ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಎರಡು ಅಪಘಾತಗಳು ಸಂಭವಿಸಿದ್ದು ಅವಘಡಗಳಲ್ಲಿ ಸಾವು ನೋವು ಎದುರಾಗಿದೆ.
ಕಾರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ನಲ್ಲಿದ್ದ ತಂದೆ ಮತ್ತು ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜೋಡಿಗಟ್ಟೆ ಗ್ರಾಮದ ಬಳಿ ನಡೆದಿದೆ.
ಈ ಅಪಘಾತದಲ್ಲಿ ಡಿ ಕರಡೇವು ಗ್ರಾಮದ ಧರಣಿ (32) ಹಾಗೂ ಆತನ ಐದು ವರ್ಷದ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜೊತೆಗೆ ಬೈಕ್ನಲ್ಲಿದ್ದ ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುವನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರಲ್ಲಿ ಬೈಕುಗಳ ಡಿಕ್ಕಿಯಾಗಿ ಓರ್ವ ಬೈಕ್ ಸವಾರ ಸಾವು..
ಇದೇ ರೀತಿಯ ಮತ್ತೊಂದು ಅಪಘಾತ ಪ್ರಕರಣ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದ್ದು, ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಜೊತೆಗೆ, ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗೆದ್ದಲಹಳ್ಳಿ ಗ್ರಾಮದ ಬಳಿ ಎರಡು ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ಗಳು ಹೊತ್ತಿ ಉರಿದಿದ್ದು, ಯೂನಿಕಾರ್ನ್ ಬೈಕ್ ಸವಾರ ಮಂಜುನಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪಲ್ಸರ್ ಬೈಕ್ನಲ್ಲಿದ್ದ ಸಂಜಯ್ ಸ್ಥಿತಿ ಗಂಭೀರವಾಗಿದ್ದು, ಅದೇ ಬೈಕ್ನಲ್ಲಿದ್ದ ಗೌತಮ್ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.