
ಬೆಂಗಳೂರು, ಮಾರ್ಚ್ 06: ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2026ರ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಬೆಂಗಳೂರಿನ ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆಯನ್ನು ಇನ್ನು ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಮರುನಾಮಕರಣ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಈ ಹೆಸರು ಬದಲಾವಣೆಯು ರಾಜ್ಯದ ಗೌರವಾನ್ವಿತ ವ್ಯಕ್ತಿಗೆ ಸಲ್ಲಿಸಲಾದ ಗೌರವವಾಗಿದೆ.
ದಕ್ಷಿಣ ಭಾರತದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದಾದ ವಿಕ್ಟೋರಿಯಾ ಆಸ್ಪತ್ರೆ ತನ್ನ 125 ವರ್ಷಗಳ ಸುದೀರ್ಘ ಹಾಗೂ ಐತಿಹಾಸಿಕ ಪಯಣವನ್ನು ಮುಂದುವರಿಸಿಕೊಂಡು ಬಂದಿದೆ. ಬೆಂಗಳೂರಿನ ಹೃದಯಭಾಗದಲ್ಲಿದ್ದ ಈ ಆಸ್ಪತ್ರೆ ಕೇವಲ ಚಿಕಿತ್ಸಾ ಕೇಂದ್ರವಾಗಿರದೇ, ನಗರದ ಬೆಳವಣಿಗೆಯ ಪ್ರಮುಖ ಸಾಕ್ಷಿಯಾಗಿಯೂ ಗುರುತಿಸಿಕೊಂಡಿದೆ.
1897ರಲ್ಲಿ ರಾಣಿ ವಿಕ್ಟೋರಿಯಾ ಅವರ ಪಟ್ಟಾಭಿಷೇಕದ ವಜ್ರ ಮಹೋತ್ಸವದ ನೆನಪಿಗಾಗಿ ಈ ಆಸ್ಪತ್ರೆಯ ಶಂಕುಸ್ಥಾಪನೆಯನ್ನು ಮೈಸೂರು ಮಹಾರಾಣಿ ಕೆಂಪನಂಜಮ್ಮಣ್ಣಿ ವಾಣಿ ವಿಲಾಸ ಸನ್ನಿಧಾನ ಅವರು ನೆರವೇರಿಸಿದ್ದರು. 1900ರಲ್ಲಿ ಉದ್ಘಾಟನೆಗೊಳ್ಳಬೇಕಿದ್ದರೂ, 1898ರಲ್ಲಿ ಬೆಂಗಳೂರನ್ನು ಕಾಡಿದ ಭೀಕರ ಪ್ಲೇಗ್ ಸಾಂಕ್ರಾಮಿಕದ ಹಿನ್ನೆಲೆ ಕಾಮಗಾರಿಯನ್ನು ವೇಗವಾಗಿ ಪೂರ್ಣಗೊಳಿಸಿ, ಸಂತ್ರಸ್ತರಿಗೆ ಚಿಕಿತ್ಸೆ ನೀಡಲು ಮುಂಚಿತವಾಗಿಯೇ ಸಿದ್ಧಪಡಿಸಲಾಗಿತ್ತು. ನಂತರ 1900ರ ಡಿಸೆಂಬರ್ 8ರಂದು ವೈಸರಾಯ್ ಲಾರ್ಡ್ ಕರ್ಜನ್ ಅವರಿಂದ ಆಸ್ಪತ್ರೆ ಅಧಿಕೃತವಾಗಿ ಉದ್ಘಾಟನೆಗೊಂಡಿತ್ತು.
ಈ ಆಸ್ಪತ್ರೆಯ ನಿರ್ಮಾಣಕ್ಕೆ ಪಕ್ಕದಲ್ಲಿದ್ದ ಬೆಂಗಳೂರು ಕೋಟೆಯ ಕಲ್ಲುಗಳನ್ನು ಬಳಸಲಾಗಿತ್ತು. ಅಂದಿನ ಕಾಲದಲ್ಲೇ ಹೊಸ ತಂತ್ರಜ್ಞಾನ ಅಳವಡಿಸಿಕೊಂಡಿದ್ದ ಈ ಆಸ್ಪತ್ರೆ 1897ರಲ್ಲಿ ಕರ್ನಾಟಕದಲ್ಲೇ ಮೊದಲ ದೂರವಾಣಿ ಸಂಪರ್ಕ ಪಡೆದ ಹೆಗ್ಗಳಿಕೆಯನ್ನು ಪಡೆದಿದೆ. 140 ಹಾಸಿಗೆಗಳಿಂದ ಆರಂಭವಾದ ಈ ಸಂಸ್ಥೆ ಬಳಿಕ 1,000ಕ್ಕೂ ಅಧಿಕ ಹಾಸಿಗೆಗಳ ಬೃಹತ್ ಆಸ್ಪತ್ರೆಯಾಗಿ ಬೆಳೆದಿದೆ.
ವೈದ್ಯಕೀಯ ಕ್ಷೇತ್ರದಲ್ಲಿಯೂ ವಿಕ್ಟೋರಿಯಾ ಆಸ್ಪತ್ರೆ ಹಲವು ಸಾಧನೆಗಳನ್ನು ಮಾಡಿದೆ. ಆಸ್ಪತ್ರೆಯ ಸೂಪರಿಂಟೆಂಡೆಂಟ್ ಆಗಿದ್ದ ಡಾ. ಟಿ. ಶೇಷಾಚಲಂ ಅವರು ಅಪೆಂಡಿಕ್ಸ್ನ ರಕ್ತನಾಳದ ಕುರಿತು ನಡೆಸಿದ ಸಂಶೋಧನೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿತ್ತು. 1981ರ ವೀನಸ್ ಸರ್ಕಸ್ ಬೆಂಕಿ ದುರಂತ ಹಾಗೂ ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲೂ ಸಾವಿರಾರು ಜೀವಗಳನ್ನು ಉಳಿಸುವಲ್ಲಿ ಈ ಆಸ್ಪತ್ರೆ ಪ್ರಮುಖ ಪಾತ್ರವಹಿಸಿತ್ತು. 2025ರಲ್ಲಿ ಆಸ್ಪತ್ರೆಯ 125ನೇ ವರ್ಷದ ಸಂಭ್ರಮದಲ್ಲಿ 108 ಅಡಿ ಎತ್ತರದ ಧ್ವಜಸ್ತಂಭವನ್ನು ಸ್ಥಾಪಿಸಲಾಗಿತ್ತು.
ಇದನ್ನೂ ಓದಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ! ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ
ಇದೀಗ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2026ರ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆಗಳನ್ನು ಮಾಡಿದ್ದು, ಬೆಂಗಳೂರಿನ ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆಯನ್ನು ಇನ್ನು ಮುಂದೆ “ಶಾಂತವೇರಿ ಗೋಪಾಲಗೌಡ ಆಸ್ಪತ್ರೆ” ಎಂದು ಮರುನಾಮಕರಣ ಮಾಡಲಾಗುವುದು ಎಂದು ತಿಳಿಸಿದ್ದಾರೆ. ರಾಜ್ಯದ ಗೌರವಾನ್ವಿತ ವ್ಯಕ್ತಿಯಾಗಿದ್ದ ಶಾಂತವೇರಿ ಗೋಪಾಲಗೌಡ ಅವರ ಸ್ಮರಣಾರ್ಥ ಈ ಹೆಸರು ಬದಲಾವಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಈ ಮೂಲಕ ಐತಿಹಾಸಿಕ ಆಸ್ಪತ್ರೆಯ ಹೊಸ ಅಧ್ಯಾಯ ಆರಂಭವಾಗಲಿದೆ ಎಂದು ಸರ್ಕಾರ ತಿಳಿಸಿದೆ.
ಮರುನಾಮಕರಣದ ಜೊತೆಗೆ, ರಾಜ್ಯದ ವಿವಿಧ ಭಾಗಗಳಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ಬಲಪಡಿಸಲು ಹಲವಾರು ಹೊಸ ಯೋಜನೆಗಳನ್ನು ಸಹ ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ. ಅದರಂತೆ, ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ ವೆಚ್ಚದಲ್ಲಿ ಎರಡು ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಿಸಲು ಸರ್ಕಾರ ಯೋಜಿಸಿದೆ. ಇವು ಸ್ಥಳೀಯ ಜನರಿಗೆ ವಿಶೇಷ ಆರೋಗ್ಯ ಸೇವೆಗಳನ್ನು ಒದಗಿಸಲಿವೆ. ಹೊಸದುರ್ಗ-ಟಿ.ಬಿ ಡ್ಯಾಂ ಬಳಿ ಕ್ಯಾನ್ಸರ್ ಆಸ್ಪತ್ರೆಯೊಂದನ್ನು ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಈ ಉಪಕ್ರಮಗಳು ರಾಜ್ಯದಾದ್ಯಂತ ಆರೋಗ್ಯ ಸೇವೆಗಳ ಪ್ರವೇಶ ಮತ್ತು ಗುಣಮಟ್ಟವನ್ನು ಸುಧಾರಿಸುವ ಗುರಿಯನ್ನು ಹೊಂದಿವೆ.
ಕರ್ನಾಟಕ ಬಜೆಟ್ ಕುರಿತ ಕ್ಷಣಕ್ಷಣದ ಅಪ್ಡೇಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:44 am, Fri, 6 March 26