Karnataka Weather Forecast: ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ಅಬ್ಬರ; ತೀವ್ರ ಗಾಳಿಯ ಎಚ್ಚರಿಕೆ

Monsoon 2026: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು, ಮುಂದಿನ ಒಂದು ವಾರ ರಾಜ್ಯಾದ್ಯಂತ ಭಾರೀ ಮಳೆ ಹಾಗೂ ಬಲವಾದ ಬಿರುಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಬೆಂಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಗುಡುಗು-ಮಿಂಚು ಸಹಿತ ವರುಣಾರ್ಭಟದ ಸಾಧ್ಯತೆ ಇದ್ದು, ಯಾವ್ಯಾವ ಪ್ರದೇಶಗಳಲ್ಲಿ ತೀವ್ರ ಮಳೆಯಾಗಬಹುದೆಂಬ ಮಾಹಿತಿ ಇಲ್ಲಿದೆ.

Karnataka Weather Forecast: ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ಅಬ್ಬರ; ತೀವ್ರ ಗಾಳಿಯ ಎಚ್ಚರಿಕೆ
ಮಳೆ
Image Credit source: Tv9 Kannada

Updated on: Jun 11, 2026 | 7:02 AM

ಬೆಂಗಳೂರು, ಜೂನ್​​ 11: ನೈಋತ್ಯ ಮುಂಗಾರು ರಾಜ್ಯದ ಬಹುತೇಕ ಭಾಗಗಳನ್ನು ಆವರಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುಂದಿನ ಒಂದು ವಾರ ಮಳೆ ಮುಂದುವರಿಯಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಕರ್ನಾಟಕದ ಹಲವು ಜಿಲ್ಲೆಗಳಿಗೆ ಭಾರೀ ಮಳೆ, ಗುಡುಗು-ಮಿಂಚು ಮತ್ತು ಬಲವಾದ ಗಾಳಿಯ ಎಚ್ಚರಿಕೆ ನೀಡಿದೆ.

ಐಎಂಡಿಯ ಏಳು ದಿನಗಳ ಮುನ್ಸೂಚನೆಯ ಪ್ರಕಾರ, ಕರಾವಳಿ ಕರ್ನಾಟಕದಲ್ಲಿ ಜೂನ್ 11 (ಇಂದು) ಮತ್ತು 12ರಂದು ಭಾರಿ ಮಳೆ ಸಾಧ್ಯತೆ ಇದೆ. ಜೂನ್ 14ರಿಂದ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗಲಿದ್ದು, ಜೂನ್ 15 ಮತ್ತು 16ರಂದು ಯಾವುದೇ ಪ್ರಮುಖ ಎಚ್ಚರಿಕೆಗಳನ್ನು ನೀಡಿಲ್ಲ. ಉತ್ತರ ಒಳನಾಡು ಕರ್ನಾಟಕದಲ್ಲಿ ಈ ವಾರ ಗುಡುಗು, ಮಿಂಚು, ಬಿರುಗಾಳಿ ಮತ್ತು ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ, ಧಾರವಾಡ, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ಮೂಡಿಗೆರೆಯಲ್ಲಿ ಬಿರುಗಾಳಿ ಮಳೆ ಆರ್ಭಟ; ಅಂಗನವಾಡಿ ಶಿಕ್ಷಕಿ ಮನೆಯ ಮೇಲೆ ಬಿದ್ದ ಮರ

ದಕ್ಷಿಣ ಒಳನಾಡು ಕರ್ನಾಟಕದಲ್ಲಿಯೂ ಇದೇ ರೀತಿಯ ಹವಾಮಾನ ಮುಂದುವರಿಯಲಿದ್ದು, ಬೆಂಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಗುಡುಗು-ಮಿಂಚು, ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆ ಹಾಗೂ ಗಂಟೆಗೆ 30-40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಒಂದು ಅಥವಾ ಎರಡು ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಎಲ್ಲೆಲ್ಲಿ ಮಳೆ?

ಬೀದರ್​​, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಹಾವೇರಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us