ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲಿಗೆ ಸಿಕ್ತು ಗ್ರೀನ್ ಸಿಗ್ನಲ್!
ಬೆಂಗಳೂರು ಮತ್ತು ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಹೊಸ ರೈಲು ಕೆಎಸ್ಆರ್ ಬೆಂಗಳೂರು ಮತ್ತು ಸಿಎಸ್ಎಂಟಿ ಮುಂಬೈ ನಡುವೆ ಸಂಚರಿಸಲಿದೆ. ಸಂಸದ ಪಿ.ಸಿ. ಮೋಹನ್ ಅವರ ಪ್ರಯತ್ನದಿಂದ ಈ ಯೋಜನೆಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಪ್ರಯಾಣದ ಸಮಯ ಗಣನೀಯವಾಗಿ ಕಡಿಮೆಯಾಗಿ ಪ್ರಯಾಣಿಕರಿಗೆ ಆರಾಮದಾಯಕ ಮತ್ತು ವೇಗದ ಸೇವೆ ಲಭ್ಯವಾಗಲಿದೆ.

ಬೆಂಗಳೂರು, ಏಪ್ರಿಲ್ 11: ದೇಶದ ಪ್ರಮುಖ ನಗರಗಳಾದ ಬೆಂಗಳೂರು ಮತ್ತು ಮುಂಬೈ ನಡುವಿನ ರೈಲು ಸಂಪರ್ಕಕ್ಕೆ ಮಹತ್ವದ ಉತ್ತೇಜನ ದೊರೆತಿದ್ದು, ಈ ಮಾರ್ಗದಲ್ಲಿ ವಂದೇ ಭಾರತ್ ಸ್ಲೀಪರ್ ರೈಲು (Vande Bharath Sleeper train) ಸೇವೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಹೊಸ ರೈಲು ಕೆಎಸ್ಆರ್ ಬೆಂಗಳೂರು ಮತ್ತು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ನಡುವೆ ಚಲಿಸಲಿದೆ.
ಪಿ ಸಿ ಮೋಹನ್ ನಿರಂತರ ಪ್ರಯತ್ನ
ಈ ಹಿಂದೆ ಈ ವಿಷಯವನ್ನು ಮುನ್ನೆಲೆಗೆ ತಂದಿದ್ದ ಬೆಂಗಳೂರು ಸೆಂಟ್ರಲ್ ಸಂಸದ ಪಿಸಿ ಮೋಹನ್ ಅವರ ನಿರಂತರ ಪ್ರಯತ್ನಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಡಿಸೆಂಬರ್ 2 ರಂದು ನೈಋತ್ಯ ರೈಲ್ವೆ (SWR) ಸ್ಥಾಯಿ ಸಮಿತಿಯ ಅಧ್ಯಯನ ಭೇಟಿಯ ಸಂದರ್ಭದಲ್ಲಿ, ಮೋಹನ್ ವಂದೇ ಭಾರತ್ ಸ್ಲೀಪರ್ ರೈಲನ್ನು ಪರಿಚಯಿಸಲು ಒತ್ತಾಯಿಸಿದ್ದರು. ಅಲ್ಲದೆ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಅನ್ನು ಮೂಲ ಅಥವಾ ಮುಕ್ತಾಯ ನಿಲ್ದಾಣವೆಂದು ಸೂಚಿಸಿದ್ದರು.
New Vande Bharat Sleeper train between Bengaluru and Mumbai approved. pic.twitter.com/dB1NIcndYF
— P C Mohan (@PCMohanMP) April 11, 2026
ಹೊಸ ರೈಲಿನಿಂದ ಪ್ರಯಾಣದ ಸಮಯ ಕಡಿಮೆಯಾಗುವ ನಿರೀಕ್ಷೆ
ಪ್ರಸ್ತುತ ಈ ಮಾರ್ಗದಲ್ಲಿ ಡಜನ್ಗಟ್ಟಲೆ ರೈಲುಗಳು ಸಂಚರಿಸುತ್ತಿದ್ದರೂ, ಉದ್ಯಾನ್ ಎಕ್ಸ್ಪ್ರೆಸ್ ಮಾತ್ರ ನೇರ ಸಂಪರ್ಕ ಕಲ್ಪಿಸುತ್ತಿದೆ. ಸುಮಾರು 1,136 ಕಿಮೀ ದೂರವನ್ನು ಈ ರೈಲು 23ರಿಂದ 24 ಗಂಟೆಗಳ ಅವಧಿಯಲ್ಲಿ ಸಾಗುತ್ತದೆ. ಹೊಸ ವಂದೇ ಭಾರತ್ ಸ್ಲೀಪರ್ ರೈಲು ಪರಿಚಯದಿಂದ ಪ್ರಯಾಣ ಸಮಯವು ಗಣನೀಯವಾಗಿ ಕಡಿಮೆಯಾಗುವ ನಿರೀಕ್ಷೆಯಿದ್ದು, ಪ್ರಯಾಣಿಕರಿಗೆ ಹೆಚ್ಚು ಆರಾಮದಾಯಕ ಮತ್ತು ವೇಗದ ಸೇವೆ ಲಭ್ಯವಾಗಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.




