ಸಿದ್ದರಾಮಯ್ಯ ಬಳಿ ಕ್ಷಮೆಯಾಚಿಸಿದ ಬೆಲ್ಲದ್, ಬಿಜೆಪಿ ಶಾಸಕನ ಕ್ಷಮಾಪಣೆ ಪತ್ರಕ್ಕೆ ಸಿಎಂ ಶ್ಲಾಘನೆ

ಕೆಲವು ದಿನಗಳ ಹಿಂದೆ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದ ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್, ಈಗ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಕ್ಷಮೆಯಾಚಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಪ್ರತಿಕ್ರಿಯಿಸಿ ಬೆಲ್ಲದ್ ನಡೆಯನ್ನು ಶ್ಲಾಘಿಸಿದ್ದಾರೆ. ಹಾಗಾದ್ರೆ, ಬೆಲ್ಲದ್ ಕ್ಷಮಾಪಣೆ ಪತ್ರದಲ್ಲೇನಿದೆ? ಸಿದ್ದರಾಮಯ್ಯ ಏನು ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.

ಸಿದ್ದರಾಮಯ್ಯ ಬಳಿ ಕ್ಷಮೆಯಾಚಿಸಿದ ಬೆಲ್ಲದ್, ಬಿಜೆಪಿ ಶಾಸಕನ ಕ್ಷಮಾಪಣೆ ಪತ್ರಕ್ಕೆ ಸಿಎಂ ಶ್ಲಾಘನೆ
ಸಿದ್ದರಾಮಯ್ಯ, ಅರವಿಂದ್ ಬೆಲ್ಲದ್

Updated on: Sep 03, 2024 | 4:26 PM

ಬೆಂಗಳೂರು, (ಸೆಪ್ಟೆಂಬರ್ 03): ಸಿಎಂ ವಿರುದ್ಧ ‘ಅಪ್ಪನ ಮನೆ ಆಸ್ತಿನಾ’ ಎಂಬ ಪದ ಪ್ರಯೋಗ ಸಂಬಂಧ ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್ ಅವರು ಸಿದ್ದರಾಮಯ್ಯನವರ ಬಳಿ ಕ್ಷಮೆಯಾಚಿಸಿದ್ದಾರೆ. ಜಿಂದಾಲ್ ಗೆ ಭೂಮಿ ಕೊಟ್ಟಿರೋ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಅರವಿಂದ್ ಬೆಲ್ಲದ್, ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆಯ ಆಸ್ತಿನಾ ಎಂದು ವಾಗ್ದಾಳಿ ನಡೆಸಿದ್ದರು. ಇದೀಗ ಈ ಬಗ್ಗೆ ಬೆಲ್ಲದ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕ್ಷಮಾಪಣೆ ಪತ್ರ ಬರೆದು ಕ್ಷಮೆಯಾಚಿಸಿದ್ದಾರೆ.

ಕ್ಷಮಾಪಣೆ ಪತ್ರದಲ್ಲಿಲ್ಲೇನಿದೆ?

ಜಿಂದಾಲ್ ಗೆ ಭೂಮಿ ಕೊಟ್ಟಿರೋ ವಿಚಾರವಾಗಿ ನಗರದ ಅರಮನೆ ಮೈದಾನದಲ್ಲಿ ನಡೆದ ಮಾಧ್ಯಮಗೋಷ್ಟಿ ವೇಳೆ “ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆಯ ಆಸ್ತಿನಾ” ಎಂದಿದ್ದೆ, ಮಾತಿನ ಭರದಲ್ಲಿ ಈ ರೀತಿಯ ಪದ ಬಳಸಿದ್ದೆ, ಅಲ್ಲಿ ಬಳಿಸಿದ ಪದ ನನಗೆ ಶೋಭೆ ತರುವುದಿಲ್ಲ. ಈ ಹಿನ್ನೆಲೆಯಲ್ಲಿ ನಾನು ಕ್ಷಮೆ ಕೇಳುತ್ತೇನೆ ಎಂದು ಕ್ಷಮಾಪಣೆ ಪತ್ರದಲ್ಲಿ ಉಲ್ಲೇಖ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ಷಮೆಯಾಚಿಸಿದ್ದಾರೆ. ಇದೀಗ ಈ ಕ್ಷಮಾಪಣೆ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದ್ದು, ಇದರ ಮೇಲೆ ನಾನಾ ಚರ್ಚೆಗಳು ಶುರುವಾಗಿವೆ.

ಇದನ್ನೂ ಓದಿ: ಕೆಐಎಡಿಬಿ ಅಕ್ರಮ ಆರೋಪ: ಛಲವಾದಿ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಲ್ಲದ್​ ನಡೆಗೆ ಸಿಎಂ ಸಿದ್ದರಾಮಯ್ಯ ಶ್ಲಾಘನೆ

ಇನ್ನು ಬಳಸಿದ್ದ ಪದಕ್ಕೆ ಬೆಲ್ಲದ್​ ಕ್ಷಮೆಯಾಚಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದು, ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವ ಹೇಳಿಕೆ, ಅರಿವಿಗೆ ಬಾರದೆ ಘನತೆಗೆ ಚ್ಯುತಿ ತರುವ ಹೇಳಿಕೆ ಬಂದು ಬಿಡುತ್ತದೆ . ಜಿಂದಾಲ್​ ಕಂಪನಿಗೆ ಸರ್ಕಾರ ಭೂಮಿ ನೀಡುವ ತೀರ್ಮಾನ ಮಾಡಿತ್ತು. ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಶಾಸಕ ಬೆಲ್ಲದ್ ಮಾತಾಡಿದ್ದರು. ಶಾಸಕ ಅರವಿಂದ ಬೆಲ್ಲದ್‌ ವೈಯಕ್ತಿಕವಾಗಿ ನನ್ನನ್ನು ನಿಂದನೆ ಮಾಡಿದ್ದರು. ತಮ್ಮ ತಪ್ಪಿನ ಅರಿವಾಗಿ ಬೆಲ್ಲದ್​ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ ಬೆಲ್ಲದ್​ ಅವರ ಈ ನಡೆಯನ್ನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ. ಜೊತೆಗೆ ಅರವಿಂದ ಬೆಲ್ಲದ್​ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲಿ. ಬೇಸರವಾಗಲಿ ಯಾವುದು ಇಲ್ಲವೆಂಬುದನ್ನು ಈ ಮೂಲಕ ತಿಳಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.


ಬಾಯ್ತಪ್ಪಿನಿಂದ ಏಕವಚನ ಬಳಸಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ. ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ, ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ಚಾರಿತ್ರ್ಯಹನನ ಮಾಡುವಂತಹ ಪದಬಳಕೆ ಕೇಳಿದ್ದೇನೆ, ಎದುರಿಸಿದ್ದೇನೆ. ಮೊದಲ ಬಾರಿ ಶಾಸಕ ಬೆಲ್ಲದ್ ಬೇಸರ ವ್ಯಕ್ತಪಡಿಸಿ ಕ್ಷಮೆ ಕೇಳಿದ್ದಾರೆ. ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ ಪತ್ರದ ಮೂಲಕ ಕ್ಷಮೆ ಕೇಳಿದ್ದಾರೆ. ಈ ಮೂಲಕ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ ಎಂದು ಬೆಲ್ಲದ್ ನಡೆಯನ್ನು ಶ್ಲಾಘಿಸಿದರು.

ಅರವಿಂದ ತಂದೆ ಚಂದ್ರಕಾಂತ ಬೆಲ್ಲದ್ ನನ್ನ ದೀರ್ಘಕಾಲದ ಸ್ನೇಹಿತರು. ಚಂದ್ರಕಾಂತ ಬೆಲ್ಲದ್ ಸಜ್ಜನ ರಾಜಕಾರಣಿ. ಅವರ ಸಜ್ಜನಿಕೆಯ ಪರಂಪರೆ ಮುಂದುವರಿಸಲಿ ಎಂದು ಹಾರೈಸುತ್ತೇನೆ. ಬೆಲ್ಲದ್‌ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತ. ‘ಪಶ್ಚಾತ್ತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ’ ಎಂಬ ಮಾತು. ಈ ಸಂದರ್ಭಕ್ಕೆ ಹೆಚ್ಚು ಅರ್ಥಪೂರ್ಣವೆನಿಸುತ್ತಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:24 pm, Tue, 3 September 24

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us