ಕಾನೂನು ಉಲ್ಲಂಘಿಸುವವರಿಗೆ ರಕ್ಷಣೆ ನೀಡಲು ಸದಾ ‘ಸಿದ್ದ’ ಸರ್ಕಾರ: ಬಿಜೆಪಿ ವಾಗ್ದಾಳಿ

ಮಂಡ್ಯ ನಾಗಮಂಗಲ ಗಲಭೆ ನಂತರದ ಬೆಳವಣಿಗೆ ಸಂಬಂಧ ಮಾಹಿತಿ ತಿರುಚಿದ ಆರೋಪದಲ್ಲಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮೇಲೆ ಎಫ್​ಐಆರ್ ದಾಖಲಾಗಿದೆ. ಈ ವಿಚಾರವಾಗಿ ಮತ್ತು ದಾವಣೆಗೆರೆಯಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಕಲ್ಲು ತೂರಾಟ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಕಾನೂನು ಉಲ್ಲಂಘಿಸುವವರಿಗೆ ರಕ್ಷಣೆ ನೀಡಲು ಸದಾ ‘ಸಿದ್ದ’ ಸರ್ಕಾರ: ಬಿಜೆಪಿ ವಾಗ್ದಾಳಿ
ಪ್ರತಿಪಕ್ಷ ನಾಯಕ ಆರ್ ಅಶೋಕ
Follow us
|

Updated on: Sep 20, 2024 | 2:26 PM

ಬೆಂಗಳೂರು, ಸೆಪ್ಟೆಂಬರ್ 20: ಗಣೇಶೋತ್ಸವ ಮೆರವಣಿಗೆ ವೇಳೆ ದಾವಣಗೆರೆಯಲ್ಲಿ ಕಲ್ಲು ತೂರಾಟ ನಡೆದಿರುವುದು ಮತ್ತು ಮಂಡ್ಯದ ನಾಗಮಂಗಲ ಘಟನೆ ಬಗ್ಗೆ ಟ್ವೀಟ್ ಮಾಡಿದ ಬಿಜೆಪಿ ನಾಯಕರಾದ ಆರ್ ಅಶೋಕ್ ಮತ್ತು ಶೋಭಾ ಕರಂದ್ಲಾಜೆ ವಿರುದ್ಧ ಎಫ್​ಐಆರ್ ದಾಖಲಿಸಿರುವ ವಿಚಾರವಾಗಿ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಕಾನೂನು ಉಲ್ಲಂಘಿಸುವವರಿಗೆ ರಕ್ಷಣೆ ನೀಡಲು ಸದಾ ‘ಸಿದ್ದ’ ಸರ್ಕಾರ ಎಂದು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ವ್ಯಂಗ್ಯಚಿತ್ರವೊಂದನ್ನು ಪ್ರಕಟಿಸಿ ಟೀಕಿಸಿದೆ.

‘‘ನಾಗಮಂಗಲದಲ್ಲಿ ಬಿಜೆಪಿ ನಾಯಕರ ವಿರುದ್ಧ ಎಫ್​​ಐಆರ್. ನಾವು ಬೆಂಕಿ ಹಚ್ಚಿದವರನ್ನು ಬಂಧಿಸಲ್ಲ, ಅದನ್ನು ವಿರೋಧಿಸುವವರನ್ನು ಮಾತ್ರ ಬಂಧಿಸೋದು’’ ಎಂದು ಸಿಎಂ ಸಿದ್ದರಾಮಯ್ಯ ಹೇಳುವ ಬರಹದೊಂದಿಗೆ ವ್ಯಂಗ್ಯಚಿತ್ರ ರಚಿಸಲಾಗಿದೆ.

ಬಿಜೆಪಿ ಎಕ್ಸ್ ಸಂದೇಶ

ಸಿದ್ದರಾಮಯ್ಯ ಸರ್ಕಾರದ ಒಲೈಕೆ ರಾಜಕೀಯದಿಂದ ರಾಜ್ಯದಲ್ಲಿ ಮತಾಂಧರ ಅಟ್ಟಹಾಸ ಮಿತಿ ಮೀರಿದ್ದು, ಹಿಂದೂ ಸಮುದಾಯಕ್ಕೆ ಸುರಕ್ಷತೆಯೇ ಇಲ್ಲದಂತಾಗಿದೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ಮತಾಂಧರು ವಿಕೃತಿ ತೋರ್ಪಡಿಸಿದ ಬಳಿಕ ಇದೀಗ ದಾವಣಗೆರೆಯ ಬೇತೂರು ಗಣೇಶ ವಿಸರ್ಜನೆಯ ವೇಳೆಯಲ್ಲೂ ಕಲ್ಲು ತೂರಾಟ ನಡೆದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇಂತಹ ಗಲಭೆಗಳು ಹಲವಾರು ಬಾರಿ ನಡೆಯುತ್ತಿದ್ದು, ರಾಜ್ಯದಲ್ಲಿ ಮತಾಂಧ ಶಕ್ತಿಗಳಿಗೆ ಗಲಭೆ ನಡೆಸಲು ಸರ್ಕಾರವೇ ಕುಮ್ಮಕ್ಕು ನೀಡಿದಂತಿದೆ ಎಂದು ಬಿಜೆಪಿ ಟೀಕಿಸಿದೆ.

ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್‌ ಸರ್ಕಾರ ವೋಟ್‌ ಬ್ಯಾಂಕ್‌ ದುರಾಸೆಗೊಳಗಾಗದೆ ಮತಾಂಧ ಶಕ್ತಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಗೃಹ ಸಚಿವರಾದ ಜಿ. ಪರಮೇಶ್ವರ ಅವರೇ, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದ್ದುಬಸ್ತಿನಲ್ಲಿದೆ ಎಂಬುದನ್ನು ಖಾತರಿಪಡಿಸಿ, ಇಲ್ಲವೇ ಗೃಹ ಸಚಿವರ ಜವಾಬ್ದಾರಿಗೆ ರಾಜೀನಾಮೆ ನೀಡಿ ಎಂದು ಬಿಜೆಪಿ ಆಗ್ರಹಿಸಿದೆ.

ಹಗರಣಗಳ ಚರ್ಚೆಯ ದಿಕ್ಕು ತಪ್ಪಿಸಲು ಕಾಂಗ್ರೆಸ್ ಯತ್ನ: ವಿಜಯೇಂದ್ರ

ಕಾಂಗ್ರೆಸ್ ಸರ್ಕಾರ ತನ್ನ ಭ್ರಷ್ಟ ಹಗರಣಗಳ ಗಂಭೀರ ಚರ್ಚೆಯ ದಿಕ್ಕು ತಪ್ಪಿಸಿ ಜನರ ಗಮನ ಬೇರೆಡೆ ಸೆಳೆಯಲು ಕೆಲವು ಘಟನೆಗಳನ್ನು ಸೃಷ್ಟಿಮಾಡುತ್ತಿದೆ. ಅದರ ಒಂದು ಭಾಗವಾಗಿ ಹಿಂದೂ ಸಮುದಾಯದ ಭಾವನೆ ಕೆರಳಿಸಲು ಗಣೇಶೋತ್ಸವ ಮೆರವಣಿಗೆಗಳ ಮೇಲೆ ದಾಳಿ ನಡೆಸುವ ಮತಾಂಧ ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡುತ್ತಿರುವ ಶಂಕೆ ವ್ಯಕ್ತವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ.

ಈ ಹಿನ್ನಲೆಯಲ್ಲಿ ಗಣೇಶೋತ್ಸವಗಳ ಮೇಲೆ ಕ್ಷುದ್ರ ಶಕ್ತಿಗಳ ಅಟ್ಟಹಾಸ ನಿರಂತರವಾಗಿ ಸಾಗಿದೆ. ನಾಗಮಂಗಲದ ಘಟನೆ ಮಾಸುವ ಮುನ್ನವೇ ತಡರಾತ್ರಿ ದಾವಣಗೆರೆಯಲ್ಲಿ ಗಣೇಶೋತ್ಸವ ಮೆರವಣಿಗೆಯ ಮೇಲೆ ದಾಳಿ ನಡೆದಿರುವ ಘಟನೆ ಗಮನಿಸಿದರೆ ಕಾನೂನು ಸುವ್ಯವಸ್ಥೆಯ ವಿಫಲತೆ ಹಾಗೂ ಗೃಹ ಇಲಾಖೆಯ ಸಂಪೂರ್ಣ ನಿಷ್ಕ್ರಿಯತೆ ಎದ್ದುಕಾಣುತ್ತದೆ, ಹಿಂದೂ ಉತ್ಸವ ಹಾಗೂ ಆಚರಣೆಗಳ ಬಗ್ಗೆ ಕಾಂಗ್ರೆಸ್ ಸರ್ಕಾರ ತಾಳಿರುವ ಉಪೇಕ್ಷೆ ಧೋರಣೆಯನ್ನು ಸರಣೀ ಘಟನೆಗಳು ಸಾಕ್ಷಿಕರಿಸುತ್ತಿವೆ. ಘಟನೆಯ ವೀಡಿಯೋ ತುಣುಕನ್ನು ಸೂಕ್ಷ್ಮವಾಗಿ ಗಮನಿಸಿದರೆ ಮತಾಂಧ ಕಿಡಿಗೇಡಿಗಳು ಕಾಂಗ್ರೆಸ್ ಸರ್ಕಾರ ತಮ್ಮ ರಕ್ಷಣೆಗಿದೆ ಎಂಬ ನಂಬಿಕೆಯಲ್ಲೇ ದಾಳಿ ನಡೆಸುತ್ತಿರುವ ಪರಿ ಗೋಚರವಾಗುತ್ತದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ

ದಾವಣಗೆರೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ದುರ್ಘಟನೆಗೆ ಕಾರಣರಾದ ಮತಾಂಧರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಶಿಕ್ಷೆಗೆ ಒಳಪಡಿಸಬೇಕು. ಅಲ್ಲದೇ ನಾಗಮಂಗಲದಂತೆ ಅಮಾಯಕ ಹಿಂದೂ ಸಮುದಾಯಕ್ಕೆ ತೊಂದರೆ ನೀಡಿದರೆ ಬಿಜೆಪಿ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಲಿದೆ. ಪುಂಡ-ಪೋಕರಿಗಳ, ವಿಧ್ವಂಸಕ ಮನಸ್ಥಿತಿಯ ದೇಶ ದ್ರೋಹಿಗಳ ತಾಣವಾಗುತ್ತಿರುವ ರಾಜ್ಯದಲ್ಲಿ ನಾಗರಿಕ ಸಮಾಜ ನೆಮ್ಮದಿಯಾಗಿ ಬದುಕಲು ಸಾಧ್ಯವಿಲ್ಲದ ಆತಂಕದ ನೆಲೆ ಸೃಷ್ಟಿಯಾಗುತ್ತಿದೆ. ಸಮಾಜಕ್ಕೆ ಸುರಕ್ಷತೆಯ ವಾತಾವರಣ ನಿರ್ಮಿಸುವ ಬದ್ಧತೆ ಹಾಗೂ ಸಾಮರ್ಥ್ಯ ಕಾಂಗ್ರೆಸ್ ಸರ್ಕಾರಕ್ಕೆ ಇದ್ದಂತಿಲ್ಲ, ಈ ಸರ್ಕಾರ ಆಡಳಿತ ಬಿಟ್ಟು ತೊಲಗುವುದೇ ಸದ್ಯಕ್ಕೆ ಕಾಣುತ್ತಿರುವ ಪರಿಹಾರ ಎಂದು ಅವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ