ಗಂಭೀರ ಅಪರಾಧಗಳ ತನಿಖೆಗಿಂತ ಸೋಷಿಯಲ್ ಮೀಡಿಯಾ ಪೋಸ್ಟ್ಗಳ ಮೇಲಿನ ಕ್ರಮಕ್ಕೆ ಏಕೆ ಹೆಚ್ಚಿನ ಆದ್ಯತೆ?: ಪೊಲೀಸರ ನಡೆಗೆ ಹೈಕೋರ್ಟ್ ಗರಂ
ಸಾಮಾಜಿಕ ಜಾಲತಾಣಗಳ ಪೋಸ್ಟ್ಗಳ ವಿರುದ್ಧ ಪೊಲೀಸರು ತರಾತುರಿಯಲ್ಲಿ ಎಫ್ಐಆರ್ ದಾಖಲಿಸುತ್ತಿರುವುದಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಬಂಟ್ವಾಳ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ದಾಖಲಾಗಿದ್ದ FIR ರದ್ದುಕೋರಿ ಕಾನೂನು ವಿದ್ಯಾರ್ಥಿ ಕಿರಣ್ ಆರಾಧ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಪೀಠ ಮೌಖಿಕವಾಗಿ ಈ ರೀತಿ ಅಭಿಪ್ರಾಯಪಟ್ಟಿದೆ.

ಮುಖ್ಯಾಂಶಗಳು
- ಬಂಟ್ವಾಳ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆ ಪ್ರಕರಣ
- ಸೋಷಿಯಲ್ ಮೀಡಿಯಾ ಪೋಸ್ಟ್ ಸಂಬಂಧ FIR
- ಪೊಲೀಸರ ನಡೆಗೆ ಹೈಕೋರ್ಟ್ ತೀವ್ರ ಅಸಮಾಧಾನ
ಬೆಂಗಳೂರು, ಜುಲೈ 21: ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್ಗಳ ವಿಚಾರದಲ್ಲಿ ಪೊಲೀಸರು ತ್ವರಿತವಾಗಿ ಎಫ್ಐಆರ್ ದಾಖಲಿಸುತ್ತಿರುವುದನ್ನು ಪ್ರಶ್ನಿಸಿದ ಕರ್ನಾಟಕ ಹೈಕೋರ್ಟ್, ಗಂಭೀರ ಅಪರಾಧಗಳ ವಿರುದ್ಧ ಅದೇ ಮಟ್ಟದ ಕಠಿಣ ಕ್ರಮ ಕಾಣಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ಇಂತಹ ನಡೆ ಕಾನೂನು ಜಾರಿ ವ್ಯವಸ್ಥೆಯಲ್ಲಿ ಅನಾರೋಗ್ಯಕರ ವಾತಾವರಣವನ್ನು ಸೃಷ್ಟಿಸಬಹುದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಬಂಟ್ವಾಳ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಕಾನೂನು ವಿದ್ಯಾರ್ಥಿ ಕಿರಣ್ ಆರಾಧ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಈ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ವಯಸ್ಕ ಮಗಳ ಉನ್ನತ ಶಿಕ್ಷಣದ ವೆಚ್ಚ ಭರಿಸುವುದು ತಂದೆಯ ಕರ್ತವ್ಯ; ಹೈಕೋರ್ಟ್ ಮಹತ್ವದ ತೀರ್ಪು!
ಹೇಗಿತ್ತು ವಾದ-ಪ್ರತಿವಾದ?
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಸಾಮಾಜಿಕ ಜಾಲತಾಣದ ಪೋಸ್ಟ್ನಲ್ಲಿ ಯಾವುದೇ ಧರ್ಮ, ಜಾತಿ, ಸಮುದಾಯ ಅಥವಾ ನಿರ್ದಿಷ್ಟ ಗುಂಪಿನ ಉಲ್ಲೇಖವಿಲ್ಲ ಎಂದು ನ್ಯಾಯಾಲಯದ ಗಮನಲಕ್ಕೆ ತಂದರು. ಎಫ್ಐಆರ್ ಕೇವಲ ಊಹೆ ಮತ್ತು ವೈಯಕ್ತಿಕ ವ್ಯಾಖ್ಯಾನಗಳ ಆಧಾರದ ಮೇಲೆ ದಾಖಲಾಗಿದ್ದು, ಕಾನೂನು ಆಧಾರವಿಲ್ಲದೆ ಪೋಸ್ಟ್ಗೆ ಸಾಮುದಾಯಿಕ ಬಣ್ಣ ನೀಡುವ ಪ್ರಯತ್ನ ನಡೆದಿದೆ ಎಂದು ಅವರು ವಾದಿಸಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ರಾಜ್ಯ ಸರ್ಕಾರದ ಪರ ವಕೀಲ ಬಿ.ಎನ್. ಜಗದೀಶ್, ಎಫ್ಐಆರ್ ದಾಖಲಾಗಿದ್ದು ಕೇವಲ ಎರಡು ದಿನಗಳಷ್ಟೇ ಆಗಿದ್ದು, ಅರ್ಜಿದಾರರಿಗೆ ಪೊಲೀಸರು ಯಾವುದೇ ನೋಟಿಸ್ ಸಹ ನೀಡಿಲ್ಲ. ಅರ್ಜಿದಾರರು ತನಿಖೆ ಆರಂಭವಾಗುವ ಮುನ್ನವೇ ಹೈಕೋರ್ಟ್ಗೆ ಬಂದಿದ್ದಾರೆ. ಈ ಹಂತದಲ್ಲಿ ತನಿಖೆಗೆ ಅಡ್ಡಿಯಾಗುವಂತಹ ಯಾವುದೇ ರಕ್ಷಣೆ ನೀಡಬಾರದು ಎಂದು ,ಮವಿ ಮಾಡಿದ್ದರು.
ಪೊಲೀಸರ ಕ್ರಮಕ್ಕೆ ನ್ಯಾಯಾಲಯ ಅಸಮಾಧಾನ
ಆದರೆ ಪೊಲೀಸರ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ಗಂಭೀರ ಅಪರಾಧಗಳ ತನಿಖೆಗಿಂತ ಸಾಮಾಜಿಕ ಜಾಲತಾಣದ ಪೋಸ್ಟ್ಗಳ ಮೇಲಿನ ಕ್ರಮಕ್ಕೆ ಏಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಪ್ರಶ್ನಿಸಿತು. ಜೊತೆಗೆ, ಪ್ರಕರಣದ ಸವಿಸ್ತಾರ ಪರಿಶೀಲನೆ ಪೂರ್ಣಗೊಳ್ಳುವವರೆಗೆ ಅರ್ಜಿದಾರರ ವಿರುದ್ಧದ ಮುಂದಿನ ತನಿಖೆಗೆ ತಾತ್ಕಾಲಿಕ ತಡೆ ನೀಡಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.




