ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: 20ಕ್ಕೂ ಹೆಚ್ಚು ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್
ಕಿಟ್ಟಿ ಪಾರ್ಟಿಯಲ್ಲಿ ಪರಿಚಯಿಸಿಕೊಂಡು ಮಹಿಳೆಯೊಬ್ಬಳು ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಎಂ.ಬಿ.ಪಾಟೀಲ್ ನಂತಹ ಪ್ರಭಾವಿ ನಾಯಕರ ಹೆಸರು ಬಳಸಿ ಗಾಳ ಹಾಕಿತ್ತಿದ್ದ ಮಹಿಳೆ ಇದೀಗ ಪೊಲೀಸರ ಅತಿಥಿಯಾಗಿದ್ದು, 20ಕ್ಕೂ ಹೆಚ್ಚು ಮಹಿಳೆಯರಿಗೆ ಬರೋಬ್ಬರಿ 30 ಕೋಟಿ ರೂಪಾಯಿಗೂ ಅಧಿಕ ಹಣ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.

ಬೆಂಗಳೂರು, (ಜುಲೈ 09): ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾದ ಸ್ನೇಹಿತೆಯರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಮಹಿಳೆ ಸಿಕ್ಕಿಬಿದ್ದಿದ್ದಾಳೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಹೇಳಿಕೊಂಡು ಗಾಳ ಹಾಕುತ್ತಿದ್ದ ಸವಿತಾ ಎನ್ನುವ ಮಹಿಳೆಯನ್ನು ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಕಿಟ್ಟಿ ಪಾರ್ಟಿಯಲ್ಲಿ ನೆಪದಲ್ಲಿ ಶ್ರೀಮಂತ ಮಹಿಳೆಯರನ್ನೇ ಟಾರ್ಗೇಟ್ ಮಾಡುತ್ತಿದ್ದ ಸವಿತಾ, ಈವರೆಗೆ 20ಕ್ಕೂ ಹೆಚ್ಚು ಮಹಿಳೆಯರಿಗೆ ಬರೋಬ್ಬರಿ 30 ಕೋಟಿ ರೂಪಾಯಿಗೂ ಅಧಿಕ ಹಣ ವಂಚನೆ ಮಾಡಿದ್ದಾಳೆ ಎಂದು ತಿಳಿದುಬಂದಿದ್ದು, ಈ ಸಂಬಂಧ ಪೊಲೀಸರು ತನಿಖೆ ನಡೆಸಿದ್ದಾರೆ.
ಕಿಟ್ಟಿ ಪಾರ್ಟಿ ಹೆಸರಲ್ಲಿ ಶ್ರೀಮಂತ ಮಹಿಳೆಯರನ್ನ ಪರಿಚಯ ಮಾಡಿಕೊಂಡಿದ್ದ ಸವಿತಾ ತನಗೆ ಹಲವು ರಾಜಕಾರಣಿಗಳು ಗೊತ್ತೆಂದು ಹೇಳಿಕೊಳ್ಳುತ್ತಿದ್ದಳು. ಸಿಎಂ, ಡಿಸಿಎಂ, ಎಂಬಿ ಪಾಟಿಲ್ ಹೆಸರೇಳಿ ಗಾಳ ಹಾಕುತ್ತಿದ್ದಳು. ಬಳಿಕ ಅವರನ್ನ ಪುಸಲಾಯಿಸಿ ಹೂಡಿಕೆ ನೆಪದಲ್ಲಿ ಹಣ ಪಡೆದು ವಂಚಿಸುತ್ತಿದ್ದಳು.
ಇದನ್ನೂ ಓದಿ: ಬೆಟ್ಟಿಂಗ್ ಚಟಕ್ಕೆ ಬಿದ್ದು ತಂದೆ ಆಸ್ತಿ ಮಾರಿಸಿದ ಮಗ: ಆದರೂ ಬುದ್ಧಿ ಕಲಿಯದ ಇಂಜಿನಿಯರ್ ಕಳ್ಳನಾದ!
ಅಮೆರಿಕದಿಂದ (USA) ಕಮ್ಮಿ ಬೆಲೆಗೆ ಚಿನ್ನ ತರಿಸಿಕೊಡುವುದಾಗಿ ಒಬ್ಬರಿಂದ ತಲಾ 50 ಲಕ್ಷದಿಂದ ಎರಡೂವರೆ ಕೋಟಿ ಹಣ ಪಡೆದು ವಾಪಸ್ ಹಣ ನೀಡದೇ ವಂಚಿಸಿದ್ದಾಳೆ. ಈ ಸಂಬಂಧ ಈ ಹಿಂದೆ ಗೋವಿಂದರಾಜನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನವಾಗಿ ಬಳಿಕ ಜಾಮೀನಿನ ಮೇಲೆ ಆಚೆ ಬಂದಿದ್ದಳು. ಬಳಿಕ ಸವಿತಾ ಮತ್ತದೇ ತನ್ನ ಹಳೇ ಚಾಳಿಯನ್ನೇ ಮುಂದುವರೆಸಿದ್ದು, ಇದೀಗ ಬಸವೇಶ್ವರ ನಗರ ಪೊಲೀಸರ ಅತಿಥಿಯಾಗಿದ್ದಾಳೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:39 pm, Wed, 9 July 25



