ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆಶಿಗೆ ಸಮನ್ಸ್: ಖುದ್ದು ಹಾಜರಿಗೆ ಕೋರ್ಟ್ ಸೂಚನೆ

ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಕಮಿಷನ್, ಭ್ರಷ್ಟಾಚಾರ ಆರೋಪ ಮಾಡಿದ್ದ ಕಾಂಗ್ರೆಸ್​ ನಾಯಕರಿಗೆ ಇದೀಗ ಸಂಕಷ್ಟ ಎದುರಾಗಿದೆ. ಬಿಜೆಪಿ ನೀಡಿದ ದೂರಿನನ್ವಯ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತು ರಾಹುಲ್​ ಗಾಂಧಿಗೆ ಖುದ್ದು ಹಾಜರಾಗುವಂತೆ ಕೋರ್ಟ್​ ಸಮನ್ಸ್​ ಜಾರಿ ಮಾಡಿದೆ.

ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆಶಿಗೆ ಸಮನ್ಸ್: ಖುದ್ದು ಹಾಜರಿಗೆ ಕೋರ್ಟ್ ಸೂಚನೆ
ಡಿಕೆಶಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ
Edited By:

Updated on: Feb 23, 2024 | 6:27 PM

ಬೆಂಗಳೂರು, (ಫೆಬ್ರವರಿ 23): ವಿಧಾನಸಭೆ ಚುನಾವಣೆ (Karnataka Assembly Elections 2023) ವೇಳೆ ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧದ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ (Rahul Gandhi), ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah), ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್​​​ಗೆ ಕೋರ್ಟ್​ ಸಮನ್ಸ್​ ಜಾರಿ ಮಾಡಿದ್ದುಮ ಖುದ್ದು ಹಾಜರಾಗುವಂತೆ ಸೂಚಿಸಿದೆ. ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ(BJP) ವಿರುದ್ಧ ಅಪಪ್ರಚಾರ ಮಾಡಿದ್ದಾರೆಂದು ಕಾಂಗ್ರೆಸ್(Congress) ವಿರುದ್ಧ ಬಿಜೆಪಿ ಖಾಸಗಿ ದೂರು ನೀಡಿತ್ತು. ಈ ದೂರಿನ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ (Bengaluru) 42ನೇ ACMM ಕೋರ್ಟ್, ಮಾರ್ಚ್ 28ಕ್ಕೆ ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಕಾಂಗ್ರೆಸ್​ 40% ಕಮಿಷನ್ ಮತ್ತಿತರ ಆರೋಪಗಳನ್ನು ಮಾಡಿತ್ತು. ಅಲ್ಲದೇ ಭ್ರಷ್ಟಾಚಾರ ರೇಟ್ ಕಾರ್ಡ್ ಜಾಹೀರಾತು ನೀಡಿತ್ತು. ಈ ಜಾಹಿರಾತಿನಿಂದ ಬಿಜೆಪಿ ಪಕ್ಷಕ್ಕೆ ಹಾನಿಯಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿದ್ದು, ಬಿಜೆಪಿ ಪರ ವಕೀಲ ವಿನೋದ್ ಕುಮಾರ್ ಎನ್ನುವರು ವಾದ ಮಂಡಿಸಿದರು. ವಾದ ಆಲಿಸಿದ ಬೆಂಗಳೂರಿನ 42ನೇ ACMM ಕೋರ್ಟ್ ಜಡ್ಜ್ ಜೆ.ಪ್ರೀತ್ ಅವರು, ಮಾರ್ಚ್ 28ಕ್ಕೆ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಖುದ್ದು ಹಾಜರಾಗುವಂತೆ ಸಮನ್ಸ್​ ನೀಡಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಲಂಚ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ: ಮರು ತನಿಖೆಗೆ ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ

ಬಿಜೆಪಿ ಪರ ವಕೀಲ ವಿನೋದ್ ಕುಮಾರ್ ಹೇಳಿದ್ದೇನು?

ಇನ್ನು ಈ ಬಗ್ಗೆ ಟಿವಿ9ಗೆ ಪ್ರತಿಕ್ರಿಯಿಸಿದ ಬಿಜೆಪಿ ಪರ ವಕೀಲ ವಿನೋದ್ ಕುಮಾರ್, 2023ರಲ್ಲಿ ನಡೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಪಕ್ಷಕ್ಕೆ ಹಾನಿಯಾಗಿತ್ತು. ಆಧಾರ ರಹಿತ, ಸತ್ಯಕ್ಕೆ ದೂರವಾದ ಜಾಹೀರಾತನ್ನ ಕಾಂಗ್ರೆಸ್ ಪಕ್ಷ ನೀಡಿತ್ತು. ಜಾಹೀರಾತು ನೀಡಿದ ಬಳಿಕವೂ ನೋಟಿಸ್ ನೀಡಲಾಗಿತ್ತು. ನೋಟಿಸ್ ನೀಡಿದ್ದರು ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಣೆ ನೀಡಿದ್ದರು. ಸುಳ್ಳು ಸುದ್ದಿ ಪ್ರಕಟಿಸಿದ್ದಲ್ಲಿ ಮಾನಹಾನಿಯಾಗುತ್ತೆ. ಲೀಗಲ್ ನೋಟಿಸ್ ನೀಡಿ ಕ್ಷಮೆ ಕೇಳುವಂತೆ ಹೇಳಿದ್ವಿ ಎಂದು ಹೇಳಿದರು.

ಬಿಜೆಪಿಗೆ ಅದರದ್ದೆ ಆದ ಗೌರವ ಇದೆ. ಈ ಜಾಹೀತಿನಿಂದ 30-40 ಕ್ಷೇತ್ರಗಳಲ್ಲಿ ಕಡಿಮೆ ಅಂತರದಲ್ಲಿ ಸೋತಿದೆ. ಈಗ ಕೋರ್ಟ್, ಐಪಿಸಿ 499 ಅಡಿ ಸಮನ್ಸ್ ನೀಡಿದೆ. ಕಾನೂನು ರೂಪಿಸುವ ಜನಪ್ರತಿನಿಧಿಗಳೇ ಸುಳ್ಳು ಜಾಹೀರಾತು ನೀಡಿರುವುದು ಸರಿಯಲ್ಲ. ಈ ಹಿನ್ನಲೆ ನಮ್ಮ ವಾದ ಪರಿಗಣಿಸಿರುವ ನ್ಯಾಯಾಲಯ ಕಾಂಗ್ರೆಸ್ ಪಕ್ಷ, ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​​ಗೆ ಸಮನ್ಸ್ ಜಾರಿಗೊಳಿಸಿದೆ. ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ ಬಳಿಕ ಹಾಜರಾಗದಿದ್ದಲ್ಲಿ ವಾರಂಟ್ ಜಾರಿಯಾಗಲಿದೆ ಎಂದರು.

ಜಾಹೀರಾತು ವಿರುದ್ಧ ದೂರು ನೀಡಿದ್ದ ಬಿಜೆಪಿ

ಈ ಸಂಬಂಧ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್‌. ಶಿವಪ್ರಸಾದ್‌, ಕೆಪಿಸಿಸಿ ಹಾಗೂ ಕಾಂಗ್ರೆಸ್‌ ನಾಯಕರು ಬಿಜೆಪಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಜಾಹೀರಾತು ನೀಡಿ ಪಕ್ಷದ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಪಕ್ಷಕ್ಕೆ ಹಾನಿಯಾಗಿದೆ. ಈ ನಿಟ್ಟಿನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಕೋರಿ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ದೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ರಾಹುಲ್‌ ಗಾಂಧಿ, ಕೆಪಿಸಿಸಿ ಮತ್ತಿತರರನ್ನು ಪ್ರತಿವಾದಿಗಳನ್ನಾಗಿಸಿದ್ದರು.ಈ ದೂರು ವಿಚಾರಣೆಗೆ ಅಂಗೀಕರಿಸಿರುವ ನ್ಯಾಯಾಲಯ ಪ್ರತಿವಾದಿಗಳ ವಿರುದ್ಧ ಮಾನಹಾನಿ ಸಂಬಂಧ ಕಾಗ್ನಿಜೆನ್ಸ್‌ ತೆಗೆದುಕೊಂಡು ವಿಚಾರಣೆ ನಡೆಸುತ್ತಿದೆ.

ಭಾರೀ ಸದ್ದು ಮಾಡಿದ್ದ 40% ಸರ್ಕಾರ ಅಭಿಯಾನ

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಅಂದಿನ ವಿರೋಧ ಪಕ್ಷ ಕಾಂಗ್ರೆಸ್‌ ಮಾಡಿದ ಅತ್ಯಂತ ಪ್ರಮುಖ ಅಭಿಯಾನಗಳಲ್ಲಿ 40% ಸರ್ಕಾರ ಒಂದು. ಆರಂಭದಲ್ಲಿ ಭಾಷಣಗಳಲ್ಲಿ ಉಲ್ಲೇಖಿಸುತ್ತಿದ್ದ ಕಾಂಗ್ರೆಸ್‌ ನಾಯಕರು ಆ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ನಡೆಸಿದ್ದರು. ಬಳಿಕ ಬೀದಿಗಳಲ್ಲಿ ಪೋಸ್ಟ್‌ ಹಚ್ಚಿ ಸಾಕಷ್ಟು ಸದ್ದು ಮಾಡಿದ್ದರು. ಧ್ವನಿ ಸುರಳಿಗಳು, ಜಾಹೀರಾತು ದೃಶ್ಯಾವಳಿಗಳು ಹೀಗೆ ಹಲವೆಡೆಯೂ 40% ಸರ್ಕಾರ ಎಂದು ಆರೋಪಿಸಲಾಗಿತ್ತು. ಬಳಿಕ ಚುನಾವಣೆ ಸಂದರ್ಭದಲ್ಲಿಯೂ ನಾಯರು ತಮ್ಮ ಪ್ರತಿ ಭಾಷಣದಲ್ಲಿಯೂ ಈ ಬಗ್ಗೆ ಉಲ್ಲೇಖಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:37 pm, Fri, 23 February 24

Loading...
Unable to load recommendations.
Follow Us