SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಮುಖ್ಯ ಚುನಾವಣಾ ಆಯುಕ್ತರಿಗೆ ಸಿಎಂ ಡಿಕೆಶಿ ಪತ್ರ
ಮತದಾರರ ಪಟ್ಟಿ ಪರಿಷ್ಕರಣೆ (SIR) ವೇಳೆ ಕರ್ನಾಟಕದಲ್ಲಿ 1.08 ಕೋಟಿಗೂ ಅಧಿಕ ಮತದಾರರು ಎಎಸ್ಡಿಡಿಒ ಪಟ್ಟಿಗೆ ಸೇರಿದ ಹಿನ್ನೆಲೆ, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ವಿಸ್ತರಣೆ ಸೇರಿ ಹಲವು ಪ್ರಮುಖ ಅಂಶಗಳನ್ನು ಉಲ್ಲೇಖಿಸಿ ಸಿಎಂ ಡಿ.ಕೆ. ಶಿವಕುಮಾರ್ ಅವರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಇದಕ್ಕೆ ಅಗತ್ಯ ಸಹಕಾರ ನೀಡಲು ರಾಜ್ಯ ಸರ್ಕಾರ ಸಿದ್ಧವಾಗಿರೋದಾಗಿ ತಿಳಿಸಿದ್ದಾರೆ.

ಮುಖ್ಯಾಂಶಗಳು
- SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ
- ಮುಖ್ಯ ಚುನಾವಣಾ ಆಯುಕ್ತರಿಗೆ ಸಿಎಂ ಡಿಕೆ ಶಿವಕುಮಾರ್ ಪತ್ರ
- ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ವಿಸ್ತರಣೆ ಸೇರಿ ಹಲವು ಮನವಿ
ಬೆಂಗಳೂರು, ಆಗಸ್ಟ್ 25: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತು ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪತ್ರ ಬರೆದಿದ್ದಾರೆ. SIR ಪ್ರಕ್ರಿಯೆಯಲ್ಲಿ 1.08 ಕೋಟಿಗೂ ಅಧಿಕ ಮತದಾರರನ್ನು ASDDO ಪಟ್ಟಿಯಲ್ಲಿ ಗುರುತಿಸಿರುವುದು ಹಾಗೂ ಸುಮಾರು 43 ಲಕ್ಷ ಮತದಾರರಿಗೆ ತಾರ್ಕಿಕ ವ್ಯತ್ಯಾಸಗಳ (Logical Discrepancies) ಕುರಿತು ನೋಟಿಸ್ ನೀಡಿರುವುದು ಗಂಭೀರ ಆತಂಕಕ್ಕೆ ಕಾರಣವಾಗಿದೆ ಎಂದವರು ತಿಳಿಸಿದ್ದಾರೆ. ಜೊತಗೆ ಮುಖ್ಯ ಚುನಾವಣಾ ಆಯುಕ್ತರಿಗೆ ಕೆಲ ಮನವಿಗಳನ್ನೂ ಅವರು ಮಾಡಿದ್ದಾರೆ.
ಸಿಎಂ ಡಿಕೆಶಿ ಮಾಡಿರುವ ಮನವಿ ಏನು?
Hon’ble Chief Minister Shri @DKShivakumar has written to the Chief Election Commissioner of India, Shri Gyanesh Kumar, regarding the Special Intensive Revision (SIR) of electoral rolls in Karnataka.
The SIR has raised serious concerns, with over 1.08 crore electors marked under… pic.twitter.com/rFYcVx0WLs
— CM of Karnataka (@CMofKarnataka) August 25, 2026
- ಕರಡು ಮತದಾರರ ಪಟ್ಟಿಯಿಂದ ಹೊರಗುಳಿದಿರುವ ಅರ್ಹ ಮತದಾರರು ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಇರುವ ಅವಧಿಯನ್ನು ವಿಸ್ತರಿಸಬೇಕು
- ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮಸಭೆಗಳು ಹಾಗೂ ನಗರ ಪ್ರದೇಶಗಳಲ್ಲಿ ವಾರ್ಡ್ ಸಮಿತಿ ಸಭೆಗಳನ್ನು ನಡೆಸುವಂತೆ CEOಗೆ ನಿರ್ದೇಶನ ನೀಡಬೇಕು. ಈ ಸಭೆಗಳ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು.
- ತಾರ್ಕಿಕ ವ್ಯತ್ಯಾಸಗಳು ಹಾಗೂ 2002ರ ಮತದಾರರ ಪಟ್ಟಿಯೊಂದಿಗೆ ಲಿಂಕ್ ಇಲ್ಲದಿರುವ ಕಾರಣ ನೋಟಿಸ್ ಪಡೆದ ಮತದಾರರಿಗೆ ಪ್ರತಿಕ್ರಿಯಿಸಲು ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಲು ಕನಿಷ್ಠ 3–4 ವಾರಗಳ ಕಾಲಾವಕಾಶ ನೀಡಬೇಕು.
- ಭಾರೀ ಪ್ರಮಾಣದಲ್ಲಿ ಸಲ್ಲಿಕೆಯಾಗುವ ಹಕ್ಕು, ಆಕ್ಷೇಪಣೆ ಮತ್ತು ಅರ್ಜಿಗಳನ್ನು ನಿರ್ವಹಿಸಲು ಚುನಾವಣಾ ನೋಂದಣಿ ಅಧಿಕಾರಿಗಳ (ERO) ಸಂಖ್ಯೆಯನ್ನು ಹೆಚ್ಚಿಸಬೇಕು. ಅಗತ್ಯವಿದ್ದರೆ ಜಿಲ್ಲಾ ಚುನಾವಣಾಧಿಕಾರಿಗಳ (DEO) ಸಂಖ್ಯೆಯನ್ನೂ ಹೆಚ್ಚಿಸಿ, ತಪ್ಪುಗಳು ಮತ್ತು ಅನ್ಯಾಯಯುತ ಮತದಾರರ ಹೊರಗಿಡುವಿಕೆಯನ್ನು ತಡೆಯಬೇಕು.
ಇದನ್ನೂ ಓದಿ: SIR ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್; ಸೆ.23ರವರೆಗೆ ಆಕ್ಷೇಪಣೆಗೆ ಅವಕಾಶ
‘ಅಗತ್ಯ ಸಹಕಾರ ನೀಡಲು ರಾಜ್ಯ ಸರ್ಕಾರ ಸಿದ್ಧ’
SIR ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ಪೂರ್ಣಗೊಳಿಸಲು ಕರ್ನಾಟಕ ಸರ್ಕಾರವು ಚುನಾವಣಾ ಆಯೋಗಕ್ಕೆ ಸಾಧ್ಯವಿರುವ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧವಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಗ್ರಾಮಸಭೆ ಹಾಗೂ ವಾರ್ಡ್ ಸಮಿತಿ ಸಭೆಗಳನ್ನು ಆಯೋಜಿಸಲು ಸ್ಥಳೀಯ ಆಡಳಿತವನ್ನು ಬಳಸಿಕೊಳ್ಳುವುದು, ವ್ಯಾಪಕ ಜನಜಾಗೃತಿ ಮತ್ತು ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಗಳನ್ನು ನಡೆಸುವುದು ಹಾಗೂ ಅಗತ್ಯವಿರುವ ಎಲ್ಲಾ ಸಮನ್ವಯ ಮತ್ತು ಲಾಜಿಸ್ಟಿಕ್ ನೆರವನ್ನು ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಅವರು ತಿಳಿಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:29 pm, Tue, 25 August 26




