AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಪತ್ರಗಳ ಮರುಪರಿಶೀಲನೆಗೆ ಹೈಕೋರ್ಟ್ ಆದೇಶ

2023ರ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಗೆದ್ದು, ಶಾಸಕರಾಗಿದ್ದ ಕಾಂಗ್ರೆಸ್‌ನ ಕೆವೈ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿ ಮರು ಮತ ಎಣಿಕೆಗೆ ಆದೇಶಿಸಿತ್ತು. ಆದ್ರೆ, ಮರುಮತದಾನದಲ್ಲಿ ನಂಜೇಗೌಡ ಅವರೇ ಗೆದ್ದಿದ್ದಾರೆ. ಹೀಗಾಗಿ ನಂಜೇಗೌಡ ಅವರ ಪ್ರಕರಣ ಸುಖಾಂತ್ಯ ಕಂಡಿದೆ. ಇದರ ಬೆನ್ನಲ್ಲೇ ಮತ್ತೊರ್ವ ಶಾಸಕ ಸ್ಥಾನಕ್ಕೆ ಕುತ್ತುಬಂದಿದೆ. ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಸಲ್ಲಿಸಿದ್ದ ತಕರಾರು ಅರ್ಜಿ ಸಂಬಂಧ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಪತ್ರಗಳ ಮರುಪರಿಶೀಲನೆಗೆ ಹೈಕೋರ್ಟ್ ಆದೇಶ
Karnataka High Court
Ramesha M
| Edited By: |

Updated on:Apr 06, 2026 | 4:18 PM

Share

ಬೆಂಗಳೂರು/ಚಿಕ್ಕಮಗಳೂರು, (ಏಪ್ರಿಲ್ 06): ಕೋಲಾರದ ಮಾಲೂರು ವಿಧಾನಸಭಾ ಕ್ಷೇತ್ರದ ಫಲಿತಾಂಶ ತಕರಾರು ಪ್ರಕರಣ ಸುಖಾಂತ್ಯ ಕಂಡಿದೆ. ಇದರ ಬೆನ್ನಲ್ಲೇ ಇದೀಗ ಶೃಂಗೇರಿ ವಿಧಾನಸಭಾ ಕ್ಷೇತ್ರದ (Sringeri Assembly constituency) ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಅವರು ಸಲ್ಲಿಸಿದ್ದ  ತಕರಾರು ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ (Karnataka High Court),  279 ಅಂಚೆ ಮತಪತ್ರಗಳನ್ನು 2 ವಾರದಲ್ಲಿ ಮರುಪರಿಶೀಲನೆ ಮಾಡಿ ಫಲಿತಾಂಶ ಪ್ರಕಟಿಸುವಂತೆ ಆದೇಶ ಹೊರಡಿಸಿದೆ.

ತನ್ನದೇ ತೀರ್ಪಿಗೆ 2 ವಾರ ಮಧ್ಯಂತರ ತಡೆ

ಶೃಂಗೇರಿ ಶಾಸಕರಾಗಿ ಟಿ.ಡಿ.ರಾಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಡಿ.ಎನ್.ಜೀವರಾಜ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಹೈಕೋರ್ಟ್ ಪೀಠ, 279 ಅಂಚೆ ಮತಪತ್ರಗಳ ಮರುಪರಿಶೀಲನೆಗೆ ಆದೇಶ ಹೊರಡಿಸಿದ್ದು, 2 ವಾರದಲ್ಲಿ ಮರುಪರಿಶೀಲನೆ ನಡೆಸಿ ಫಲಿತಾಂಶ ಪ್ರಕಟಿಸಲು ನಿರ್ದೇಶನ ನೀಡಿದೆ. ಇನ್ನು ಇದೇ ವೇಳೆ ಆದೇಶಕ್ಕೆ ತಡೆ ನೀಡುವಂತೆ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಪರ ವಕೀಲರು ಮನವಿ ಮಾಡಿದರು. ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಬೇಕಿರುವ ಕಾರಣಕ್ಕೆ ತಡೆ ನೀಡಬೇಕೆಂದು ಮನವಿ ಮಾಡಿಕೊಂಡಿದ್​ದಾರೆ. ಆದ್ರೆ, ಇನ್ನೊಂದೆಡೆ ಡಿ.ಎನ್.ಜೀವರಾಜ್ ಪರ ವಕೀಲೆ ವಂದನಾ.ಪಿ.ಎಲ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಎರಡು ಕಡೆಯ ವಾದ ಪ್ರತಿವಾದ ಆಲಿಸಿದ ಹೈಕೋರ್ಟ್, ಅಂತಿಮವಾಗಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿ ತನ್ನದೇ ತೀರ್ಪಿಗೆ 2 ವಾರ ಮಧ್ಯಂತರ ತಡೆ ನೀಡಿದೆ.

ಇದನ್ನೂ ಓದಿ: ನನ್ನ ಮನೆ ಹಾಳು ಮಾಡಿದ್ದೀರಿ, ಸಾಲ ಮಾಡಿದ್ದೇನೆ: ವೇದಿಕೆ ಮೇಲೆ ಗಳಗಳನೇ ಅತ್ತ ಕಾಂಗ್ರೆಸ್‌ ಶಾಸಕ

ಪ್ರಕರಣದ ಹಿನ್ನೆಲೆ

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ನ ರಾಜೇಗೌಡ ಅವರು ಗೆಲುವು ಸಾಧಿಸಿದ್ದರು. ಆದ್ರೆ, ರಾಜೇಗೌಡ ಆಯ್ಕೆಯನ್ನು ಅಸಿಂಧಗೊಳಿಸಬೇಕು ಎಂದು ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಜೀವರಾಜ್ ಅವರು ಹೈಕೋರ್ಟ್​​ ಗೆ ಅರ್ಜಿ ಸಲ್ಲಿಸಿದ್ದರು. ಅವರು ಕೇವಲ 200 ಮತಗಳ ಅಂತರದಿಂದ ಗೆದ್ದಿದ್ದು, ಅಂಚೆ ಮತಗಳ ಎಣಿಕೆಯಲ್ಲಿ ಅಧಿಕಾರಿಗಳು ಲೋಪ ಎಸಗಿದ್ದಾರೆ. ಜಿತೆಗೆ ಎದುರಾಳಿಯು ಚುನಾವಣೆಗೆ 120 ಕೋಟಿ ರೂ. ಖರ್ಚು ಮಾಡಿದ್ದಾರೆ. ಇದಕ್ಕೆ ಪ್ರಬಲವಾದ ಸಾಂದರ್ಭಿಕ ಪುರಾವೆಗಳಿವೆ ಎಂದು ಅರ್ಜಿಯಲ್ಲಿ ತಿಳಿಸಿದ್ದರು.

ಆದ್ರೆ, ಜೀವರಾಜ್ ಅವರ ಅರ್ಜಿಯನ್ನು ವಜಾಗೊಳಿಸಬೇಕೆಂದು ಕಾಂಗ್ರೆಸ್​​ ಶಾಸಕ ರಾಜೇಗೌಡ ಅವರು ಹೈಕೋರ್ಟ್​​​ಗೆ ಮೇಲ್ಮನವಿ ಸಲ್ಲಿಸಿದ್ದರು. ಆದ್ರೆ ಹೈಕೋರ್ಟ್, ಅರ್ಜಿ ವಜಾಗೊಳಿಸಲು ನಿರಾಕರಿಸಿತ್ತು. ಬಳಿಕ ರಾಜೇಗೌಡ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಬಳಿಕ ಸುಪ್ರೀಂಕೋರ್ಟ್​ ರಾಜೇಗೌಡರ ಅರ್ಜಿಯನ್ನು ವಿಲೇವಾರಿ ಮಾಡಿದ್ದು, ಈ ಪ್ರಕರಣದ ಅರ್ಜಿಯನ್ನು ಹೈಕೋರ್ಟ್ ಮುಂದುವರಿಸಲಿದ್ದು, ಅರ್ಜಿದಾರರು ಅಲ್ಲಿ ಆಕ್ಷೇಪಣೆ ಸಲ್ಲಿಸಲು ಅರ್ಹರು ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿತ್ತು. ಆ ನಂತರ ರಾಜೇಗೌಡ ಅವರು ಮತ್ತೊಮ್ಮೆ ಅರ್ಜಿ ಸಲ್ಲಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:58 pm, Mon, 6 April 26

Follow Us