್ನಾಟಕದ ಮೂಲದವರ ರಕ್ಷಣೆ ಮತ್ತು ನೆರವಿಗೆ ರಾಜ್ಯ ಸರ್ಕಾರ ತುರ್ತು ಕ್ರಮ ಕೈಗೊಂಡಿದೆ. ಈ ಕಾರ್ಯಾಚರಣೆಯ ಸಮನ್ವಯಕ್ಕಾಗಿ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ (OSD) ಅಭಿಜಿತ್ ಗೌಡ ಅವರನ್ನು ವಿಶೇಷ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಮಧ್ಯಾಹ್ನ 12.30ಕ್ಕೆ ದೆಹಲಿಯ ಕುಶಕ್ ರಸ್ತೆಯಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಪ್ರಮುಖ ಸಭೆ ನಡೆಸಲಿದ್ದಾರೆ. ಈ ಸಭೆಯ ಮುಕ್ತಾಯದ ನಂತರ ಅವರು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.
Breaking News Today Live Updates in Kannada: ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ್ದ ಸ್ಥಳದ ‘ಶುದ್ಧೀಕರಣ’ ಕುರಿತು ಹೇಳಿಕೆ ನೀಡಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಸ್ಸಿ/ಎಸ್ಟಿ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅಂಜದೀವ್ ದ್ವೀಪದ ಬಳಿ ‘ಶ್ರೀ ಮಾತಾ’ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದೆ. ಸಮೀಪದಲ್ಲಿದ್ದ ಬೋಟ್ಗಳ ಸಹಾಯದಿಂದ 24 ಮೀನುಗಾರರನ್ನು ರಕ್ಷಿಸಲಾಗಿದ್ದು, 80 ಲಕ್ಷ ರೂ.ಗೂ ಹೆಚ್ಚು ನಷ್ಟವಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 13ರ ಮಾಧ್ಯಮಗೋಷ್ಠಿಯಲ್ಲಿ ಸಂಭಾವನೆ ಕುರಿತ ಪ್ರಶ್ನೆಗೆ ಉತ್ತರಿಸಿದ ಕಿಚ್ಚ ಸುದೀಪ್, “ನನ್ನ ಯೋಗ್ಯತೆ ಮತ್ತು ಶ್ರಮಕ್ಕೆ ತಕ್ಕಂತೆ ಬಿಎಂಎಸ್ಆರ್ ಸಂಸ್ಥೆ ಸೂಕ್ತ ಸಂಭಾವನೆ ನೀಡಿದೆ” ಎಂದು ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Published On - 10:02 am, Mon, 31 August 26