ಬೀದರ್: ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು

ಬೀದರ್​​ನ ಹೃದಯ ಭಾಗದಲ್ಲಿ ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ಎಟಿಎಂಗೆ ಹಣ ತುಂಬಿಸಲು ಬಂದಿದ್ದ ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದಾರೆ. ಸಿನಿಮೀಯ ರೀತಿಯಲ್ಲಿ ಗುಂಡಿನ ದಾಳಿ ನಡೆಸಿದ ಆರೋಪಿಗಳು ಹಣದ ಚೀಲದೊಂದಿಗೆ ಪರಾರಿಯಾಗಿದ್ದಾರೆ. ಆರೋಪಿಗಳನ್ನು ತಡೆಯಲು ಸ್ಥಳೀಯರು ಮಾಡಿದ ಸಾಹಸ ವ್ಯರ್ಥವಾಗಿದೆ. ಸದ್ಯ ಆರೋಪಿಗಳ ಪತ್ತೆಗೆ ಪೊಲೀಸರು ಬಲೆಬೀಸಿದ್ದಾರೆ.

ಬೀದರ್: ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು
ಗುಂಡಿ ದಾಳಿಯಲ್ಲಿ ಮೃತಪಟ್ಟ ಗಿರಿ ವೆಂಕಟೇಶ್ ಹಾಗೂ ಶಿವಕುಮಾರ್
Edited By:

Updated on: Jan 17, 2025 | 2:38 PM

ಬೀದರ್, ಜನವರಿ 16: ಬೀದರ್‌ನ ಹೃದಯ ಭಾಗ ಶಿವಾಜಿ ಚೌಕ್​ನಲ್ಲಿ ಗುರುವಾರ ಎಟಿಎಂಗೆ ಹಣ ತುಂಬಿಸುವ ವೇಳೆ ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಎಟಿಎಂಗೆ ಹಣ ತುಂಬುವ ವಾಹನದ ಹಿಂಭಾಗ ವ್ಯಕ್ತಿಯೊಬ್ಬನ ಶವ ಬಿದ್ದಿದ್ದರೆ, ಕ್ಷಣಮಾತ್ರದಲ್ಲೇ ಸಿನಿಮೀಯ ರೀತಿಯಲ್ಲಿ ಇಬ್ಬರು ದುಷ್ಕರ್ಮಿಗಳು ಹಣ ಎಗರಿಸಿ ಪರಾರಿಯಾಗಿದ್ದಾರೆ.

ಬೀದರ್ ಶಿವಾಜಿ ಚೌಕ್​ನಲ್ಲಿ ನಡೆದಿದ್ದೇನು?

ಅದು ಬೀದರ್‌ನ ಹೃದಯ ಭಾಗ ಶಿವಾಜಿ ಚೌಕ್. ಜನ ಎಂದಿನಂತೆ ತಮ್ಮ ಕೆಲಸದಲ್ಲಿ ನಿರತರಾಗಿದ್ದರು. ಎಟಿಎಂಗಳಿಗೆ ಹಣ ತುಂಬುವ ವಾಹನವೊಂದು ಅಲ್ಲಿಗೆ ಬಂದಿದೆ. ಹಾಡಹಗಲೇ, ನೋಡ ನೋಡುತ್ತಿದ್ದಂತೆಯೇ ಏಕಾಏಕಿ ದುಷ್ಕರ್ಮಿಗಳು ವಾಹನದ ಮೇಲೆ ಗುಂಡಿ ದಾಳಿ ನಡೆಸಿದ್ದಾರೆ. ವಾಹನದಲ್ಲಿದ್ದ ವ್ಯಕ್ತಿ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ.

ದುಷ್ಕರ್ಮಿಗಳ ದಾಳಿಗೆ ಬಲಿಯಾದ ವ್ಯಕ್ತಿಯನ್ನು ಗಿರಿ ವೆಂಕಟೇಶ್ (ಎಟಿಎಂಗಳಿಗೆ ಹಣ ಹಾಕುವ ಸಿಎಂಎಸ್ ಏಜೆನ್ಸಿಯ ಸಿಬ್ಬಂದಿ) ಎಂದು ಗುರುತಿಸಲಾಗಿದೆ. ಎಂದಿನಂತೆ ಇವತ್ತು ಕೂಡ ಎಟಿಎಂಗಳಿಗೆ ಹಣ ಹಾಕಲು ತೆರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಐದು ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಗಿರಿ ವೆಂಕಟೇಶ್‌ಗೆ ಗುಂಡು ತಗುಲಿದೆ. ಸ್ಥಳದಲ್ಲೇ ಗಿರಿ ಮೃತಪಟ್ಟಿದ್ದಾರೆ.

ಖಾರದ ಪುಡಿ ಎರಚಿ ಗುಂಡಿನ ದಾಳಿ: ಹಣ ತುಂಬಿದ ಬಾಕ್ಸ್ ಜೊತೆ ಪರಾರಿ

ವಾಹನದಲ್ಲಿದ್ದವರಿಗೆ ಖಾರದ ಪುಡಿ ಎರಚಿದ ಇಬ್ಬರು ದುಷ್ಕರ್ಮಿಗಳು, ನಂತರ ಗುಂಡಿನ ದಾಳಿ ನಡೆಸಿದ್ದಾರೆ. ಗಿರಿ ವೆಂಕಟೇಶ್ ಸ್ಥಳದಲ್ಲೇ ಸಾವನ್ನಪ್ಪುತ್ತಿದ್ದಂತೆಯೇ ವಾಹನದಲ್ಲಿದ್ದ ಹಣದ ಬಾಕ್ಸ್ ಅನ್ನು ಬೈಕ್‌ನಲ್ಲಿ ಇಟ್ಟುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳೀಯರು ಕಲ್ಲು ತೂರಿ, ದುಷ್ಕರ್ಮಿಗಳನ್ನು ತಡೆಯಲು ಯತ್ನಿಸಿದರಾದರೂ ಪ್ರಯೋಜನವಾಗಲಿಲ್ಲ. ಈ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಘಟನೆಯಲ್ಲಿ ಗಾಯಗೊಂಡಿದ್ದ ಶಿವಕುಮಾರ್ (26) ಅವರನ್ನು ಚಿಕಿತ್ಸೆಗಾಗಿ ಬೀದರ್​​ನ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಅವರು ಸಹ ಅಸುನೀಗಿದ್ದಾರೆ. ಸದ್ಯ ಆರೋಪಿಗಳಿಗಾಗಿ ಬೀದರ್ ಪೊಲೀಸರು ಬಲೆ ಬಿಸಿದ್ದಾರೆ. ಬೈಕ್ ವಾಹನದ ನಂಬರ್ ಟ್ರೇಸ್ ಮಾಡುತ್ತಿದ್ದಾರೆ.

ಎಟಿಎಂ ವಾಹನದಲ್ಲಿತ್ತು 87 ಲಕ್ಷ ರೂ. ನಗದು

ಎಟಿಎಂ ವಾಹನದಲ್ಲಿ ಒಟ್ಟು 87 ರೂ. ಲಕ್ಷ ಹಣ ಇದ್ದ ಬಗ್ಗೆ ಮಾಹಿತಿ ದೊರೆತಿದೆ. 5 ಲಕ್ಷ ರೂ. ನಗದು ಸ್ಥಳದಲ್ಲಿಯೇ ಬಿಟ್ಟು ಹೋಗಿದ್ದಾರೆ. 83 ಲಕ್ಷ ರೂ. ನಗದು ತೆಗೆದುಕೊಂಡು ಹೋಗಿರುವ ಬಗ್ಗೆ ಮಾಹಿತಿ ದೊರೆತಿದೆ.

ಇದನ್ನೂ ಓದಿ: ಜಗತ್ತಿನಾದ್ಯಂತ ಪ್ರಸಿದ್ಧಿ ಪಡೆದಿರುವ ಬಿದರಿ ಕಲೆ ಅವಸಾನದತ್ತ!

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:15 pm, Thu, 16 January 25

Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
Follow Us